ಚನ್ನಪಟ್ಟಣದಿಂದ ಬೆಂಗಳೂರಿಗೆ ಬರುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಗೆ ಅಶ್ಲೀಲ ಪದಗಳಿಂದ ನಿಂದಿಸಿ, ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ನಿರ್ವಾಹಕ ಕಾಂತರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಬೆಂಗಳೂರು (ಫೆ.21): ಮಹಿಳಾ ಪ್ರಯಾಣಿಕರೊಬ್ಬರಿಗೆ ಅಶ್ಲೀಲ ಪದಗಳಿಂದ ನಿಂದಿಸಿ, ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (BMTC) ನಿರ್ವಾಹಕರೊಬ್ಬರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಚನ್ನಪಟ್ಟಣದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್‌ನಲ್ಲಿ ಈ ಅಹಿತಕರ ಘಟನೆ ನಡೆದಿದ್ದು, ಸಾರಿಗೆ ಸಂಸ್ಥೆಯು ಶಿಸ್ತು ಕ್ರಮ ಜರುಗಿಸಿದೆ.

Add Asianetnews Kannada as a Preferred SourcegooglePreferred

ಏನಿದು ಘಟನೆ?

ಬಿಎಂಟಿಸಿ ನಿರ್ವಾಹಕ ಕಾಂತರಾಜು ಎಂಬುವವರೇ ಅಮಾನತುಗೊಂಡ ವ್ಯಕ್ತಿ. ಕಳೆದ ದಿನವಷ್ಟೇ ಚನ್ನಪಟ್ಟಣದಿಂದ ಬೆಂಗಳೂರಿಗೆ ಬರುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದನ್ನು ಕಂಡು ಕಿರಿಕಿರಿಗೊಂಡ ಕಾಂತರಾಜು, ಮಹಿಳೆಯರ ವಿರುದ್ಧ ಮತ್ತು ಉಚಿತ ಪ್ರಯಾಣದ ಸೌಲಭ್ಯ ನೀಡಿದ ಸರ್ಕಾರದ ವಿರುದ್ಧ ಬಾಯಿಗೆ ಬಂದಂತೆ ಮಾತನಾಡಲು ಆರಂಭಿಸಿದ್ದಾರೆ. ಬಸ್‌ನಲ್ಲಿದ್ದ ಮಹಿಳೆಯೊಬ್ಬರು ಇದನ್ನು ಪ್ರಶ್ನಿಸಿದಾಗ, ಅವರಿಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ. ಬಸ್‌ನಲ್ಲಿ ಹೆಚ್ಚಿನ ಮಹಿಳೆಯರು ಇರುವುದನ್ನು ಕಂಡು ಸಿಟ್ಟಿಗೆದ್ದಿದ್ದ ಕಂಡಕ್ಟರ್, ಸಾರ್ವಜನಿಕವಾಗಿ ಅತ್ಯಂತ ಕೀಳುಮಟ್ಟದ ಪದಗಳನ್ನು ಬಳಸಿ ವಾಗ್ವಾದ ನಡೆಸಿದ್ದಾರೆ.

ಪೊಲೀಸ್ ದೂರು ಮತ್ತು ಕ್ರಮ:

ಇದರಿಂದ ನೊಂದ ಮಹಿಳೆ ನಿರ್ವಾಹಕನ ದೌರ್ಜನ್ಯದ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ವಿಷಯದ ತೀವ್ರತೆಯನ್ನು ಅರಿತ ಬಿಎಂಟಿಸಿ ಆಡಳಿತ ಮಂಡಳಿಯು ತಕ್ಷಣವೇ ತನಿಖೆ ನಡೆಸಿ, ಪ್ರಾಥಮಿಕ ವರದಿಯ ಆಧಾರದ ಮೇಲೆ ಕಾಂತರಾಜು ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ. 'ಮಹಿಳೆಯರ ಬಗ್ಗೆ ಅಸಭ್ಯವಾಗಿ ವರ್ತಿಸುವುದು ಮತ್ತು ಸಂಸ್ಥೆಯ ಘನತೆಗೆ ಧಕ್ಕೆ ತರುವಂತಹ ವರ್ತನೆಯನ್ನು ಸಹಿಸುವುದಿಲ್ಲ' ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಶಕ್ತಿ ಯೋಜನೆಯ ನಂತರ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಾಗಿದ್ದು, ಕೆಲವು ಸಿಬ್ಬಂದಿಗಳು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿರುವ ಪ್ರಕರಣಗಳು ಆಗಾಗ ವರದಿಯಾಗುತ್ತಿವೆ. ಆದರೆ, ಮಹಿಳಾ ಪ್ರಯಾಣಿಕರಿಗೆ ಸುರಕ್ಷಿತ ಮತ್ತು ಗೌರವಯುತ ಪ್ರಯಾಣ ಒದಗಿಸಬೇಕಾದ ನಿರ್ವಾಹಕರೇ ಈ ರೀತಿ ವರ್ತಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.