ಚಿಕ್ಕಲ್ಲಸಂದ್ರದ ರಾಜೇಂದ್ರ ಮೃತ ಸವಾರ. ಶನಿವಾರ ಸಂಜೆ 4.15 ರ ಸುಮಾರಿಗೆ ಗೊಟ್ಟಿಗೆರೆ ಮುಖ್ಯರಸ್ತೆಯಲ್ಲಿ ಕೋಣನಕುಂಟೆ ಕಡೆಯಿಂದ ಜಂಬೂಸವಾರಿ ದಿಣ್ಣೆ ಕಡೆಗೆ ಹೋಗುವಾಗ ಈ ಅಪಘಾತ ಸಂಭವಿಸಿದೆ.

ಬೆಂಗಳೂರು(ಅ.29): ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ನಿಯಂತ್ರಣ ತಪ್ಪಿದ ಕಾರು ಮುಂದೆ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಕುಮಾರಸ್ವಾಮಿ ಲೇಔಟ್‌ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಲ್ಲಸಂದ್ರದ ರಾಜೇಂದ್ರ (56) ಮೃತ ಸವಾರ. ಶನಿವಾರ ಸಂಜೆ 4.15 ರ ಸುಮಾರಿಗೆ ಗೊಟ್ಟಿಗೆರೆ ಮುಖ್ಯರಸ್ತೆಯಲ್ಲಿ ಕೋಣನಕುಂಟೆ ಕಡೆಯಿಂದ ಜಂಬೂಸವಾರಿ ದಿಣ್ಣೆ ಕಡೆಗೆ ಹೋಗುವಾಗ ಈ ಅಪಘಾತ ಸಂಭವಿಸಿದೆ.

Add Asianetnews Kannada as a Preferred SourcegooglePreferred

ಮರ್ಸಿಡೀಸ್‌ ಬೆಂಜ್‌ ಕಾರನ್ನು ಚಾಲಕ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಚಾಲನೆ ಮಾಡಿದ ಪರಿಣಾಮ ಗೊಟ್ಟಿಗೆರೆ ಮುಖ್ಯರಸ್ತೆಯ ಉಡುಪಿ ಹೋಟೆಲ್‌ ಬಳಿ ಕಾರು ನಿಯಂತ್ರಣ ತಪ್ಪಿ ಮುಂದೆ ರಾಜೇಂದ್ರ ಓಡಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಅದೇ ವೇಗದಲ್ಲಿ ಮುಂದೆ ಸಾಗಿ ಪಾದಚಾರಿ ಮಾರ್ಗದಲ್ಲಿನ ವಿದ್ಯುತ್‌ ಕಂಬಕ್ಕೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್‌ ಕಂಬ ಸಂಪೂರ್ಣ ಜಖಂಗೊಂಡಿದೆ.

ದಸರಾ ಆನೆ ಕೊಂಡೊಯ್ಯುತ್ತಿದ್ದ ಲಾರಿ ಅಪಘಾತ: ಚಾಲಕ ಸಾವು, ಪ್ರಾಣಾಪಾಯದಿಂದ ಪಾರಾದ ಆನೆ

ಡಿಕ್ಕಿಯಿಂದ ಸವಾರ ರಾಜೇಂದ್ರ ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಸ್ಥಳೀಯರು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದರು. ಪರೀಕ್ಷಿಸಿದ ವೈದ್ಯರು ಗಾಯಾಳು ರಾಜೇಂದ್ರ ಆಸ್ಪತ್ರೆಗೆ ಕರೆತರುವ ಮಾರ್ಗ ಮಧ್ಯೆಯೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಅಪಘಾತ ಎಸಗಿದ ಚಾಲಕ ಸ್ಥಳದಲ್ಲೇ ಕಾರು ಬಿಟ್ಟು ಪರಾರಿಯಾಗಿದ್ದಾನೆ. ಆ ಕಾರನ್ನು ಜಪ್ತಿ ಮಾಡಿದ್ದು, ಚಾಲಕನ ಬಂಧನಕ್ಕೆ ಬಲೆ ಬೀಸಲಾಗಿದೆ. ಕುಮಾರಸ್ವಾಮಿ ಲೇಔಟ್‌ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.