ಸೋಮಶೇಖರ್ ರೆಡ್ಡಿ ವಿರುದ್ಧ ಆಕ್ರೋಶ ಹೊರಹಾಕಲಾಗಿದ್ದು, ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಜನವರಿ 14 ರಂದು  ಪ್ರತಿಭಟನೆ ನಡೆಸಲಾಗುತ್ತಿದೆ.

ಶಿವಮೊಗ್ಗ (ಜ.12): ಬಹಿರಂಗ ಸಭೆಯೊಂದರಲ್ಲಿ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಮುಸ್ಲಿಂ ಸಮುದಾಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕ ವತಿಯಿಂದ ಜ. 14 ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಘಟಕದ ಅಧ್ಯಕ್ಷ ಮಹಮ್ಮದ್‌ ಆರೀಫ್‌ ಉಲ್ಲಾ ಹೇಳಿದರು.

Add Asianetnews Kannada as a Preferred SourcegooglePreferred

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಸೋಮಶೇಖರ ನೀಡಿರುವ ಹೇಳಿಕೆಯಿಂದ ಹಿಂದೂ ಮತ್ತು ಮುಸ್ಲಿಂರ ನಡುವೆ ವಿಷಬೀಜ ಬಿತ್ತಿದಂತಾಗಿದೆ. ಸಮಾಜದಲ್ಲಿ ಶಾಂತಿ ಕದಡುವ, ಧರ್ಮಗಳ ನಡುವೆ ಸಂಘರ್ಷ ಉಂಟುಮಾಡುವ ಹೇಳಿಕೆ ನೀಡಿರುವುದು ಖಂಡನೀಯ ಎಂದರು.

'ಎಲ್ಲ CDಗಳು ಬಯಲಾದರೆ ಬಿಜೆಪಿಗರು ಬೆತ್ತಲಾಗುತ್ತಾರಷ್ಟೇ'...

ಮುಸ್ಲಿಂ ಸಮುದಾಯವನ್ನು ಅವಹೇಳನ ಮಾಡಿರುವ ಶಾಸಕ ಸೋಮಶೇಖರ ರೆಡ್ಡಿ ಅವರನ್ನು ಬಂಧಿಸುವಂತೆ ಆಗ್ರಹಿಸಿ ಜ. 13 ರಂದು ಶಾಸಕ ಜಮೀರ್‌ ಅಹಮದ್‌ ಖಾನ್‌ ನೇತೃತ್ವದಲ್ಲಿ ಬಳ್ಳಾರಿಗೆ ತೆರಳಿ ಸೋಮಶೇಖರ ರೆಡ್ಡಿ ಮನೆ ಮುಂದೆ ಧರಣಿ ನಡೆಸಲಾಗುತ್ತಿದೆ. ಇದಕ್ಕೆ ಬೆಂಬಲ ವ್ಯಕ್ತಪಡಿಸಿ ಶಿವಮೊಗ್ಗದಲ್ಲಿಯೂ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದಿಂದ ಜ. 14 ರಂದು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಲಾಗುವುದು. ಜೊತೆಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರ ಶಿವಮೊಗ್ಗದ ಮನೆಗೆ ಮುತ್ತಿಗೆ ಹಾಕಲಾಗುವುದು, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಅಲ್ಪಸಂಖ್ಯಾತರ ಘಟಕದ ನಗರ ಅಧ್ಯಕ್ಷ ಮಹಮದ್‌ ನಿಹಾಲ್‌ ಮಾತನಾಡಿ, ಸೋಮಶೇಖರ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ವಜಾ ಗೊಳಿಸಬೇಕು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.