ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಪಡೆದುಕೊಂಡಿದೆ. ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸೋತ ಕೆಲ ತಿಂಗಳಲ್ಲೇ ಮತ್ತೆ ಜಯಭೇರಿ ಭಾರಿಸಿರುವುದು ಕೈ ಮುಖಂಡರಲ್ಲಿ ಹರ್ಷ ಹೆಚ್ಚಿಸಿದೆ. 

 ಶಿರಾ (ಫೆ.23): ಶಿರಾ ತಾಲೂಕಿನ ಗ್ರಾಪಂ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿದ್ದಾರೆ. 21 ಪಂಚಾಯಿತಿಗಳಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬರಗೂರು ನಟರಾಜ್‌ ಹೇಳಿದರು.

Add Asianetnews Kannada as a Preferred SourcegooglePreferred

ಅವರು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ವಿಧಾನಸಭೆ ಉಪ ಚುನಾವಣೆಯಲ್ಲಿ ನಾವು ಸೋತ ಕೆಲವೇ ದಿನಗಳಲ್ಲಿ ತಾಲೂಕಿನ ಗ್ರಾ.ಪಂ. ಚುನಾವಣೆಯಲ್ಲಿ ಗೆದ್ದಿದ್ದೇವೆ. ಇದು ನಮ್ಮ ಜಯ, ಬ್ಯಾಲೆಟ್‌ ಪೇಪರ್‌ನಲ್ಲಿ ಚುನಾವಣೆ ನಡೆದರೆ ಕಾಂಗ್ರೆಸ್‌ ಪಕ್ಷ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ. ಮುಂದಿನ ದಿನಗಳಲ್ಲಿ ಇದೇ ರೀತಿ ಚುನಾವಣೆ ನಡೆಯಲಿ ಎಂದರು.

ಕರ್ನಾಟಕ ಬಿಜೆಪಿ ಸಂಸದ ಪುತ್ರ ಕಾಂಗ್ರೆಸ್‌ನತ್ತ: ಅನಿವಾರ್ಯ ಎಂದ ತಂದೆ

ಸನ್ಮಾನ ಸಮಾರಂಭ: ಕಾಂಗ್ರೆಸ್‌ ಮುಖಂಡ ಸಂಜಯ್‌ ಜಯಚಂದ್ರ ಮಾತನಾಡಿ, ಶಿರಾ ತಾಲೂಕಿನ ಗ್ರಾಪಂ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಬೆಂಬಲದಿಂದ ವಿಜೇತರಾಗಿರುವ ಸದಸ್ಯರು ಹಾಗೂ ಅಧ್ಯಕ್ಷರು, ಉಪಾಧ್ಯಕ್ಷರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಫೆ.23ರಂದು ಬೆಳಗ್ಗೆ 11 ಗಂಟೆಗೆ ನಗರದ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸಚಿವ ಟಿ.ಬಿ.ಜಯಚಂದ್ರ ವಹಿಸಲಿದ್ದಾರೆ, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಸದ ಡಿ.ಕೆ.ಸುರೇಶ್‌, ಶಾಸಕ ವೆಂಕಟರಮಣಪ್ಪ, ಡಾ.ರಂಗನಾಥ್‌, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಕೆ.ಎನ್‌.ರಾಜಣ್ಣ, ಮಾಜಿ ಸಂಸದ ಬಿ.ಎನ್‌.ಚಂದ್ರಪ್ಪ, ಎಸ್‌.ಪಿ.ಮುದ್ದಹನುಮೇಗೌಡ ಸೇರಿದಂತೆ ಹಲವಾರು ಮುಖಂಡರು ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು, ಮಹಿಳಾ ಕಾರ್ಯಕರ್ತೆಯರು ಆಗಮಿಸಬೇಕೆಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್‌ ನಗರ ಮಹಿಳಾ ಅಧ್ಯಕ್ಷೆ ರೇಖಾ, ಹರೀಶ್‌, ಸಚಿನ್‌ ಸೇರಿದಂತೆ ಹಲವರು ಹಾಜರಿದ್ದರು.