ಬೆಂಗಳೂರಿನಲ್ಲಿ ಟ್ಯೂಷನ್‌ಗೆ ತೆರಳಿದ್ದ 12 ವರ್ಷದ ಬಾಲಕನನ್ನು 5 ಲಕ್ಷ ರೂಪಾಯಿ ಹಣಕ್ಕಾಗಿ ಅಪಹರಿಸಿ ಕೊಲೆ ಮಾಡಲಾಗಿದೆ. ಪೊಲೀಸರಿಗೆ ದೂರು ನೀಡಿದ ವಿಚಾರ ತಿಳಿದ ಕಿಡ್ನಾಪರ್‌ಗಳು ಬಾಲಕನನ್ನು ಕೊಂದು ಪೆಟ್ರೋಲ್ ಸುರಿದು ಸುಟ್ಟು ಹಾಕಿ, ಅತ್ಯಂತ ಅಮಾನುಷ ಘಟನೆಗೆ ಸಾಕ್ಷಿ ಆಗಿದ್ದಾರೆ.

ಬೆಂಗಳೂರು (ಜು.31): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಅಮಾನುಷವಾದ ಘಟನೆ ನಡೆದಿದೆ. ಕೇವಲ 5 ಲಕ್ಷ ರೂ. ಹಣಕ್ಕಾಗಿ ಸಂಜೆ ಟ್ಯೂಷನ್‌ಗೆ ಹೋಗಿದ್ದ ಮಗನನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಮಗುವಿನ ತಂದೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ವಿಚಾರ ಕಿಡ್ನಾಪರ್ಸ್‌ಗೆ ಗೊತ್ತಾದ ಕೂಡಲೇ, ಆ ಬಾಲಕನನ್ನು ರಸ್ತೆ ಬಳಿಯೇ ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ಅತ್ಯಂತ ಅಮಾನವೀಯ ಘಟನೆ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಂಗಳೂರಿನಲ್ಲಿ ಟ್ಯೂಷನ್ ಹೋಗಿ ಮನೆಗೆ ಮರಳುತ್ತಿದ್ದ ಬಾಲಕನೊಬ್ಬನನ್ನು ಅಪಹರಿಸಿ, ಬಳಿಕ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬನ್ನೇರುಘಟ್ಟ ಸಮೀಪ ಬೆಳಕಿಗೆ ಬಂದಿದೆ. ನಿನ್ನೆ ರಾತ್ರಿ ಅರಕೆರೆ ಪ್ರದೇಶದ ಶಾಂತಿನಿಕೇತನ ಬಡಾವಣೆಯಲ್ಲಿ ನೆಲೆಸಿರುವ ಕಾಲೇಜಿನ ಪ್ರೊಫೆಸರ್ ಕುಟುಂಬದ 7 ತರಗತಿಯ ವಿದ್ಯಾರ್ಥಿ ನಿಶ್ಚಿತ್ (12) ಎಂಬಾತನು ಟ್ಯೂಷನ್ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಕೆಲವು ವ್ಯಕ್ತಿಗಳು ಬಾಲಕನನ್ನು ಅಪಹರಿಸಿದ್ದಾರೆ.

5 ಲಕ್ಷ ರೂಪಾಯಿ ಬೇಡಿಕೆಗೆ ಫೋನ್ ಕರೆ:

ನಿಶ್ಚಿತ್ ಕಿಡ್ನಾಪ್ ಆಗುತ್ತಿದ್ದಂತೆ, ಕೆಲವೇ ಹೊತ್ತಿನಲ್ಲಿ ಪೋಷಕರಿಗೆ ಅಪರಿಚಿತ ಸಂಖ್ಯೆಗಳಿಂದ ಕರೆ ಬಂದಿದೆ. ಆಗ ಕಿಡ್ನಾಪರ್ಸ್ ನಿಮಗೆ ನಿಮ್ಮ ಮಗ ಬೇಕಿದ್ದರೆ ಕೂಡಲೇ 5 ಲಕ್ಷ ರೂಪಾಯಿ ಹಣವನ್ನು ತೆಗೆದುಕೊಂಡು ಬರುವಂತೆ ಬೇಡಿಕೆ ಇಟ್ಟಿದ್ದಾರೆ. ಜೊತೆಗೆ ಪೊಲೀಸರಿಗೆ ಮಾಹಿತಿ ನೀಡದಂತೆಯೂ ಬೆದರಿಕೆ ಹಾಕಿದ್ದಾರೆ. ಆದರೆ, ಕಾಲೇಜು ಪ್ರೊಫೆಸರ್ ತನ್ನ ಮಗನನ್ನು ಉಳಿಸಿಕೊಡುವಂತೆ ಹುಳಿಮಾವು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರು ದಾಖಲಿಸಿ ಶೋಧ ಕಾರ್ಯಾಚರಣೆ:

ದೂರು ದಾಖಲಾಗುತ್ತಿದ್ದಂತೆಯೇ ಹುಳಿಮಾವು ಪೊಲೀಸರು ಸಿಸಿಟಿವಿ ಫುಟೇಜ್, ಮೊಬೈಲ್ ಲೊಕೇಶನ್ ಟ್ರಾಕಿಂಗ್ ಮೂಲಕ ತನಿಖೆಗೆ ಚುರುಕುಗೊಳಿಸಿದ್ದಾರೆ. ಬಾಲಕನನ್ನು ಹುಡುಕುವುದಕ್ಕೆ, ನಿರಂತರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು. ಇತ್ತ ಬಾಲಕನ ಪೋಷಕರು 5 ಲಕ್ಷ ರೂ. ಹಣವನ್ನು ಸಿದ್ಧಪಡಿಸಿ ಕಿಡ್ನಾಪರ್ಸ್‌ಗೆ ಕೊಟ್ಟು ಮಗನನ್ನು ಕರೆದುಕೊಂಡು ಬರಲು ಸಿದ್ಧವಾಗಿದ್ದರು. ಆದರೆ, ಪೊಲೀಸರಿಗೆ ಕಿಡ್ನಾಪ್ ಮಾಡಿದ್ದ ಬಗ್ಗೆ ದೂರು ಕೊಟ್ಟ ವಿಚಾರ ಕಿಡ್ನಾಪರ್ಸ್‌ಗೆ ತಿಳಿದ ಕೂಡಲೇ ತಾವು ಸಿಕ್ಕಿಬೀಳುವ ಭಯದಿಂದ ಬಾಲಕನನ್ನು ಕೈಕಟ್ಟಿ ಥಳಿಸಿ ಕೊಲೆ ಮಾಡಿ, ರಸ್ತೆ ಬದಿಯ ಕಲ್ಲು ಬಂಡೆಯ ಮೇಲೆ ಅಲ್ಪಸ್ವಲ್ಪ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಪರಾರಿ ಆಗಿದ್ದಾರೆ.

ಮೃತದೇಹ ಪತ್ತೆ, ಶಂಕೆಗೂ ಮೀರಿದ ಕ್ರೂರತೆ:

ಪೊಲೀಸರು ಕಿಡ್ನಾಪರ್ಸ್‌ಗಳ ಫೋನ್ ಟ್ರೇಸ್ ಮಾಡುತ್ತಾ ಲೊಕೇಷನ್ನಿಗೆ ಹೋದ ವೇಳೆ ಬನ್ನೇರುಘಟ್ಟದ ಕಗ್ಗಲೀಪುರ ರಸ್ತೆಯಲ್ಲಿರುವ ನಿರ್ಜನ ಪ್ರದೇಶದಲ್ಲಿ ನಿಶ್ಚಿತ್‌ನ ಶವ ಪತ್ತೆಯಾಗಿದೆ. ಬಾಲಕನ ಮೇಲೆ ಬರ್ಬರ ಹಲ್ಲೆ ನಡೆಸಿದ ಪರಿಣಾಮವಾಗಿ ಆತನು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಜೊತೆಗೆ, ಆತನ ದೇಹಕ್ಕೆ ಬೆಂಕಿ ಹಚ್ಚಿದ್ದು, ಅರೆಬರೆ ಬೆಂದು ಹೋಗಿದೆ.

ಉನ್ನತ ಪೊಲೀಸ್ ಅಧಿಕಾರಿಗಳ ಭೇಟಿ:

ಘಟನೆ ತಿಳಿದು ಸ್ಥಳಕ್ಕೆ ಇಲೆಕ್ಟ್ರಾನಿಕ್ ಸಿಟಿ ಡಿಸಿಪಿ ನಾರಾಯಣ್, ಹಾಗೂ ಬೆಂಗಳೂರು ಗ್ರಾಮಾಂತರ ಎಸ್‌ಪಿ ಸಿ.ಕೆ. ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಲಕನ ಪತ್ತೆಯಾದ ಸ್ಥಳದಲ್ಲಿ ಕ್ರೋರವಾಗಿ ಕೊಲೆ ಮಾಡಿದ ಗುರುತು ಪತ್ತೆಯಾಗಿದೆ. ಹುಳಿಮಾವು ಪೊಲೀಸರು ಈಗಾಗಲೇ ಅಪಹರಣ ಹಾಗೂ ಕೊಲೆ ಪ್ರಕರಣವನ್ನು ನೊಂದಾಯಿಸಿಕೊಂಡು, ಅಪರಾಧಿಗಳನ್ನು ಹುಡುಕುವ ಕಾರ್ಯವನ್ನು ಚುರುಕುಗೊಳಿಸಿದ್ದಾರೆ.

ಕೇವಲ 5 ಲಕ್ಷ ರೂ. ಹಣಕ್ಕಾಗಿ ಇಂತಹ ಅಮಾನವೀಯ ಘಟನೆಗೆ ಹೊಣೆ ಯಾರು? ಬೆಂಗಳೂರಿನಲ್ಲಿ ಶಾಲಾ ಮಕ್ಕಳ ಸುರಕ್ಷತೆ, ಅಪರಾಧ ನಿಯಂತ್ರಣ ಕುರಿತಂತೆ ಇದೀಗ ಸಾರ್ವಜನಿಕರಿಂದ ಹಲವು ಪ್ರಶ್ನೆಗಳು ಕೇಳಿಬರುತ್ತಿವೆ.