ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು: ಸಿಎಂ ಸಿದ್ದು..!
ಅಂತರ್ಜಾತಿ ವಿವಾಹಗಳಿಂದ ಜಾತಿ ನಾಶ ಸಾಧ್ಯ. ಅಂತರ್ಜಾತಿ ವಿವಾಹಗಳ ಜತೆಗೆ ಮಹಿಳೆಯರಿಗೆ ಹಾಗೂ ಎಲ್ಲಾ ವರ್ಗದ ದುರ್ಬಲರಿಗೆ ಆರ್ಥಿಕ ಶಕ್ತಿ ಸಿಕ್ಕಾಗ ಸಮ ಸಮಾಜದ ಆಶಯ ಈಡೇರಲು ಸಾಧ್ಯ. ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಕುವೆಂಪು ಅವರ ಆಶಯದಂತೆ ಸಮ ಸಮಾಜ ನಿರ್ಮಾಣ ಆಗಬೇಕಾದರೆ ಅಂತರ್ಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು(ಮೇ.24): ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.
ಕುವೆಂಪುನಗರದ ಚಿಕ್ಕಮ್ಮಾನಿಕೇತನ ಕಲ್ಯಾಣ ಮಂಟಪದಲ್ಲಿ ಜನ ಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆಯ ವೆಬ್ಸೈಟ್ ಉದ್ಘಾಟಿಸಿ ಮಾತನಾಡಿ, ಮದುವೆಗೆ ಹುಡುಗಿಯೂ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಎಂದು ತಮ್ಮ ಕಾಲೇಜು ದಿನಗಳನ್ನು ಸ್ಮರಿಸಿದರು.
ಮೈಸೂರಲ್ಲಿ ಹೆಚ್ಚುತ್ತಿವೆ ಅಂತರ್ಜಾತಿ ವಿವಾಹ! ಸಮಾಜ ಕಲ್ಯಾಣ ಇಲಾಖೆ ಅಂಕಿ-ಅಂಶಗಳು ಹೇಳೋದೇನು?
ಅಂತರ್ಜಾತಿ ವಿವಾಹಗಳಿಂದ ಜಾತಿ ನಾಶ ಸಾಧ್ಯ ಎಂದು ಪ್ರತಿಪಾದಿಸಿದ ಅವರು, ಅಂತರ್ಜಾತಿ ವಿವಾಹಗಳ ಜತೆಗೆ ಮಹಿಳೆಯರಿಗೆ ಹಾಗೂ ಎಲ್ಲಾ ವರ್ಗದ ದುರ್ಬಲರಿಗೆ ಆರ್ಥಿಕ ಶಕ್ತಿ ಸಿಕ್ಕಾಗ ಸಮ ಸಮಾಜದ ಆಶಯ ಈಡೇರಲು ಸಾಧ್ಯ. ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಕುವೆಂಪು ಅವರ ಆಶಯದಂತೆ ಸಮ ಸಮಾಜ ನಿರ್ಮಾಣ ಆಗಬೇಕಾದರೆ ಅಂತರ್ಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದರು.
ನಮ್ಮ ಸರ್ಕಾರ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮಗಳನ್ನು ಈಗಾಗಲೇ ಜಾರಿ ಮಾಡಿದೆ ಎಂದು ಸಿದ್ದರಾಮಯ್ಯ ಹೇಳಿದರು. ಕಾರ್ಯಕ್ರಮದಲ್ಲಿ ಸಚಿವರಾದ ಕೆ. ವೆಂಕಟೇಶ್, ಡಾ.ಎಚ್.ಸಿ.ಮಹದೇವಪ್ಪ ಮತ್ತಿತರರು ಇದ್ದರು.