ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ನಿರ್ಣಯವನ್ನು ಮಹಾನಗರ ಪಾಲಿಕೆ ಅಂಗೀಕರಿಸಬೇಕೆಂದು ಆಗ್ರಹಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಪಾಲಿಕೆಗೆ ಮುತ್ತಿಗೆ ಹಾಕಲು ಯತ್ನಿಸಿದ ನೂರಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

 ಬೆಳಗಾವಿ (ಮೇ.27): ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ನಿರ್ಣಯವನ್ನು ಬೆಳಗಾವಿ ಮಹಾನಗರ ಪಾಲಿಕೆ ಅಂಗೀಕರಿಸಬೇಕು ಎಂದು ಆಗ್ರಹಿಸಿ ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡಪರ ಸಂಘಟನೆಗಳ ನೂರಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

Add Asianetnews Kannada as a Preferred SourcegooglePreferred

ಕನ್ನಡಪರ ಹೋರಾಟಗಾರರಾದ ವಾಟಾಳ್ ನಾಗರಾಜ್, ಅಶೋಕ ಚಂದರಗಿ ನೇತೃತ್ವದಲ್ಲಿ ಮಂಗಳವಾರ ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ನೂರಾರು ಜನರು ಭಾಗವಹಿಸಿದ್ದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಪಾಲಿಕೆ ಕಚೇರಿಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಜಿಲ್ಲಾಧಿಕಾರಿ ಕಚೇರಿ ಆವರಣದ ಪುನರ್‌ ಪ್ರತಿಷ್ಠಾಪಿತ ಹಲ್ಮಿಡಿ ಶಾಸನಕ್ಕೆ ಪೂಜೆ ಸಲ್ಲಿಸಿದ ಪ್ರತಿಭಟನಾಕಾರರು ಮೆರವಣಿಗೆಯ ಮೂಲಕ ಪಾಲಿಕೆ ಕಚೇರಿಯತ್ತ ತೆರಳಲು ಮುಂದಾದರು. ಈ ವೇಳೆ ಪೊಲೀಸರು ಅವರನ್ನು ತಡೆದಿದ್ದಕ್ಕೆ ಕೆಲಕಾಲ ಉದ್ವಿಗ್ನ ವಾತಾವರಣ ಉಂಟಾಯಿತು. ಪ್ರತಿಭಟನಾಕಾರರು, ‘ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ, ಮಹಾಜನ ವರದಿಯೇ ಅಂತಿಮ, ಕನ್ನಡಿಗರ ಭಾವನೆಗಳಿಗೆ ಗೌರವ ನೀಡಿ’ ಎಂಬ ಘೋಷಣೆಗಳನ್ನು ಕೂಗಿದರು. ಹಲವರು ರಸ್ತೆಯಲ್ಲೇ ಮಲಗಿ ಆಕ್ರೋಶ ವ್ಯಕ್ತಪಡಿಸಿದರು.

ಅಖಂಡ ಕರ್ನಾಟಕ ಬಂದ್‌ ಎಚ್ಚರಿಕೆ:

ಬೆಳಗಾವಿ ಮಹಾನಗರ ಪಾಲಿಕೆ ಯಾವ ನೆಲದಲ್ಲಿದೆ ಎಂಬುದನ್ನು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಅರ್ಥಮಾಡಿಕೊಳ್ಳಬೇಕು. ಅದು ಕರ್ನಾಟಕದ ಅವಿಭಾಜ್ಯ ಅಂಗವಾಗಿದ್ದು, ಪಾಲಿಕೆಯಲ್ಲಿ ಅಂಗೀಕರಿಸಬೇಕು. ಒಂದು ವಾರದೊಳಗೆ ನಿರ್ಣಯ ಕೈಗೊಳ್ಳದಿದ್ದರೆ ಬೆಳಗಾವಿಯಲ್ಲಿ ಕಂಡು ಕೇಳರಿಯದ ರೀತಿ ಹೋರಾಟ ರೂಪುಗೊಳ್ಳಲಿದೆ. ಜೂ.4ರಂದು ಬೆಂಗಳೂರಿನಲ್ಲಿ ರಾಜ್ಯದ ಎಲ್ಲ ಕನ್ನಡಪರ ಸಂಘಟನೆಗಳ ಮುಖಂಡರ ಸಭೆ ಕರೆದು ಹೋರಾಟದ ರೂಪುರೇಷೆ ಅಂತಿಮಗೊಳಿಸಲಾಗುವುದು ಎಂದು ವಾಟಾಳ್‌ ಎಚ್ಚರಿಕೆ ನೀಡಿದ್ದಾರೆ.