ಮಹಿಳಾ ಮೀಸಲಾತಿ ಮಸೂದೆ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಜನರನ್ನು ಹಾದಿ ತಪ್ಪಿಸಿರುವ ಕಾಂಗ್ರೆಸ್ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ನಿರಂತರ ಹೋರಾಟ ನಡೆಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಹುಬ್ಬಳ್ಳಿ (ಮೇ.02): ಮಹಿಳಾ ಮೀಸಲಾತಿ ಮಸೂದೆ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಜನರನ್ನು ಹಾದಿ ತಪ್ಪಿಸಿರುವ ಕಾಂಗ್ರೆಸ್ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ನಿರಂತರ ಹೋರಾಟ ನಡೆಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಕಾಂಗ್ರೆಸ್ ಸರಕಾರದಲ್ಲಿ ಮಹಿಳೆಯರು, ಹೆಣ್ಣು ಮಕ್ಕಳು ಭಯದಲ್ಲಿ ಬದುಕುವ ವಾತಾವರಣ ನಿರ್ಮಾಣವಾಗಿದೆ. ಹುಬ್ಬಳ್ಳಿ ನೇಹಾ ಹಿರೇಮಠ, ಉತ್ತರ ಕನ್ನಡದ ದಲಿತ ಯುವತಿಯ ಮೇಲೆ ನಡೆದ ದೌರ್ಜನ್ಯಗಳೇ ಇದಕ್ಕೆ ಸಾಕ್ಷಿಯಾಗಿವೆ ಎಂದರು.
ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಪ್ರತಿನಿತ್ಯ ಕೊಲೆ, ಸುಲಿಗೆ, ಲವ್ ಜಿಹಾದ್, ನಡೆಯುತ್ತಲೇ ಇವೆ. ರಾಜ್ಯದಲ್ಲಿ ಕೊಲೆ ಸುಲಿಗೆ ಪ್ರತಿ ದಿನ ಲವ್ ಜಿಹಾದ್, ಮಹಿಳಾ ಹ*ತ್ಯೆಗಳು ನಡೆಯುತ್ತಿವೆ. ನಮ್ಮ ಮಹಿಳೆಯರು ಜೈಪುರ, ಮುಂಬೈಗೆ ಹೋಗುತ್ತಿದ್ದಾರೆ. ನಮ್ಮ ಹೆಣ್ಣು ಮಕ್ಕಳು ಶಾಲೆಗೆ ಹೋದರೆ, ಕೆಲಸಕ್ಕೆ ಹೋದರೆ ಸಂಜೆ ಮನೆಗೆ ಬರುವ ಭರವಸೆ ಇಲ್ಲ.
ರಾಜ್ಯದಲ್ಲಿ ಅನೀತಿ, ಅತ್ಯಾಚಾರ ನಿಲ್ಲಬೇಕಾದರೆ ನಮ್ಮ ರಕ್ಷಣೆ ಮಾಡಿಕೊಳ್ಳಲು ನಾವು ಸಿದ್ದರಿದ್ದೇವೆ. ನಮಗೆ ಅಧಿಕಾರ ಕೊಡಿ, ವಿಧಾನಸಭೆ, ಲೋಕಸಭೆಯಲ್ಲಿ ಸ್ಥಾನ ಕೊಡಿ ಎಂದು ನಾರಿ ಶಕ್ತಿ ಕೂಗಿ ಕೂಗಿ ಹೇಳುತ್ತಿದೆ ಎಂದು ಹೇಳಿದರು. ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಮಾತನಾಡಿ, ವಿಪಕ್ಷಗಳು ಮಹಿಳಾ ವಿಧೇಯಕವನ್ನು ಸೋಲಿಸುವ ಮೂಲಕ ತಮ್ಮ ಮಹಿಳಾ ವಿರೋಧಿ ನೀತಿಯನ್ನು ಸಾಬೀತು ಮಾಡಿವೆ. ಮುಂಬರುವ ದಿನಗಳಲ್ಲಿ ಇಂತಹ ಮಹಿಳಾ ವಿರೋಧಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕು ಎಂದರು.
ಮಸೂದೆಗೆ ಸೋಲಾಗಿದೆ ಎಂದು ಧೃತಿಗೆಡಬೇಡಿ
ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದೆ ಎಂದು ಧೃತಿಗೆಡಬೇಡಿ. ಈ ಮಸೂದೆ ಇದೇ ಅವಧಿಯಲ್ಲಿ ಜಾರಿಗೆ ಬರುತ್ತೆ. ಮುಂದಿಟ್ಟ ಹೆಜ್ಜೆ ಹಿಂದಿಡುವ ಪ್ರಶ್ನೆಯೇ ಇಲ್ಲ. ಮಹಿಳಾ ಮೀಸಲಾತಿ ಜಾರಿಗೆ ತರುವುದನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ! ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳಾ ಮೀಸಲಾತಿ ಜಾರಿಗೆ ತರಲೇಬೇಕೆಂಬ ದೃಢ ಸಂಕಲ್ಪ ಮಾಡಿದ್ದಾರೆ. ಮೋದಿ ಅವರು ಮುಂದಿಟ್ಟು ಹೆಜ್ಜೆ ಎಂದೂ ಹಿಂದೆ ಇಟ್ಟ ಉದಾಹರಣೆಯೇ ಇಲ್ಲ. ಮಹಿಳಾ ಮೀಸಲಾತಿ ಜಾರಿಗೆ ತಂದೇ ತರುತ್ತಾರೆ. ಈ ಬಗ್ಗೆ ಯಾವುದೇ ಸಂಶಯ ಬೇಡ.
ಮಹಿಳಾ ಮೀಸಲಾತಿ ಜಾರಿಗೊಳಿಸುವುದನ್ನು ತಡೆಯುವ ಶಕ್ತಿ ಕಾಂಗ್ರೆಸ್ ಅಲ್ಲ. ಯಾರಿಗೂ ಇಲ್ಲ ಎಂದರು. ದೇಶ ಅಭಿವೃದ್ಧಿಶೀಲ ರಾಷ್ಟ್ರವಾಗಬೇಕಾದರೆ, ನಾರಿಶಕ್ತಿ ಪಾತ್ರ ದೊಡ್ಡದು ಎಂದು ಮೋದಿ ಅವರು ಬಲವಾಗಿ ನಂಬಿದ್ದಾರೆ. ಅದೇ ಕಾರಣಕ್ಕೆ ಅವರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಬಯಕೆ ಹೊಂದಿದ್ದರು. ಆದರೆ, ಕಾಂಗ್ರೆಸ್ ಆ ಮಸೂದೆಯನ್ನು ಸೋಲಿಸುವ ಮೂಲಕ ಇಡೀ ಮಹಿಳಾ ಸಮುದಾಯಕ್ಕೆ ಅವಮಾನ ಮಾಡುವ ಕೆಲಸ ಮಾಡಿದೆ ಎಂದು ಆರೋಪಿಸಿದರು.


