ಶ್ರೀರಂಗಪಟ್ಟಣದಲ್ಲಿ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಹಳ್ಳಕ್ಕೆ ಉರುಳಿ ಬಿದ್ದಿದೆ. ಚಾಲಕನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಲಿ ಬಸ್ಸಿನಲ್ಲಿ ಪ್ರಯಾಣಿಕರಿಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ.

ಶ್ರೀರಂಗಪಟ್ಟಣ (ಜು.14): ಮೈಸೂರು–ಬೆಂಗಳೂರು ಹಳೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಚಾಲಕನ ನಿಯಂತ್ರಣ ತಪ್ಪಿದ KSRTC ಬಸ್ ಹಳ್ಳಕ್ಕೆ ಉರುಳಿದ ಘಟನೆ ನಡೆದಿದೆ. ಚಾಲಕನ ನಿರ್ಲಕ್ಷ್ಯದಿಂದಾಗಿ ಈ ಅಪಘಾತ ಸಂಭವಿಸಿದ್ದು, ಬಸ್‌ನಲ್ಲಿ ಪ್ರಯಾಣಿಕರಿಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ.

Add Asianetnews Kannada as a Preferred SourcegooglePreferred

ಈ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೊಮ್ಮೂರು ಅಗ್ರಹಾರದ ಬಳಿ ಮಧ್ಯಾಹ್ನದ ಸಮಯದಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಡಿಪೋಗೆ ಸೇರಿದ ಬಸ್ ಚನ್ನಪಟ್ಟಣದಲ್ಲಿ ಸಂಭವಿಸಿದ ಅಪಘಾತ ಪ್ರಕರಣವನ್ನು ಇತ್ಯರ್ಥ ಮಾಡಿಕೊಂಡು ಪೊಲೀಸ್ ಠಾಣೆಯಿಂದ ಬಿಡಿಸಿಕೊಂಡು ಪುತ್ತೂರು ಕಡೆಗೆ ಕಂಡಕ್ಟರ್ ಸಮೇತವಾಗಿ ಖಾಲಿ ಬಸ್ ಸಾಗುತ್ತಿತ್ತು. ಆದರೆ, ಖಾಲಿ ಬಸ್ಸನ್ನು ಕೊಂಡೊಯ್ಯುತ್ತಿದ್ದ ಚಾಲಕನ ನಿರ್ಲಕ್ಷ್ಯದಿಂದ ಬೊಮ್ಮೂರು ಅಗ್ರಹಾರದ ಬಳಿ ಬಸ್‌ ರಸ್ತೆ ಬದಿಯಲ್ಲಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯ ತೀವ್ರತೆಗೆ ಬಸ್ ಡಿವೈಡರ್ ಹಾರಿ ಬಲ ಬದಿಯ ಹಳ್ಳಕ್ಕೆ ಉರುಳಿಬಿದ್ದಿದೆ.

ಅಪಘಾತದಲ್ಲಿ ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಘಟನಾ ಸ್ಥಳಕ್ಕೆ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣವನ್ನು ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ಈ ಘಟನೆಯು ಮೈಸೂರು-ಬೆಂಗಳೂರು ರಸ್ತೆಯಲ್ಲಿ ಹೆಚ್ಚುತ್ತಿರುವ ಅಪಘಾತಗಳ ಸಾಲಿಗೆ ಮತ್ತೊಂದು ಉದಾಹರಣೆ ಎಂಬಂತಾಗಿದೆ. ಪ್ರಯಾಣಿಕರಿಲ್ಲದ ಕಾರಣ ಬೃಹತ್ ಅನಾಹುತ ತಪ್ಪಿದರೂ, ಚಾಲಕರ ನಿರಲಕ್ಷ್ಯ ಮತ್ತು ಸುರಕ್ಷತಾ ಕ್ರಮಗಳ ಕಡೆಗಣನೆಯಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.