ಎಲ್ಲ ಯೋಜನೆಗಳ ಫಲಾನುಭವಿಗಳನ್ನು ಕರೆದು ಗ್ಯಾರಂಟಿ ಯೋಜನೆಗಳ ಕುರಿತು ಸಮಾವೇಶ ನಡೆಸಲಾಗುವುದು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಮತ್ತು ಶಕ್ತಿ ಯೋಜನೆಗಳ ಫಲಾನುಭವಿಗಳನ್ನು ಸಮಾವೇಶಕ್ಕೆ ಆಹ್ವಾನಿಸಲಾಗುವುದು: ಜಿಲ್ಲಾಧಿಕಾರಿ ನಿತೇಶ್ ಪಾಟೀಲ 

ಬೆಳಗಾವಿ(ಫೆ.03): ಸರ್ಕಾರದ 5 ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಶಕ್ತಿ ಹಾಗೂ ಯುವನಿಧಿ ಫಲಾನುಭವಿಗಳ ಸಮಾವೇಶವನ್ನು ನಗರದ ಸರ್ದಾರ್ಸ್ ಹೈಸ್ಕೂಲ್ ಮೈದಾನದಲ್ಲಿ ಫೆ.5 ರಂದು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಎಲ್ಲ ಯೋಜನೆಗಳ ಫಲಾನುಭವಿಗಳನ್ನು ಕರೆದು ಗ್ಯಾರಂಟಿ ಯೋಜನೆಗಳ ಕುರಿತು ಸಮಾವೇಶ ನಡೆಸಲಾಗುವುದು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಮತ್ತು ಶಕ್ತಿ ಯೋಜನೆಗಳ ಫಲಾನುಭವಿಗಳನ್ನು ಸಮಾವೇಶಕ್ಕೆ ಆಹ್ವಾನಿಸಲಾಗುವುದು. ಫಲಾನುಭವಿಗಳನ್ನು ಗುರುತಿಸಿ ಅವರನ್ನು ಸಮಾವೇಶಕ್ಕೆ ಆಹ್ವಾನಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ತುರ್ತು ಚಿಕಿತ್ಸೆಗೆ ಅನುಕೂಲವಾಗುವಂತೆ ಆ್ಯಂಬ್ಯುಲೆನ್ಸ್‌ ಹಾಗೂ ವೈದ್ಯಕೀಯ ತಂಡಗಳನ್ನು ನಿಯೋಜಿಸಬೇಕು ಎಂದು ಸೂಚನೆ ನೀಡಿದರು.

ಬರ ನಿರ್ವಹಣೆ ಅಗತ್ಯ ಸಿದ್ಧತೆಗೆ ಸೂಚನೆ: ಸಚಿವ ಕೃಷ್ಣ ಭೈರೇಗೌಡ

ಶಾಸಕ ಆಸಿಫ್(ರಾಜು) ಸೇಠ್ ಮಾತನಾಡಿ, ಪ್ರತಿವರ್ಷ ಸರ್ಕಾರದಿಂದ ₹60 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಆದ್ದರಿಂದ ಎಲ್ಲ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಯೋಜನೆಗಳ ಬಗ್ಗೆ ಇನ್ನಷ್ಟು ಅರಿವು ಮೂಡಿಸುವ ಕಾರಣಕ್ಕೆ ಸಮಾವೇಶ ಆಯೋಜಿಸಲಾಗುತ್ತಿದೆ. ಬೆಳಗಾವಿ ಉತ್ತರ, ದಕ್ಷಿಣ ಹಾಗೂ ಗ್ರಾಮೀಣ ಮತಕ್ಷೇತ್ರಗಳಲ್ಲಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳನ್ನು ಸಮಾವೇಶಕ್ಕೆ ಆಹ್ವಾನಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಗೃಹಲಕ್ಷ್ಮಿ ಮಾತ್ರವಲ್ಲದೇ ಇತರೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಕರೆತರಬೇಕು. ಇದಕ್ಕಾಗಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳನ್ನು ಸಮನ್ವಯಕ್ಕಾಗಿ ನಿಯೋಜಿಸಬೇಕು ಎಂದರು.

ಮಹಾನಗರ ಪಾಲಿಕೆಯ ಆಯುಕ್ತ ಅಶೋಕ ದುಡಗುಂಟಿ ಮಾತನಾಡಿ, ಸಮಾವೇಶಕ್ಕೆ ಆಗಮಿಸುವ ಫಲಾನುಭವಿಗಳಿಗೆ ಊಟೋಪಹಾರ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು ಎಂದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ್ ಕಂಕಣವಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಸವರಾಜ್, ವಾರ್ತಾ ಇಲಾಖೆ ಉಪ ನಿರ್ದೇಶಕ ಗುರುನಾಥ ಕಡಬೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಶೆಟ್ಟರ್‌ ಬಳಿಕ ಮತ್ತೊಬ್ಬ ಕಾಂಗ್ರೆಸ್‌ ನಾಯಕ ಬಿಜೆಪಿಗೆ ವಾಪಸ್‌?

ಸಮಾವೇಶದ ಸಿದ್ಧತೆ ಪರಿಶೀಲನೆ: ಪೂರ್ವಭಾವಿ ಸಭೆಯ ಬಳಿಕ ಸರದಾರ ಹೈಸ್ಕೂಲ್ ಮೈದಾನಕ್ಕೆ ಭೇಟಿ ನೀಡಿದ ಶಾಸಕ ಆಸಿಫ್‌ ಸೇಠ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶದ ಸಿದ್ಧತೆಗಳನ್ನು ಪರಿಶೀಲಿಸಿದರು. ಸಮಾವೇಶದಲ್ಲಿ 15 ಸಾವಿರಕ್ಕೂ ಹೆಚ್ಚು ಫಲಾನುಭವಿಗಳು ಭಾಗವಹಿಸಲಿರುವುದರಿಂದ ಊಟ, ಕುಡಿಯುವ ನೀರು, ಪಾರ್ಕಿಂಗ್ ಮತ್ತಿತರ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ಅನಾನುಕೂಲ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ನಗರದಲ್ಲಿಯೇ ಸಮಾವೇಶ‌ ನಡೆಯಲಿರುವುದರಿಂದ ಗ್ಯಾರಂಟಿ ಯೋಜನೆ ಫಲಾನುಭವಿಗಳು ಮತ್ತು ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಎಲ್ಲ ಯೋಜನೆಗಳ ಫಲಾನುಭವಿಗಳನ್ನು ಕರೆದು ಗ್ಯಾರಂಟಿ ಯೋಜನೆಗಳ ಕುರಿತು ಸಮಾವೇಶ ನಡೆಸಲಾಗುವುದು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಮತ್ತು ಶಕ್ತಿ ಯೋಜನೆಗಳ ಫಲಾನುಭವಿಗಳನ್ನು ಸಮಾವೇಶಕ್ಕೆ ಆಹ್ವಾನಿಸಲಾಗುವುದು. ಫಲಾನುಭವಿಗಳನ್ನು ಗುರುತಿಸಿ ಅವರನ್ನು ಸಮಾವೇಶಕ್ಕೆ ಆಹ್ವಾನಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.