ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳೇ ಸಿಗುತ್ತಿಲ್ಲ ಎಂದು ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ. ರಾಜೇಶ್ ಟೀಕಿಸಿದರು.

ಮೈಸೂರು : ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳೇ ಸಿಗುತ್ತಿಲ್ಲ ಎಂದು ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ. ರಾಜೇಶ್ ಟೀಕಿಸಿದರು.

Add Asianetnews Kannada as a Preferred SourcegooglePreferred

ಸೋಮವಾರ ನಡೆದ ನಗರ ಬಿಜೆಪಿ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದ ಅವರು, ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಗೆ ಅಭ್ಯರ್ಥಿಗಳೇ ಸಿಗುತ್ತಿಲ್ಲ. ಆ ನಾಯಕರಿಗೆ ಕಣಕ್ಕಿಳಿಯುಲು ಧೈರ್ಯವಾಗಲಿ ಅಥವಾ ಆಸಕ್ತಿಯಾಗಲಿ ಇಲ್ಲ. ಆದ್ದರಿಂದ, ಅರ್ಜಿ ಆಹ್ವಾನಿಸಿದರೂ ಆ ಪಕ್ಷದ ಯಾವೊಬ್ಬ ನಾಯಕನೂ ಟಿಕೆಟ್ ಗೆ ಅರ್ಜಿ ಸಲ್ಲಿಸುವುದೇ ಇಲ್ಲ ಎಂದರು.

ಲೋಕಸಭಾ ಚುನಾವಣೆಯಲ್ಲಿ ಸ್ಫರ್ಧಿಸಲು ಸಮರ್ಥರಿಲ್ಲದೆ ಕಾಂಗ್ರೆಸ್ ನಾಯಕರು ಪರದಾಡುತ್ತಿದ್ದಾರೆ. ಅರ್ಜಿ ಕರೆದರೆ ಕಾಂಗ್ರೆಸ್ ನಿಜ ಬಣ್ಣ ಬಯಲಾಗುತ್ತದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಡಿದಂತೆ ಲೋಕಸಭಾ ಚುನಾವಣೆಗೂ 2 ಲಕ್ಷ ಕೊಟ್ಟು ಟಿಕೆಟ್ ಗೆ ಅರ್ಜಿ ಸಲ್ಲಿಸುವಂತೆ ಸೂಚಿಸಲಿ ಎಂದು ಗೇಲಿ ಮಾಡಿದರು.

ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ಶಾಸಕರು ಕೂಡ ಅಭಿವೃದ್ಧಿ ಕಾಮಗಾರಿಗಳಿಗೆಂದು ಗುದ್ದಲಿಪೂಜೆ ನಡೆಸುವುದಕ್ಕೂ ಸಾಧ್ಯವಾಗುತ್ತಿಲ್ಲ. ಗ್ಯಾರಂಟಿ ಹೆಸರಲ್ಲಿ ತಮ್ಮ ನಾಯಕರ ಜೇಬು ತುಂಬಿಸುವ ಕೆಲಸವನ್ನಷ್ಟೆ ಕಾಂಗ್ರೆಸ್ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಅದಕ್ಕೆ ನೀಡಿದ ಅನುದಾನದ ಕುರಿತು ಸರ್ಕಾರ ಶ್ವೇತಪತ್ರ ಹೊರಡಿಸಬೇಕು. ಕೇಂದ್ರ ಸರ್ಕಾರದ ಬಗ್ಗೆ ಮಾತನಾಡುವ ಮೊದಲು ರಾಜ್ಯದ ಹಣಕಾಸಿನ ಬಗ್ಗೆ ತಿಳಿಸಲಿ. ಕಾಂಗ್ರೆಸ್ ಬಡವರ ಹೆಸರಿನಲ್ಲಿ ಹಣ ದೋಚುತ್ತಿದೆ. ಬರ ಪರಿಹಾರ ಕಾಮಗಾರಿ ಕೂಡ ನಡೆಯುತ್ತಿಲ್ಲ. ಇದೆಲ್ಲವನ್ನೂ ನಾವು ಮತದಾರರಿಗೆ ತಿಳಿಸಿಕೊಡಬೇಕು. ಮೋದಿ ಮತ್ತೊಂದು ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದರೂ ಈ ಬಾರಿ ದಾಖಲೆ ಮುರಿಯಲು ಆಗದ ಫಲಿತಾಂಶ ನೀಡಬೇಕು ಎಂದು ಅವರು ತಿಳಿಸಿದರು.