ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಹಾಗೂ ಸಂಚಾರ ವ್ಯವಸ್ಥೆಗೆ ಯಾವುದೇ ತೊಡಕು ಆಗದಂತೆ ಕಾರ್ಯಕ್ರಮ ಆಯೋಜಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು(ಅ.22): ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ 2ರ ಉದ್ಘಾಟನೆ ಹಾಗೂ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣಗೊಳಿಸಲು ನ.11ರಂದು ಆಗಮಿಸಲಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರು ಹಾಗೂ ಸಂಚಾರ ವ್ಯವಸ್ಥೆಗೆ ಯಾವುದೇ ತೊಡಕಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅಧಿಕಾರಿಗಳು ಮತ್ತು ಪೊಲೀಸರಿಗೆ ಸೂಚಿಸಿದ್ದಾರೆ.

Add Asianetnews Kannada as a Preferred SourcegooglePreferred

ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಈ ಕಾರ್ಯಕ್ರಮಗಳ ಸಿದ್ಧತೆಗಳ ಕುರಿತು ವಿವಿಧ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ಸಭೆ ನಡೆಸಿ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಹಾಗೂ ಸಂಚಾರ ವ್ಯವಸ್ಥೆಗೆ ಯಾವುದೇ ತೊಡಕು ಆಗದಂತೆ ಕಾರ್ಯಕ್ರಮ ಆಯೋಜಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

'ಆದಿ ಅನಂತ ಶಿವ...' ಕೇದಾರನಾಥದ ಶಿವಸ್ಥಳದಲ್ಲಿ ಮೋದಿ!

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಾಣಗೊಳ್ಳಲಿರುವ ‘ಕೆಂಪೇಗೌಡ ಥೀಮ್‌ ಪಾರ್ಕ್’ಗೆ ಪೂರ್ವಭಾವಿಯಾಗಿ ರಾಜ್ಯದ ಎಲ್ಲ ಜಿಲ್ಲೆಗಳ ಪವಿತ್ರ ಮೃತ್ತಿಕೆಯನ್ನು (ಮಣ್ಣು) ಸಂಗ್ರಹಿಸುವ ಬನ್ನಿ ನಾಡ ಕಟ್ಟೋಣ’ ಅಭಿಯಾನ ಶುಕ್ರವಾರ ಪ್ರಾರಂಭವಾಗಲಿದೆ. ಅಭಿಯಾನ ಯಶಸ್ವಿಗೊಳಿಸಲು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ, ತಾಪಂ ಕಾರ್ಯನಿರ್ವಹಣಾಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಪಿಡಿಒಗಳ ಸಹಕಾರ ಪಡೆಯುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಉನ್ನತ ಶಿಕ್ಷಣ ಡಾ. ಸಿ.ಎನ್‌.ಅಶ್ವತ್ಥ ನಾರಾಯಣ ಮಾತನಾಡಿ, ಮೃತ್ತಿಕೆ ಸಂಗ್ರಹಿಸಲು 20 ವಾಹನಗಳನ್ನು ವ್ಯವಸ್ಥೆಗೊಳಿಸಲಾಗಿದ್ದು, 15 ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಿ, ಮೃತ್ತಿಕೆ ಸಂಗ್ರಹಿಸಲಾಗುವುದು ಎಂದು ಮಾಹಿತಿ ನೀಡಿದರು. ಸಚಿವರಾದ ಆರ್‌.ಅಶೋಕ್‌, ಡಾ. ಕೆ.ಸುಧಾಕರ್‌, ಬಿ.ಎ.ಬಸವರಾಜ, ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣ ಗೌಡ, ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಕೃಷ್ಣಪ್ಪ, ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.