ಬೆಂಗಳೂರಿನಲ್ಲಿ ಕಟ್ಟಡದ ಖಾತೆ ಮಾಡಿಕೊಡಲು 3 ಲಕ್ಷ ರೂ. ಲಂಚ ಪಡೆಯುತ್ತಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ರೆವಿನ್ಯೂ ಇನ್ಸ್ಪೆಕ್ಟರ್ ವೆಂಕಟೇಶ್ ಮತ್ತು ಟ್ಯಾಕ್ಸ್ ಇನ್ಸ್ಪೆಕ್ಟರ್ ಶ್ರೀನಿವಾಸನನ್ನ ಬಂಧಿಸಲಾಗಿದೆ.
ಬೆಂಗಳೂರು (ಏ.02): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಹೊಸದಾಗಿ ರಚನೆಯಾಗಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಇಬ್ಬರು ಅಧಿಕಾರಿಗಳು ಕಟ್ಟಡದ ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 3 ಲಕ್ಷ ರೂಪಾಯಿ ಲಂಚದ ಹಣವನ್ನು ಸ್ವೀಕರಿಸುವಾಗ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಘಟನೆಯ ವಿವರ:
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರೆವಿನ್ಯೂ ಇನ್ಸ್ಪೆಕ್ಟರ್ (ಆರ್ಐ) ವೆಂಕಟೇಶ್ ಹಾಗೂ ಟ್ಯಾಕ್ಸ್ ಇನ್ಸ್ಪೆಕ್ಟರ್ ಶ್ರೀನಿವಾಸ್ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿಗಳು. ನ್ಯಾಮತುಲ್ಲಾ ಖಾನ್ ಎಂಬುವವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಈ ಟ್ರ್ಯಾಪ್ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ್ದಾರೆ. ದೂರುದಾರ ನ್ಯಾಮತುಲ್ಲಾ ಖಾನ್ ಅವರು ತಮ್ಮ ಕಟ್ಟಡದ ಖಾತೆ (Building Khata) ವರ್ಗಾವಣೆ ಅಥವಾ ಹೊಸ ಖಾತೆ ಮಾಡಿಕೊಡುವಂತೆ ಜಿಬಿಎ ಕಚೇರಿಗೆ ಅಲೆದಾಡುತ್ತಿದ್ದರು. ಆದರೆ, ಈ ಕೆಲಸ ಮಾಡಿಕೊಡಲು ರೆವಿನ್ಯೂ ಇನ್ಸ್ಪೆಕ್ಟರ್ ವೆಂಕಟೇಶ್ ಹಾಗೂ ಟ್ಯಾಕ್ಸ್ ಇನ್ಸ್ಪೆಕ್ಟರ್ ಶ್ರೀನಿವಾಸ್ ಅವರು ಬರೋಬ್ಬರಿ 3 ಲಕ್ಷ ರೂಪಾಯಿ ಲಂಚ ನೀಡುವಂತೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಲಂಚ ನೀಡಲು ಇಚ್ಛಿಸದ ದೂರುದಾರರು ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಲೋಕಾಯುಕ್ತ ಟ್ರ್ಯಾಪ್:
ದೂರಿನ ಅನ್ವಯ ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ಅವರ ನೇತೃತ್ವದ ತಂಡವು ಇಂದು ಮಧ್ಯಾಹ್ನ ಕಾರ್ಯಾಚರಣೆ ರೂಪಿಸಿತ್ತು. ದೂರುದಾರರಿಂದ ಟ್ಯಾಕ್ಸ್ ಇನ್ಸ್ಪೆಕ್ಟರ್ ಶ್ರೀನಿವಾಸ್ ಅವರು 3 ಲಕ್ಷ ರೂಪಾಯಿ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಹೊಂಚು ಹಾಕಿದ್ದ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಲಂಚದ ಹಣವನ್ನು ವಶಪಡಿಸಿಕೊಂಡಿರುವ ಪೊಲೀಸರು, ಶ್ರೀನಿವಾಸ್ ಅವರ ಕೈಗಳನ್ನು ಕೆಮಿಕಲ್ ದ್ರಾವಣದಲ್ಲಿ ತೊಳೆಸಿ ಲಂಚ ಪಡೆದಿರುವುದನ್ನು ದೃಢಪಡಿಸಿಕೊಂಡಿದ್ದಾರೆ.
ಇಬ್ಬರ ಬಂಧನ ಮತ್ತು ತನಿಖೆ:
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರೆವಿನ್ಯೂ ಇನ್ಸ್ಪೆಕ್ಟರ್ ವೆಂಕಟೇಶ್ ಅವರನ್ನೂ ಸಹ ವಿಚಾರಣೆಗೆ ಒಳಪಡಿಸಲಾಗಿದೆ. ಲಂಚದ ಬೇಡಿಕೆಯಲ್ಲಿ ಇಬ್ಬರ ಪಾತ್ರ ಇರುವುದು ಮೇಲ್ನೋಟಕ್ಕೆ ಕಂಡುಬಂದಿದೆ. 'ಬೆಂಗಳೂರಿನ ಸಾರ್ವಜನಿಕ ಸೇವಾ ಕಚೇರಿಗಳಲ್ಲಿ ಖಾತೆ, ನಕ್ಷೆ ಮಂಜೂರಾತಿ ಅಂತಹ ಕೆಲಸಗಳಿಗೆ ಅಧಿಕಾರಿಗಳು ಲಂಚಕ್ಕೆ ಪೀಡಿಸುತ್ತಿದ್ದಾರೆ ಎಂಬ ದೂರುಗಳು ಹೆಚ್ಚಾಗುತ್ತಿವೆ. ಭ್ರಷ್ಟಾಚಾರಕ್ಕೆ ಸಾಕ್ಷಿ ಇದ್ದರೆ ಸಾರ್ವಜನಿಕರು ತಕ್ಷಣ ನಮಗೆ ಮಾಹಿತಿ ನೀಡಬೇಕು' ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಸ್ತುತ ಲೋಕಾಯುಕ್ತ ಪೊಲೀಸರು ಇಬ್ಬರೂ ಅಧಿಕಾರಿಗಳನ್ನು ಬಂಧಿಸಿದ್ದು, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೂ ಪರಿಶೀಲನೆ ನಡೆಸುವ ಸಾಧ್ಯತೆಯಿದೆ. ಈ ಕಾರ್ಯಾಚರಣೆಯು ಬೆಂಗಳೂರಿನ ಸರ್ಕಾರಿ ಕಚೇರಿಗಳಲ್ಲಿ ಲಂಚದ ಹಾವಳಿ ನಡೆಸುತ್ತಿರುವ ಇತರ ಅಧಿಕಾರಿಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ.


