ಕಾಂಗ್ರೆಸ್‌ ಭವನಕ್ಕೆ ಅತಿಕ್ರಮಣ ಪ್ರವೇಶ ಹಾಗೂ ಸಂಚಾರಕ್ಕೆ ಅಡ್ಡಿ ಪಡಿಸಿದ ಆರೋಪದಡಿ 27 ಬಿಜೆಪಿ ಕಾರ್ಯಕರ್ತರ ವಿರುದ್ಧ ಐಪಿಸಿ ಸೆಕ್ಷನ್ 143, 147, 341, 283, 448 ಹಾಗೂ 149 ಅಡಿ ಪ್ರಕರಣ ದಾಖಲಿಸಲಾಗಿದೆ. 

ಬೆಳಗಾವಿ(ಫೆ.09): ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಕಾಂಗ್ರೆಸ್‌ ಭವನಕ್ಕೆ ನುಗ್ಗಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಗೀತಾ ಸುತಾರ, ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಸೇರಿದಂತೆ 27 ಬಿಜೆಪಿ ಕಾರ್ಯಕರ್ತರ ವಿರುದ್ಧ ಮಾರ್ಕೆಟ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೇಂದ್ರದ ಕಿಸಾನ್‌ ಸಮ್ಮಾನದ ಜತೆ ₹ 4 ಸಾವಿರ ರದ್ದುಗೊಳಿಸಿರುವುದು ಹಾಗೂ ರೈತರ ವಹಿವಾಟಕ್ಕೆ ಮುದ್ರಾಂಕ ಶುಲ್ಕ ದುಪ್ಪಟ್ಟು ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಯನ್ನು ತೀವ್ರವಾಗಿ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಜಾನುವಾರುಗಳೊಂದಿಗೆ ರಸ್ತೆಗಿಳಿದ ಪ್ರತಿಭಟನಾಕಾರರು ಸಂಗೊಳ್ಳಿ ರಾಯಣ್ಣ ವೃತ್ತದ ಬಳಿಯಿರುವ ಕಾಂಗ್ರೆಸ್ ಭವನಕ್ಕೆ ನುಗ್ಗಿದ್ದಲ್ಲದೇ, ಸಂಸದ ಡಿ.ಕೆ.ಸುರೇಶ ಹಾಗೂ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದರು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪೊಲೀಸರ ಜೊತೆಗೆ ವಾಗ್ವಾದ ನಡೆಸಿದ್ದರು.

ಸಚಿವ ಸತೀಶ್‌ ಜಾರಕಿಹೊಳಿ ರಾಜ್ಯ ರಾಜಕೀಯದಲ್ಲೇ ಉಳಿಯಲಿ: ಆಯಿಶಾ ಸನದಿ

ಕಾಂಗ್ರೆಸ್‌ ಭವನಕ್ಕೆ ಅತಿಕ್ರಮಣ ಪ್ರವೇಶ ಹಾಗೂ ಸಂಚಾರಕ್ಕೆ ಅಡ್ಡಿ ಪಡಿಸಿದ ಆರೋಪದಡಿ 27 ಬಿಜೆಪಿ ಕಾರ್ಯಕರ್ತರ ವಿರುದ್ಧ ಐಪಿಸಿ ಸೆಕ್ಷನ್ 143, 147, 341, 283, 448 ಹಾಗೂ 149 ಅಡಿ ಪ್ರಕರಣ ದಾಖಲಿಸಲಾಗಿದೆ.