Chethan Ahimsa: ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯವಾಗುತ್ತಿದೆ. ಇದನ್ನು ಸರಿಪಡಿಸಲು ಬಲಿಷ್ಠ ಪ್ರಾದೇಶಿಕ ಧ್ವನಿಯ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಪರ‍್ಯಾಯ ಪಕ್ಷ ಕಟ್ಟಲು ಜನಾಭಿಪ್ರಾಯ ಪಡೆಯಲಾಗುತ್ತಿದೆ ಎಂದು ಚೇತನ್ ಅಹಿಂಸಾ ಹೇಳಿದರು.

ಹುಬ್ಬಳ್ಳಿ (ಜೂ.16): ಉತ್ತರ ಕರ್ನಾಟಕ ಭಾಗಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಇದನ್ನು ಸರಿಪಡಿಸಲು ಬಲಿಷ್ಠ ಪ್ರಾದೇಶಿಕ ಧ್ವನಿಯ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಪರ‍್ಯಾಯ ಪಕ್ಷ ಕಟ್ಟಲು ಜನಾಭಿಪ್ರಾಯ ಪಡೆಯಲಾಗುತ್ತಿದೆ ಎಂದು ಚಿತ್ರನಟ ಚೇತನ್ ಅಹಿಂಸಾ ಹೇಳಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2028ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜನಾಭಿಪ್ರಾಯ ಸಂಗ್ರಹ ಹಾಗೂ ಸಂಘಟನೆ ಬಲವರ್ಧನೆ ಕಾರ್ಯ ನಡೆಯುತ್ತಿದೆ. ರಾಜ್ಯದ ಸುಮಾರು 40 ಕ್ಷೇತ್ರಗಳಲ್ಲಿ ಪರ‍್ಯಾಯ ರಾಜಕೀಯ ಶಕ್ತಿ ಕಟ್ಟುವ ನಿಟ್ಟಿನಲ್ಲಿ ಜನರೊಂದಿಗೆ ನೇರ ಸಂವಾದ ನಡೆಸಲಾಗುತ್ತಿದೆ.

ಶಿಕ್ಷಣ, ಆರೋಗ್ಯ, ಸಾಮಾಜಿಕ ನ್ಯಾಯ ಹಾಗೂ ಆರ್ಥಿಕ ಅಭಿವೃದ್ಧಿ ಕ್ಷೇತ್ರಗಳಲ್ಲಿ ಮೂಲಭೂತ ಬದಲಾವಣೆ ಅಗತ್ಯವಿದೆ. ಅಂಬೇಡ್ಕರ್‌ ಸಿದ್ಧಾಂತಗಳ ಆಧಾರದ ಮೇಲೆ ಜನಪರ ರಾಜಕೀಯ ವ್ಯವಸ್ಥೆ ನಿರ್ಮಾಣವಾಗಬೇಕಿದ್ದು, ಭ್ರಷ್ಟಾಚಾರ ರಹಿತ ಆಡಳಿತವೇ ಗುರಿಯಾಗಿದೆ ಎಂದರು.

ಹೊಸ ರಾಜಕೀಯ ಪಕ್ಷ ಸ್ಥಾಪನೆ ಕುರಿತು ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಹೋರಾಟಗಾರರೊಂದಿಗೆ ಸಮಾಲೋಚನೆ ನಡೆಯುತ್ತಿದೆ. ವೈಯಕ್ತಿಕ ನಿರ್ಧಾರ ಕೈಗೊಳ್ಳುವ ಬದಲು ಸಾಮೂಹಿಕ ತೀರ್ಮಾನದ ಆಧಾರದ ಮೇಲೆ ಮುಂದಿನ ಹೆಜ್ಜೆ ಇಡಲಾಗುವುದು ಎಂದರು.

ಸೂಕ್ಷ್ಮ ವಿಷಯ

ರಾಮಾಯಣ ಮತ್ತು ಲೇಖಕ ಕೆ.ಎಸ್. ಭಗವಾನ್ ಅವರ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಿ, ರಾಮಾಯಣವು ಕೇವಲ ಒಂದು ಧರ್ಮದ ವ್ಯಾಪ್ತಿಗೆ ಸೀಮಿತವಾದ ಗ್ರಂಥವಲ್ಲ. ಸಮಾಜದ ವಿವಿಧ ವರ್ಗಗಳ ಭಾವನೆಗಳಿಗೆ ಸಂಬಂಧಿಸಿದ ಸೂಕ್ಷ್ಮ ವಿಷಯ. ಸಾರ್ವಜನಿಕ ವ್ಯಕ್ತಿಗಳು ಸಂವಿಧಾನಾತ್ಮಕ ಹಾಗೂ ಜವಾಬ್ದಾರಿಯುತ ದೃಷ್ಟಿಕೋನದಿಂದ ಮಾತನಾಡಬೇಕು ಎಂದರು.

ಬಿಡದಿ ಪ್ರದೇಶದಲ್ಲಿ ರೈತರ ಭೂಮಿಯನ್ನು ಅಭಿವೃದ್ಧಿ ಯೋಜನೆಗಳ ಹೆಸರಿನಲ್ಲಿ ಸ್ವಾಧೀನಪಡಿಸಿಕೊಳ್ಳುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಚೇತನ್, ರೈತರ ಬದುಕು ಮತ್ತು ಭೂ ಹಕ್ಕು ಕಾಪಾಡುವುದು ಸರ್ಕಾರದ ಮೊದಲ ಆದ್ಯತೆಯಾಗಬೇಕು. ರಾಜಕೀಯ ಮತ್ತು ಆರ್ಥಿಕ ಲಾಭಕ್ಕಾಗಿ ರೈತರ ಜಮೀನು ಕಬಳಿಸುವ ಪ್ರವೃತ್ತಿ ನಿಲ್ಲಬೇಕು.
- ಅಹಿಂಸಾ ಚೇತನ, ನಟ