ಸರ್ಕಾರದ ಜನ ಪರವಾದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಅಧಿಕಾರಿಗಳು ಅತ್ಯಂತ ಜವಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಕೆ.ಆರ್. ನಗರ : ಸರ್ಕಾರದ ಜನ ಪರವಾದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಅಧಿಕಾರಿಗಳು ಅತ್ಯಂತ ಜವಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

Add Asianetnews Kannada as a Preferred SourcegooglePreferred

ಪಟ್ಟಣದ ಕೃಷ್ಣರಾಜೇಂದ್ರ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ಕ್ಷೇತ್ರದ ವ್ಯಾಪ್ತಿಯ ಸಾಲಿಗ್ರಾಮ ಮತ್ತು ಕೆ.ಆರ್. ನಗರ ಅವಳಿ ತಾಲೂಕುಗಳು ಬರ ಪರಿಹಾರ ಪಟ್ಟಿಗೆ ಸೇರ್ಪಡೆಯಾಗಿದ್ದು, ರೈತರು ಸವಲತ್ತುಗಳನ್ನು ನೀಡುವ ಕೆಲಸ ಮಾಡಬೇಕು ಎಂದರು.

ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಕೆ.ಆರ್. ನಗರ ಜಿಲ್ಲೆಯಲ್ಲಿ 9 ಮತ್ತು ರಾಜ್ಯದಲ್ಲಿ 203ನೇ ಸ್ಥಾನದಲ್ಲಿರುವುದು ತಲೆ ತಗ್ಗಿಸುವ ವಿಚಾರವಾಗಿದ್ದು, ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಸ್ಥಾನಕ್ಕೇರುವಂತೆ ಮಾಡಬೇಕೆಂದು ತಾಕೀತು ಮಾಡಿದ ಅವರು, ನಾಳೆಯಿಂದಲೇ ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಯೋನ್ಮುಖರಾಗಿ ಮುಖ್ಯ ಶಿಕ್ಷಕರ ಸಭೆ ಕರೆಯಬೇಕೆಂದು ಬಿಇಒ ಆರ್. ಕೃಷ್ಣಪ್ಪ ಅವರಿಗೆ ಕಟ್ಟಪ್ಪಣೆ ಮಾಡಿದರು.

ಸರ್ಕಾರಿ ಕಾರ್ಯಕ್ರಮಗಳಿಗೆ ಮತ್ತು ರಾಷ್ಟ್ರೀಯ ಹಬ್ಬಗಳ ಪೂರ್ವಭಾವಿ ಸಭೆಗೆ ಕೆಲವು ತಾಲೂಕು ಮಟ್ಟದ ಅಧಿಕಾರಿಗಳು ಗೈರಾಗುತ್ತಿದ್ದು, ಅಂತಹವರ ಪಟ್ಟಿಯನ್ನು ನಾನು ನೀಡಲಿದ್ದು, ಕರ್ತವ್ಯ ಲೋಪ ಎಸಗುವವರ ವಿರುದ್ದ ಕಠಿಣ ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರಿಗೆ ತಿಳಿಸಿದರು.

ಮಧ್ಯ ಪ್ರವೇಶಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಈ ವಿಚಾರದಲ್ಲಿ ಯಾರನ್ನು ಕ್ಷಮಿಸುವ ಪ್ರಶ್ನೆ ಇಲ್ಲ, ಹಾಗಾಗಿ ಸಭೆಗೆ ಮತ್ತು ಕಾರ್ಯಕ್ರಮಗಳಿಗೆ ಗೈರಾದವರ ಪಟ್ಟಿ ಪಡೆದು ಅವರಿಗೆ ಶೋಕಾಸ್ ನೋಟಿಸ್ ನೀಡಬೇಕೆಂದು ತಹಸೀಲ್ದಾರ್ ಸಿ.ಎಸ್. ಪೂರ್ಣಿಮಾ ಅವರಿಗೆ ಆದೇಶಿಸಿದರು.

ರೈತರು ಆತ್ಮಹತ್ಯೆ ಮಾಡಿಕೊಂಡ ಸಂದರ್ಭದಲ್ಲಿ ಪೊಲೀಸ್ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ನೊಂದ ಕುಟುಂಬದವರಿಗೆ ಪರಿಹಾರ ಕೊಡಿಸಲು ಸಹಾಯ ಮಾಡಬೇಕು ಮತ್ತು ಕುಟುಂಬದವರನ್ನು ಅಲೆದಾಡಿಸಬಾರದು ಹಾಗೂ ಆರೋಗ್ಯ ಇಲಾಖೆಯವರು ಶವ ಪರೀಕ್ಷೆ ಸೇರಿದಂತೆ ದಾಖಲಾತಿ ನೀಡಲು ವಿಳಂಬ ಮಾಡಬಾರದು ಎಂದು ತಾಕೀತು ಮಾಡಿದರು.

ಅಧಿಕಾರಿಗಳು ನಮ್ಮ ವೇಗಕ್ಕೆ ತಕ್ಕಂತೆ ಕೆಲಸ ಮಾಡಬೇಕು, ಸರ್ಕಾರ ಕಚೇರಿ ಸಮಯವನ್ನು ಬೆಳಗ್ಗೆ 10 ರಿಂದ ಸಂಜೆ 5.30ರವರೆಗೆ ನಿಗದಿ ಮಾಡಿದ್ದು, ಆದರೆ ಕೆಲವು ಅಧಿಕಾರಿಗಳು ಮನ ಬಂದಂತೆ ಕಚೇರಿಗೆ ಆಗಮಿಸುತ್ತಿದ್ದಾರೆ, ಇದನ್ನು ಸಹಿಸಲು ಸಾಧ್ಯವಿಲ್ಲ, ಕಚೇರಿಯಲ್ಲಿ ಕುಳಿತು ಕೆಲಸ ಮಾಡುವುದರ ಜತೆಗೆ ಜನರ ಬಳಿಗೆ ಹೋಗಿ ಸಮಸ್ಯೆ ಆಲಿಸಬೇಕು ಎಂದು ಹೇಳಿದರು.

ತಹಸೀಲ್ದಾರ್ ಸಿ.ಎಸ್. ಪೂರ್ಣಿಮಾ, ತಾಪಂ ಇಒ ಜಿ.ಕೆ. ಹರೀಶ್, ತಾಲೂಕು ಅರೋಗ್ಯಾಧಿಕಾರಿ ಡಾ. ಡಿ. ನಟರಾಜು, ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ನಾಗೇಂದ್ರ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಜಾರಾಂ ವೈಲಾಯ, ವಿನುತ್, ಅರ್ಕೇಶ್ವರ ಮೂರ್ತಿ ಇದ್ದರು.