ಬೆಳಗಾವಿಯ ಚವ್ಹಾಟಗಲ್ಲಿಯಲ್ಲಿ ಫ್ರಿಡ್ಜ್ ಸ್ಫೋಟಗೊಂಡು ನಾಲ್ವರು ಮೃತಪಟ್ಟ ಘಟನಾ ಸ್ಥಳಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ ಜಿಲ್ಲೆಯಲ್ಲಿ ವಸತಿಹೀನರಿಗೆ 50 ಸಾವಿರ ನಿವೇಶನ ನೀಡುವ ಯೋಜನೆಯ ಕುರಿತು ಅವರು ಮಹತ್ವದ ಭರವಸೆ ನೀಡಿದರು.
ಬೆಳಗಾವಿ: ಜಿಲ್ಲೆಗೆ 50 ಸಾವಿರ ನಿವೇಶನಗಳನ್ನು ನೀಡುವ ಯೋಜನೆ ರೂಪಿಸಲಾಗುತ್ತಿದೆ. ಸರ್ಕಾರ ಮನೆ ನಿರ್ಮಿಸಿಕೊಟ್ಟರೂ ಇಲ್ಲಿನ ಜನರು ಬೇರೆಡೆ ತೆರಳಿ ವಾಸಿಸಲು ಹಿಂದೇಟು ಹಾಕುತ್ತಾರೆ. ಹೀಗಾಗಿ ಮನೆ ಇಲ್ಲದವರಿಗೆ ಅನುಕೂಲವಾಗುವ ರೀತಿಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ
ನಗರದ ಚವ್ಹಾಟಗಲ್ಲಿಯ ಮನೆಯಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚವ್ಹಾಟಗಲ್ಲಿಯಲ್ಲಿ ಸಂಭವಿಸಿದ ದುರಂತದ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಲಾಗುವುದು. ಘಟನೆಯಲ್ಲಿ ಸಂಭವಿಸಿದ ಜೀವಹಾನಿ, ಗಾಯಗೊಂಡವರಿಗೆ ನೀಡಲಾಗುತ್ತಿರುವ ಚಿಕಿತ್ಸೆ ಹಾಗೂ ಪರಿಹಾರದ ಕುರಿತು ಚರ್ಚಿಸಲಾಗುವುದು. ಅಲ್ಲದೆ, ಘಟನೆಗೆ ನಿಖರ ಕಾರಣವೇನು ಮತ್ತು ಇದಕ್ಕೆ ಯಾರು ಹೊಣೆ ಎಂಬುವುದರ ಕುರಿತು ವರದಿ ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.
ಕುಟುಂಬದ ಸದಸ್ಯರೊಂದಿಗೆ ಮಾತುಕತೆ
ಚವ್ಹಾಟಗಲ್ಲಿಗೆ ಆಗಮಿಸಿದ ಸಚಿವರು ದುರಂತದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು. ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಇದನ್ನೂ ಓದಿ: ಏರ್ಪೋರ್ಟ್ ಸಮೀಪದ 8 ಕೋಟಿ ಮೌಲ್ಯದ 1.80 ಎಕ್ರೆ ಭೂಮಿಯನ್ನು ದಾನ ಮಾಡಿದ ಅಲಿ ಕುಟುಂಬ
ಈ ಸಂದರ್ಭದಲ್ಲಿ ಶಾಸಕ ಆಸೀಫ್ ಸೇಠ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಂ, ಮೇಯರ್ ಪ್ರೀತಿ ಕಾಮಕರ್ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: ಕುಂದಗೋಳ: ಬಾಗಿಲಲ್ಲಿ ಯಾರೋ ತಂದಿಟ್ಟ ಗಣೇಶನನ್ನು ಮನೆಯಲ್ಲಿ ಪ್ರತಿಷ್ಠಾಪಿಸಿದ ಮುಸ್ಲಿಂ ಕುಟುಂಬ


