ಪಿ.ಗೊಲ್ಲಹಳ್ಳಿ ಮತ್ತು ಸೋರೆಕುಂಟೆ ವ್ಯಾಪ್ತಿಯಲ್ಲಿ 41 ಎಕರೆ ಭೂಮಿಯನ್ನು ಕೆಐಎಡಿಬಿ ವತಿಯಿಂದ ಕೆಎಸ್‌ಸಿಎ ಅವರಿಗೆ ಹಸ್ತಾಂತರಿಸಿದ್ದೇವೆ. 150 ಕೋಟಿ ರು. ವೆಚ್ಚದ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣವಾಗುತ್ತಿದ್ದು, ಎರಡು ವರ್ಷದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ: ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ 

ತುಮಕೂರು(ನ.30): ಜಿಲ್ಲೆಯ ಹಲವು ವರ್ಷಗಳ ಬೇಡಿಕೆಯಾದ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಇದೀಗ ಕಾಲ ಕೂಡಿ ಬಂದಿದ್ದು, ಡಿ.2 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಿ. ಗೊಲ್ಲಹಳ್ಳಿ-ಸೋರೆಕುಂಟೆ ಬಳಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪಿ.ಗೊಲ್ಲಹಳ್ಳಿ ಮತ್ತು ಸೋರೆಕುಂಟೆ ವ್ಯಾಪ್ತಿಯಲ್ಲಿ 41 ಎಕರೆ ಭೂಮಿಯನ್ನು ಕೆಐಎಡಿಬಿ ವತಿಯಿಂದ ಕೆಎಸ್‌ಸಿಎ ಅವರಿಗೆ ಹಸ್ತಾಂತರಿಸಿದ್ದೇವೆ. 150 ಕೋಟಿ ರು. ವೆಚ್ಚದ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣವಾಗುತ್ತಿದ್ದು, ಎರಡು ವರ್ಷದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

ಕಾಂಗ್ರೆಸ್ ಶಾಸಕರಿಗೆ ತಲಾ 25 ಕೋಟಿ, ವಿಪಕ್ಷ ಶಾಸಕರಿಗೆ 10 ಕೋಟಿ ರೂ. ಅನುದಾನ ಹಂಚಿಕೆ; ಪರಮೇಶ್ವರ

ನಂತರ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಡಿ. 2 ರಂದು ಬೆಳಿಗ್ಗೆ 11 ಗಂಟೆಗೆ ಸುಮಾರು 938.03 ಕೋಟಿ ರು. ವೆಚ್ಚದ 825 ಕಾಮಗಾರಿಗಳಿಗೆ ಶಂಕುಸ್ಥಾಪನೆ 94.22 ಕೋಟಿ ರು. ವೆಚ್ಚದ 66 ನೂತನ ಕಾಮಗಾರಿಗಳ ಉದ್ಘಾಟನೆ ಮತ್ತು 226.96 ಕೋಟಿ ರು. ವೆಚ್ಚದಲ್ಲಿ 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು, ಸಲಕರಣೆ ಮತ್ತು ಧನ ಸಹಾಯ ಚೆಕ್ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಇಂಧನ ಸಚಿವ ಕೆ.ಜೆ.ಜಾರ್ಜ್‌, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಬೃಹತ್ ಕೈಗಾರಿಕೆ ಸಚಿವ ಎಂಬಿ.ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಕೃಷಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಜಿಲ್ಲೆಯ ಎಲ್ಲ ಕ್ಷೇತ್ರಗಳ ಶಾಸಕರು ಹಾಗೂ ಕೇಂದ್ರ ಸಚಿವ ವಿ.ಸೋಮಣ್ಣ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು. 

ಕೃಷಿ ಇಲಾಖೆಯಿಂದ ಫಲಾನುಭವಿ ರೈತರಿಗೆ ಟ್ಯಾಕ್ಟರ್, ಡಿಸೇಲ್ ಎಂಜಿನ್, ಪಿವಿಸಿ ಪೈಪ್, ತುಂತುರು ನೀರಾವರಿಯ ಕಿಟ್ಗಳು, ತೋಟಗಾರಿಕೆ ಇಲಾಖೆಯಲ್ಲಿ ಹನಿ ನೀರಾವರಿ, ಪವರ್‌ಫೀಡರ್ಸ್, ರೇಷ್ಮೆ ಇಲಾಖೆಯ 21000 ಫಲಾನುಭವಿಗಳಿಗೆ ಸೋಂಕು ನಿವರಣಾ ಕಿಟ್, ದೇವರಾಜು ಅರಸು ನಿಗಮದಿಂದ ಮಹಿಳೆಯರಿಗೆ 200 ಹೊಲಿಗೆ ಯಂತ್ರ, ಟ್ಯಾಕ್ಸಿ, ಕಾರ್ಮಿಕ ಇಲಾಖೆಯಿಂದ ವೆಲ್ಡಿಂಗ್ ಟೂಲ್ ಕಿಟ್ ಸೇರಿದಂತೆ ಜಿಲ್ಲಾಡಳಿತ ಗುರುತಿಸಿರುವ 1.50 ಲಕ್ಷ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳನ್ನು ಹಂಚಿಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು. 

ತುಮಕೂರಿಗೆ ಮೆಟ್ರೋ ರೈಲು ಯೋಜನೆ ಡಿಪಿಆರ್‌ ನಡೆಯುತ್ತಿದೆ. ಹೈದರಾಬಾದ್ ಮೂಲದ ಕಂಪೆನಿಗೆ ಟೆಂಡರ್‌ ಆಗಿದ್ದು, ಒಂದೂವರೆ ತಿಂಗಳಿಂದ ಮಾಡುತ್ತಿದೆ. ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಪಿಪಿಪಿ ಮಾದರಿಯಲ್ಲಿ ಟೌನ್‌ಶಿಪ್ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.

ಈ ಅಭೂತ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಿಂದ ಸುಮಾರು 1.50 ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಮುಖ್ಯಮಂತ್ರಿಗಳ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರದಲ್ಲಿ 2 ರಿಂದ 3 ಕಡೆಗಳಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಹೇಳಿದರು.

ಮೂರೇ ವರ್ಷದಲ್ಲಿ ತುಮಕೂರಿನ ಚಿತ್ರಣವೇ ಬದಲು: ಕೇಂದ್ರ ಸಚಿವ ಸೋಮಣ್ಣ

ಸಹಕಾರ ಸಚಿವ ಕೆ.ಎನ್. ರಾಜಣ್ಣ ಮಾತನಾಡಿ, ರಾಜ್ಯ ಸರ್ಕಾರಲ್ಲಿ ಹಣ ಮಾಯವಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಆಗದೆ ದಿವಾಳಿಯಾಗಿದೆ ಎಂಬ ವಿರೋಧ ಪಕ್ಷಗಳ ಆರೋಪಗಳಿಗೆ ಉತ್ತರವಾಗಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಅಭಿವೃದ್ಧಿ ಕಾರ್ಯಗಳಿಗೆ ಹಣ ಇಲ್ಲ ಎಂದು ಸುಳ್ಳು ಹೇಳುತ್ತಾ ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿರುವ ವಿಪಕ್ಷಗಳಿಗೆ ಈ ಕಾರ್ಯಕ್ರಮವೇ ಉತ್ತರವಾಗಲಿದೆ ಎಂದರು. 

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ. ಸಿಇಓ ಜಿ. ಪ್ರಭು, ಮಹಾನಗರ ಪಾಲಿಕೆಯ ಆಯುಕ್ತ ಅಶ್ವಿಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಆಶೋಕ್ ಮತ್ತಿತರರು ಉಪಸ್ಥಿತರಿದ್ದರು.