ಚಿತ್ರದುರ್ಗ ತಾಲೂಕಿನ ಭೀಮಸಮುದ್ರ ಕ್ಯಾಂಪ್ ಗ್ರಾಮದಲ್ಲಿ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕಾಂತರಾಜ್ ಎಂಬ ವ್ಯಕ್ತಿಯನ್ನು ಕಲ್ಲಿನಿಂದ ಹೊಡೆದು ಹತ್ಯೆ ಮಾಡಲಾಗಿದೆ. ರಾಜಿಗೆ ಒಪ್ಪದಿದ್ದಕ್ಕೆ ಈ ಕೃತ್ಯ ನಡೆದಿದ್ದು, ಪೊಲೀಸರು ಆರೋಪಿ ನರಸಿಂಹಪ್ಪನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಚಿತ್ರದುರ್ಗ: ಹಳೆಯ ದ್ವೇಷದ ಹಿನ್ನೆಲೆ ವ್ಯಕ್ತಿಯೊಬ್ಬನನ್ನು ಕಲ್ಲಿನಿಂದ ಹೊಡೆದು ಹತ್ಯೆ ಮಾಡಿದ ಘಟನೆ ಚಿತ್ರದುರ್ಗ ತಾಲೂಕಿನ ಭೀಮಸಮುದ್ರ ಕ್ಯಾಂಪ್ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆಯಾದ ವ್ಯಕ್ತಿಯನ್ನು ಭೀಮಸಮುದ್ರ ಕ್ಯಾಂಪ್ ಗ್ರಾಮದ ಕಾಂತರಾಜ್ (35) ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಅದೇ ಗ್ರಾಮದ ನಿವಾಸಿ ನರಸಿಂಹಪ್ಪ (57) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Add Asianetnews Kannada as a Preferred SourcegooglePreferred

ಹಳೆಯ ದ್ವೇಷವೇ ಕಾರಣ

ಪೊಲೀಸ್ ಮಾಹಿತಿಯ ಪ್ರಕಾರ, ಕಾಂತರಾಜ್ ಮತ್ತು ನರಸಿಂಹಪ್ಪ ನಡುವೆ ಹಳೆಯ ವೈಷಮ್ಯವಿತ್ತು. 2020ರಲ್ಲಿ ಇವರಿಬ್ಬರ ನಡುವೆ ಗಲಾಟೆ ನಡೆದಿದ್ದು, ಆ ಸಂದರ್ಭದಲ್ಲಿ ನರಸಿಂಹಪ್ಪ ಮೇಲೆ ಕಾಂತರಾಜ್ ಹಲ್ಲೆ ನಡೆಸಿದ್ದನು. ಈ ಸಂಬಂಧ ನರಸಿಂಹಪ್ಪ ಅವರು ಕಾಂತರಾಜ್ ವಿರುದ್ಧ ದೂರು ದಾಖಲಿಸಿದ್ದರು. ನಂತರ ಈ ಪ್ರಕರಣದಲ್ಲಿ ರಾಜಿ ಮಾಡಿಕೊಂಡು ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ನರಸಿಂಹಪ್ಪ ಪ್ರಯತ್ನಿಸಿದ್ದಾನೆ ಎನ್ನಲಾಗಿದೆ. ರಾಜಿಗೆ ಒಪ್ಪುವಂತೆ ಕಾಂತರಾಜ್‌ಗೆ ₹20 ಸಾವಿರ ಹಣ ನೀಡುವುದಾಗಿ ಹೇಳಿದ್ದರೂ, ಕಾಂತರಾಜ್ ಅದನ್ನು ನಿರಾಕರಿಸಿದ್ದನು.

ರಾಜಿಗೆ ಒಪ್ಪದಿದ್ದಕ್ಕೆ ಕೊಲೆ

ರಾಜಿಗೆ ಒಪ್ಪದಿರುವುದರಿಂದ ಇಬ್ಬರ ನಡುವೆ ಮತ್ತೆ ಗಲಾಟೆ ಉಂಟಾಗಿ, ಇದು ಹತ್ಯೆಗೆ ದಾರಿ ಮಾಡಿಕೊಟ್ಟಿದೆ. ನಿನ್ನೆ ಸಂಜೆ ವೇಳೆ ನರಸಿಂಹಪ್ಪ, ಕಾಂತರಾಜ್ ತಲೆಗೆ ಕಲ್ಲಿನಿಂದ ಹೊಡೆದು ಗಂಭೀರವಾಗಿ ಗಾಯಗೊಳಿಸಿದ್ದಾನೆ ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡ ಕಾಂತರಾಜ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.

ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಒಟ್ಟಾರೆ, ಸಣ್ಣಸಣ್ಣ ವೈಷಮ್ಯಗಳು ಎಂತಹ ಭೀಕರ ಘಟನೆಗಳಿಗೆ ಕಾರಣವಾಗಬಹುದು ಎಂಬುದಕ್ಕೆ ಈ ಘಟನೆ ಮತ್ತೊಂದು ಉದಾಹರಣೆಯಾಗಿದೆ.