ಬೆಂಗಳೂರು ಉತ್ತರ ತಾಲ್ಲೂಕಿನ ಅಂಚೇಪಾಳ್ಯದಲ್ಲಿ, ಪ್ರೀತಿಯ ಹೆಸರಿನಲ್ಲಿ ಯುವಕನೊಬ್ಬ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು 17 ವರ್ಷದ ಬಾಲಕಿ ಆತ್ಮ*ಹತ್ಯೆ ಮಾಡಿಕೊಂಡಿದ್ದಾಳೆ. ಮಗಳ ಸಾವಿಗೆ ಯುವಕನೇ ಕಾರಣ ಎಂದು ಪೋಷಕರು ಆರೋಪಿಸಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಂಗಳೂರು (ಜ.06): ಬೆಂಗಳೂರು ಉತ್ತರ ತಾಲ್ಲೂಕಿನ ಅಂಚೇಪಾಳ್ಯದಲ್ಲಿ (Anchepalya) ದಾರುಣ ಘಟನೆಯೊಂದು ಸಂಭವಿಸಿದೆ. ಪ್ರೀತಿ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೋರ್ವನ ಕಿರುಕುಳಕ್ಕೆ ಬೇಸತ್ತ 17 ವರ್ಷದ ಅಪ್ರಾಪ್ತ ಬಾಲಕಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣಾಗಿದ್ದಾಳೆ.

Add Asianetnews Kannada as a Preferred SourcegooglePreferred

ಘಟನೆಯ ವಿವರ:

ಅಂಚೇಪಾಳ್ಯದ ಪ್ರಕೃತಿ ಲೇಔಟ್ ನಿವಾಸಿ ತೇಜಸ್ವಿನಿ (17) ಆತ್ಮ*ಹತ್ಯೆ ಮಾಡಿಕೊಂಡ ಬಾಲಕಿ. ಕಳೆದ ಕೆಲವು ದಿನಗಳಿಂದ ತೇಜಸ್ವಿನಿಗೆ ಯುವಕನೋರ್ವ ಪ್ರೀತಿಯ ಹೆಸರಿನಲ್ಲಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಕಿರುಕುಳ ತಾಳಲಾರದೆ ಮನನೊಂದ ಬಾಲಕಿ, ತನ್ನ ನಿವಾಸದಲ್ಲೇ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾಳೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ (Madanayakahalli Police Station) ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.

ಪೋಷಕರ ಆಕ್ರೋಶ

ಮಗಳ ಸಾವಿನಿಂದ ಕಂಗಾಲಾಗಿರುವ ಪೋಷಕರು, ಯುವಕನ ಕಿರುಕುಳವೇ ತನ್ನ ಮಗಳ ಸಾವಿಗೆ ನೇರ ಕಾರಣ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕಿರುಕುಳ ನೀಡಿದ ಯುವಕನನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ. ಪ್ರೀತಿಯ ಹೆಸರಿನಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ನಡೆಯುತ್ತಿರುವ ಇಂತಹ ಮಾನಸಿಕ ದೌರ್ಜನ್ಯಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತವಾಗಿದೆ.