ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯ ಎಲ್ಲ ವಾಣಿಜ್ಯ ಮಳಿಗೆಗಳು ಶೇ.60 ದೊಡ್ಡದಾದ ಕನ್ನ ಡ ನಾಮಫಲಕ ಅಳವಡಿಸಬೇಕು. ಇಲ್ಲದಿದ್ದರೆ ಪರವಾನಗಿ ರದ್ದು ಮಾಡಲಾಗುತ್ತದೆ.

ಬೆಂಗಳೂರು (ಜ.04): ರಾಜ್ಯ ರಾಜಧಾನಿ ಬೆಂಗಳೂರಿನ ಸ್ಥಳೀಯ ಆಡಳಿತ ಸಂಸ್ಥೆ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲ ವಾಣಿಜ್ಯ ಮಳಿಗೆಗಳು (ಶಾಪಿಂಗ್ ಮಾಲ್, ಅಂಗಡಿ ಮುಂಗಟ್ಟು, ಕಾರ್ಖಾನೆ, ಆಸ್ಪತ್ರೆ ಇನ್ನಿತರ ವ್ಯವಹಾರಿಕ ಕಟ್ಟಡ) ಶೇ.60ರಷ್ಟು ದೊಡ್ದದಾಗಿ ಕನ್ನಡ ಭಾಷೆ ಇರುವಂತೆ ನಾಮಫಲಕ ಅಳವಡಿಕೆ ಮಾಡಬೇಕು. ಇಲ್ಲದಿದ್ದರೆ ಬಿಬಿಎಂಪಿ ವತಿಯಿಂದ ಪಡೆದ ಪರವಾನಗಿಯನ್ನು ರದ್ದು ಮಾಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

Add Asianetnews Kannada as a Preferred SourcegooglePreferred

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಪಾಲಿಕೆಯ 8 ವಲಯಗಳ ಆಯುಕ್ತರು ಹಾಗೂ ಇತರೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಬಳಸದೇ ಇರುವವರಿಗೆ ತಿಳುವಳಿಕೆ ಪತ್ರ ನೀಡಿ ಕೂಡಲೆ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಲಯ ಆಯುಕ್ತರಿಗೆ ಸೂಚನೆ ನೀಡಿದರು.

ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ್ರಿಗೆ ಇನ್ನೂ 4 ದಿನ ಜೈಲೇ ಗತಿ: ಇಲ್ಲಿದೆ ಅಸಲಿ ಕಾರಣ!

ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು. ನಗರದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬರುವ ವಾಣಿಜ್ಯ ಮಳಿಗೆಗಳು, ಅಂಗಡಿ ಮುಂಗಟ್ಟುಗಳು ಹಾಗೂ ಎಲ್ಲಾ ವಲಯದ ಉದ್ದಿಮೆಗಳನ್ನು ಜನವರಿ 15ರ ಒಳಗೆ ಸರ್ವೇ ಕಾರ್ಯ ಪೂರ್ಣಗೊಳಿಸಿ ಕನ್ನಡ ಭಾಷೆಯ ನಾಮಫಲಕ ಅಳವಡಿಸುವಂತೆ ತಿಳುವಳಿಕೆ ಪತ್ರ ನೀಡಬೇಕೆಂದು ಸೂಚಿಸಿದರು.

ಇನ್ನು ಸಮೀಕ್ಷೆ ನಡೆಸುವಾಗ ನಾಮಪಲಕದಲ್ಲಿ ಕನ್ನಡ ಬಳಕೆ ಮಾಡದಿದ್ದಲ್ಲಿ ಆಯಾ ಉದ್ದಿಮೆಗಳಿಗೆ ತಿಳುವಳಿಕೆ ಪತ್ರ ನೀಡಬೇಕು. ಉದ್ದಿಮೆ ಪರವಾನಗಿ ಇದ್ದರೆ ಯಾಕೇ ನಾವು ಉದ್ದಿಮೆ ಪರವಾನಗಿ ರದ್ದು ಮಾಡಬಾರದು ಎಂದು ನೋಟಿಸ್ ನೀಡಬೇಕು. ಒಂದು ವೇಳೆ ಉದ್ದಿಮೆ ಪರವಾನಗಿ ಮಾಡಿಸದ್ದಿದರೆ ಯಾಕೆ ನಾವು ನಿಮ್ಮ ಉದ್ದಿಮೆಯನ್ನು ಮುಚ್ಚಬಾರದೆಂದು ತಿಳುವಳಿಕೆ ಪತ್ರವನ್ನು ಜಾರಿಮಾಡಬೇಕು. ನಗರದಲ್ಲಿ ಎಲ್ಲಾ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಬಳಸಬೇಕು. ಆಯಾ ವಲಯ ವ್ಯಾಪ್ತಿಯಲ್ಲಿ ಯಾವುದೇ ಒತ್ತಡಕ್ಕೆ ಮಣಿಯದೆ ಕನ್ನಡ ಭಾಷೆಯನ್ನು ಬಳಸದ ಉದ್ದಿಮೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.

ಡ್ರೋನ್ ಪ್ರತಾಪ್ ಆಸ್ಪತ್ರೆಯಿಂದ ಡಿಶ್ಚಾರ್ಜ್‌: ಅಸಲಿ ಸತ್ಯವನ್ನು ಬಹಿರಂಗಪಡಿಸಿದ ಕುಂಬಳಗೋಡು ಪೊಲೀಸರು!

ಸಭೆಯಲ್ಲಿ ವಲಯ ಆಯುಕ್ತರಾದ ಇಬ್ರಾಹಿಂ ಮೈಗುರ್, ಪ್ರೀತಿ ಗೆಹ್ಲೋಟ್, ಎಲ್ಲಾ ವಲಯದ ಜಂಟಿ ಆಯುಕ್ತರು, ಉಪ ಆಯುಕ್ತರು(ಆಡಳಿತ), ಜಾಹೀರಾತು ವಿಭಾಗದ ಉಪ ಆಯುಕ್ತರು, ಮುಖ್ಯ ಆರೋಗ್ಯಾಧಿಕಾರಿ, ವಲಯ ಆರೋಗ್ಯಾಧಿಕಾರಿಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.