ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆಯ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸಾರ್ವಜನಿಕರಿಗೆ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಪರಿಣಾಮಗಳ ಅರಿವು ಅಗತ್ಯ ಎಂದು ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ತಿಳಿಸಿದರು

ಚಾಮರಾಜನಗರ : ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆಯ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸಾರ್ವಜನಿಕರಿಗೆ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಪರಿಣಾಮಗಳ ಅರಿವು ಅಗತ್ಯ ಎಂದು ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ತಿಳಿಸಿದರು. ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತು ಸೇವನೆ ಮತ್ತು ಕಳ್ಳಸಾಗಾಣಿಕೆ ವಿರೋಧಿ ದಿನಾಚರಣೆ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.

ಒತ್ತಡದ ಜೀವನ ಹಾಗೂ ನೋವಿನ ದಿನಗಳಿಂದ ಹೊರಬರಲು ಮಾದಕ ವಸ್ತುಗಳಿಗೆ ಬಲಿಯಾಗುತ್ತಿದ್ದಾರೆ. ಮಾದಕ ವಸ್ತುಗಳ ಬಗ್ಗೆ ಯುವ ಜನತೆ ಆಸಕ್ತಿ ತೋರುತ್ತಿರುವುದು ಆಘಾತಕಾರಿ ವಿಷಯ.

ಮಾದಕ ವಸ್ತುಗಳ ಸೇವನೆಯು ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ದೈಹಿಕ ಮತ್ತು ಮಾನಸಿಕವಾಗಿ ಹಿಂದೆ ಬೀಳುವ ಸಾಧ್ಯತೆಯು ಉಂಟು ಎಂದು ಹೇಳಿದರು.

ಮಾದಕ ವಸ್ತುಗಳ ಬಗ್ಗೆ ಹೆಚ್ಚು ಎಚ್ಚರಿಕೆವಹಿಸಿ ಮಾದಕ ವ್ಯಸನಗಳಿಗೆ ಬಲಿಯಾಗದಂತೆ ನೋಡಿಕೊಳ್ಳಬೇಕು. ಸಾಧ್ಯವಾದಷ್ಟುದುಶ್ಚಟಗಳಿಂದ ದೂರ ಉಳಿದು ಉತ್ತಮ ಆರೋಗ್ಯಜೀವನದ ಕಡೆ ಮುಖ ಮಾಡಬೇಕು. ಸಾರ್ವಜನಿಕರು ತಮ್ಮ ಸುತ್ತಲಿನಲ್ಲಿ ಈ ರೀತಿಯ ಚಟುವಟಿಕೆಗಳು ಅರಿವಿಗೆ ಬಂದಾಗ ಸಂಬಂಧಪಟ್ಟವರಿಗೆ ತಿಳಿಸಬೇಕು ಎಂದು ಹೇಳಿದರು.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಬಿ.ಎಸ್‌.ಭಾರತಿ ಮಾತನಾಡಿ, ದುಶÜ್ಚಟಗಳಿಂದ ಕೌಟುಂಬಿಕ ಕಲಹ ಹೆಚ್ಚಾಗುತ್ತಿದೆ. ದುಶ್ಚಟಗಳೆಂದರೆ ಕೇವಲ ಕುಡಿತವೊಂದೆ ಅಲ್ಲ. ಇತ್ತೀಚಿನ ದಿನಗಳಲ್ಲಿ ಮೊಬೈಲ್‌ ಗೀಳು ಕೂಡ ಒಂದು ದೊಡ್ಡ ಚಟವಾಗಿ ಪರಿಣಮಿಸಿದೆ. ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಮೊಬೈಲ್‌ಚಟಗಳಿಗೆ ಬಲಿಯಾಗಿ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದರು.

ಪೋಷÜಕರು ಮಕ್ಕಳ ಚಟುವಟಿಕೆಗಳ ಬಗ್ಗೆ ಹೆಚ್ಚು ಗಮನಹರಿಸಬೇಕು. ಸಾರ್ವಜನಿಕರ ಹಿತಕೋಸ್ಕರ ಜಾಗೃತಿ ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಡಿ.ಎಸ್‌.ರಮೇಶ್‌ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾ.ಬಿ.ಎಸ್‌.ಭಾರತಿ ಹಸಿರು ನಿಶಾನೆ ತೋರುವ ಮೂಲಕ ಜಾಥಾಗೆ ಚಾಲನೆ ನೀಡಿದರು.

ಜಾಥಾವು ಚಾಮರಾಜೇಶ್ವರ ದೇವಸ್ಥಾನದಿಂದ ಆರಂಭವಾಗಿ ಜೈಭುವನೇಶ್ವರಿ ವೃತ್ತ, ಬಿ. ರಾಚಯ್ಯ ಜೋಡಿ ರಸ್ತೆ ಮೂಲಕ ಸಾಗಿ ಜಿಲ್ಲಾಡಳಿತ ಭವನದ ಮುಂಭಾಗ ಮುಕ್ತಾಯವಾಯಿತು.

ಸರ್ಕಾರಿ ನಸಿಂರ್‍ಗ್‌ ಶಾಲೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆ ಸಿಬ್ಬಂದಿ ಜಾಥಾದಲ್ಲಿ ಪಾಲ್ಗೊಂಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ​ಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಜಿಲ್ಲಾ ಮಾನಸಿಕ ಆರೋಗ್ಯಾ​ಧಿಕಾರಿ ಡಾ. ಚಂದ್ರಶೇಖರ್‌, ಜಿಲ್ಲಾ ಸರ್ವೆಲೆನ್ಸ್‌ ಅ​ಧಿಕಾರಿ ಡಾ. ನಾಗರಾಜು, ತಾಲೂಕು ಆರೋಗ್ಯಾಧಿ​ಕಾರಿ ಡಾ.ಶ್ರೀನಿವಾಸ್‌, ಡಾ. ಉಮಾರಾಣಿ, ಡಾ. ವಾಸು, ಜಿಲ್ಲಾ ಆರೋಗ್ಯ ಶಿಕ್ಷಣಾ​ಧಿಕಾರಿ ದೊರೆಸ್ವಾಮಿ ನಾಯಕ್‌ ಇದ್ದರು.