ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸಿದ್ದು, ಮಲೆನಾಡಿಗರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಮಳೆಗಾಗಿ ನಡೆದ ವಿಶೇಷ ಪೂಜೆ ಮುಗಿಯುವಷ್ಟರಲ್ಲೇ ಭಾರೀ ಮಳೆ ಸುರಿದ ಘಟನೆ ಭಕ್ತರಲ್ಲಿ ಸಂತಸ ಮೂಡಿಸಿದೆ.

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು

Add Asianetnews Kannada as a Preferred SourcegooglePreferred

ಚಿಕ್ಕಮಗಳೂರು (ಮಾ.15): ಚಿಕ್ಕಮಗಳೂರು ಜಿಲ್ಲೆ ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸಿದ್ದು, ಮಲೆನಾಡಿಗರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಮಳೆಗಾಗಿ ನಡೆದ ವಿಶೇಷ ಪೂಜೆ ಮುಗಿಯುವಷ್ಟರಲ್ಲೇ ಭಾರೀ ಮಳೆ ಸುರಿದ ಘಟನೆ ಭಕ್ತರಲ್ಲಿ ಆಶ್ಚರ್ಯ ಮತ್ತು ಸಂತಸ ಮೂಡಿಸಿದೆ.

ಕಳಸದಲ್ಲಿ ನಡೆದ ಪೂಜೆ: ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾದ ಕಳಸದ ಕಳಸೇಶ್ವರ ದೇವಸ್ಥಾನದಲ್ಲಿ ಇಂದು ನಾಡಿನ ಸುವೃಷ್ಟಿಗಾಗಿ ವಿಶೇಷ ಪೂಜೆಗಳು ನಡೆಯಿತು. ಶತಾರುದ್ರಾಭಿಷೇಕ, ರುದ್ರಹೋಮ ಹಾಗೂ ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಪೂಜೆ ನಡೆಯುತ್ತಿದ್ದಂತೆಯೇ ಮಲೆನಾಡಿನ ಹಲವೆಡೆ ವರುಣ ದೇವ ಅಬ್ಬರಿಸಿದ್ದಾನೆ.

ಬಿಸಿಲಿನ ಧಗೆಗೆ ಕಂಗೆಟ್ಟಿದ್ದ ಜನರಿಗೆ ತಂಪು

ಶೃಂಗೇರಿ, ಕಳಸ, ಎನ್.ಆರ್.ಪುರ, ಮುತ್ತೋಡಿ, ಹೊರನಾಡು, ಕುದುರೆಮುಖ ಹಾಗೂ ಹಿರೇಬೈಲ್ ಭಾಗಗಳಲ್ಲಿ ಕಳೆದ ಒಂದು ಗಂಟೆಯಿಂದ ಧಾರಾಕಾರ ಮಳೆ ಸುರಿದಿದೆ. ಈ ಮಳೆಯಿಂದಾಗಿ ಬಿಸಿಲಿನ ಧಗೆಗೆ ಕಂಗೆಟ್ಟಿದ್ದ ಜನರಿಗೆ ತಂಪು ದೊರೆತಿದೆ.ವಿಶೇಷವಾಗಿ ಕಾಫಿ ಮತ್ತು ಅಡಿಕೆ ಬೆಳೆಗಾರರಲ್ಲಿ ಈ ಮಳೆ ಹೊಸ ಆಶಾಭಾವನೆ ಮೂಡಿಸಿದೆ. ತೋಟಗಳಿಗೆ ನೀರಾಯಿಸಲು ಪರದಾಡುತ್ತಿದ್ದ ಬೆಳೆಗಾರರು ಇದೀಗ ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನು ಕನಿಷ್ಠ 15 ದಿನಗಳವರೆಗೆ ತೋಟಗಳಿಗೆ ನೀರು ಹಾಕುವ ಅವಶ್ಯಕತೆ ಇಲ್ಲ ಎಂದು ಬೆಳೆಗಾರರು ಹೇಳುತ್ತಿದ್ದಾರೆ.ಚಿಕ್ಕಮಗಳೂರು ನಗರದಲ್ಲೂ ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ಸಾಧಾರಣ ಮಳೆಯಾಗಿದೆ. ಮಳೆಗಾಗಿ ಆಕಾಶ ನೋಡುತ್ತಿದ್ದ ಮಲೆನಾಡಿಗರಲ್ಲಿ ಈ ಮಳೆ ಸಂತಸ ತಂದಿದೆ.ಒಟ್ಟಾರೆ, ಕಾಫಿನಾಡ ಮಲೆನಾಡು ಭಾಗದಲ್ಲಿ ಸುರಿದ ಮಳೆ ಬೆಳೆಗಾರರಿಗೆ ನೆಮ್ಮದಿ ಮತ್ತು ಹೊಸ ನಿರೀಕ್ಷೆ ಮೂಡಿಸಿದೆ.