ಪೀಣ್ಯ ಮೇಲ್ಸೇತುವೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲು ತಜ್ಞರು ನಿರ್ಧರಿಸಿದ್ದಾರೆ. ಆದರೆ 20 ಟನ್‌ಗಿಂತ ಹೆಚ್ಚಿನ ಪ್ರಮಾಣದ ಸರಕು ಸಾಗಣೆಯ ವಾಹನಗಳಿಗೆ ಅವಕಾಶ ನೀಡಬಾರದು ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. 

ಬೆಂಗಳೂರು (ಜು.03): ಪೀಣ್ಯ ಮೇಲ್ಸೇತುವೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲು ತಜ್ಞರು ನಿರ್ಧರಿಸಿದ್ದಾರೆ. ಆದರೆ 20 ಟನ್‌ಗಿಂತ ಹೆಚ್ಚಿನ ಪ್ರಮಾಣದ ಸರಕು ಸಾಗಣೆಯ ವಾಹನಗಳಿಗೆ ಅವಕಾಶ ನೀಡಬಾರದು ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಇತ್ತೀಚೆಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಮತ್ತು ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರು ಮೇಲ್ಸೇತುವೆ ಪ್ರಾರಂಭವಾಗುವ ಗೊರಗುಂಟೆ ಪಾಳ್ಯ ಭಾಗದ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ.

Add Asianetnews Kannada as a Preferred SourcegooglePreferred

ತುಮಕೂರು ರಸ್ತೆಯ ಪೀಣ್ಯ ಮೇಲ್ಸೇತುವೆಯ ಎಂಟನೇ ಮೈಲಿ ಸಮೀಪ ಕೆಲ ಕೇಬಲ್‌ಗಳು ಹಾನಿಗೊಳಗಾಗಿದ್ದರಿಂದ ಕಳೆದ ಆರು ತಿಂಗಳಿಂದ ಭಾರೀ ವಾಹನಗಳ ಸಂಚಾರವನ್ನು ಮೇಲ್ಸೇತುವೆ ಮೇಲೆ ನಿಷೇಧಿಸಲಾಗಿತ್ತು. ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿಗಳು ಹಲವು ಪರೀಕ್ಷೆ ನಡೆಸಿದ್ದರು. ಬಳಿಕ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಹೆಚ್ಚಿನ ಪರೀಕ್ಷೆ ನಡೆಸಿದ ಬಳಿಕವಷ್ಟೇ ಭಾರೀ ವಾಹನಗಳಿಗೆ ಪ್ರವೇಶ ಕಲ್ಪಿಸುವುದು ಸೂಕ್ತ ಎಂಬ ಅಭಿಪ್ರಾಯವನ್ನು ತಜ್ಞರು ವ್ಯಕ್ತಪಡಿಸಿದ್ದರು.

Bengaluru: ಕಬ್ಬನ್‌ ಪಾರ್ಕ್‌ನಲ್ಲಿ ಲಾಂಛನ ಸ್ಥಾಪನೆಗೆ ಸಾರ್ವಜನಿಕರ ವಿರೋಧ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞ ಚಂದ್ರ ಕಿಶನ್‌, ‘ಇದೀಗ ಭಾರೀ ವಾಹನಗಳ ಸಂಚಾರಕ್ಕೂ ಅವಕಾಶ ಮಾಡಿಕೊಡಬಹುದು. ಆದರೆ 20 ಟನ್‌ಗಿಂತ ಅಧಿಕ ತೂಕದ ಸರಕು ಹೊತ್ತ ವಾಹನಗಳು, ಬಂಡೆ, ಕಬ್ಬಿಣ ಮತ್ತಿತರ ಭಾರವಾದ ವಸ್ತುಗಳನ್ನು ಹೊತ್ತ ಮಲ್ಟಿವ್ಹೀಲ್‌ ಆಕ್ಸಿಲ್‌ ವಾಹನಗಳ ಸಂಚಾರ ನಿಷೇಧಿಸಬೇಕು ಎಂದು ಹೇಳಿದ್ದೇವೆ. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದಿಂದ ಸಮ್ಮತಿ ಬರಬೇಕಿದೆ’ ಎಂದು ತಿಳಿಸಿದ್ದಾರೆ.

ಟ್ರಾಫಿಕ್‌ ಕಿರಿಕಿರಿ ತಪ್ಪಿಸಲು 4 ಹೊಸ ಫ್ಲೈಓವರ್‌ ನಿರ್ಮಾಣ: ನಗರದಲ್ಲಿ ಟ್ರಾಫಿಕ್‌ ಕಿರಿಕಿರಿ ಕಡಿಮೆ ಮಾಡುವ ಉದ್ದೇಶದಿಂದ ಇನ್ನೂ ನಾಲ್ಕು ಮೇಲ್ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿ .404 ಕೋಟಿ ಅನುದಾನ ನೀಡುವುದಾಗಿ ತಿಳಿಸಿದೆ. ನಗರದಲ್ಲಿ 45 ಮೇಲ್ಸೇತುವೆಗಳಿದ್ದು, ಇದೀಗ ಇಟ್ಟಮಡು ಜಂಕ್ಷನ್‌, ಸಾರಕ್ಕಿ ಜಂಕ್ಷನ್‌, ಜೆಸಿ ರಸ್ತೆ ಹಾಗೂ ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆಯ ಬಸವೇಶ್ವರ ಜಂಕ್ಷನ್‌ನಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಬಿಬಿಎಂಪಿ ಸಲ್ಲಿಸಿದ ಕ್ರಿಯಾ ಯೋಜನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಮುಖ್ಯಮಂತ್ರಿಗಳ ಅಮೃತ್‌ ನಗರೋತ್ಥಾನ ಯೋಜನೆಯಡಿ .404.14 ಕೋಟಿ ನೀಡಲಿದೆ. ಬಿಬಿಎಂಪಿ ಯೋಜನಾ ವಿಭಾಗದಿಂದ ಮೇಲ್ಸೇತುವೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿಕೊಂಡು ಟೆಂಡರ್‌ ಪ್ರಕ್ರಿಯೆ ಆರಂಭಿಸುವಂತೆ ಸರ್ಕಾರ ಸೂಚಿಸಿದೆ.

ಬೆಂಗಳೂರಿನ ಪೊಲೀಸ್ ಇಲಾಖೆಯಲ್ಲಿ ಘರ್ಜಿಸಿದ ಲೇಡಿ ಸಿಂಗಂ

ಜೆಸಿ ರಸ್ತೆಯ ಫ್ಲೈಓವರ್‌ ವಿನ್ಯಾಸ ಬದಲು: ಜೆ.ಸಿ.ರಸ್ತೆಯಲ್ಲಿ ಈ ಹಿಂದೆ ಸ್ಟೀಲ್‌ ಬ್ರಿಡ್ಜ್‌ ನಿರ್ಮಾಣ ಮಾಡುವುದಕ್ಕೆ ತೀರ್ಮಾನಿಸಲಾಗಿತ್ತು. ಆದರೆ, ಈ ಬಗ್ಗೆ ಸಾಕಷ್ಟುಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಇದೀಗ ವಿನ್ಯಾಸ ಬದಲಾವಣೆ ಮಾಡಿ ಮೇಲ್ಸೇತುವೆ ನಿರ್ಮಿಸಲು ತೀರ್ಮಾನಿಸಲಾಗಿದೆ. ಶೀಘ್ರದಲ್ಲಿ ಈ ಬಗ್ಗೆ ವಿಸ್ತೃತ ಡಿಪಿಆರ್‌ ಸಿದ್ಧಪಡಿಸಲಾಗುವುದು ಎಂದು ಬಿಬಿಎಂಪಿ ಯೋಜನಾ ವಿಭಾಗದ ಮುಖ್ಯ ಎಂಜಿನಿಯರ್‌ ಲೋಕೇಶ್‌ ತಿಳಿಸಿದ್ದಾರೆ.