ಕೊರೋನಾ ಸೋಂಕು ತಗುಲಿದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಸಿಬ್ಬಂದಿಗಾಗಿ ನಗರದ ಪೀಣ್ಯ ಬಸವೇಶ್ವರ ಬಸ್‌ ನಿಲ್ದಾಣದಲ್ಲಿ ಶೀಘ್ರದಲ್ಲೇ ಪ್ರತ್ಯೇಕ ಕೊರೋನಾ ಆರೈಕೆ ಕೇಂದ್ರ ಪ್ರಾರಂಭಿಸುವುದಾಗಿ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ತಿಳಿಸಿದ್ದಾರೆ.

ಬೆಂಗಳೂರು(ಜು.30): ಕೊರೋನಾ ಸೋಂಕು ತಗುಲಿದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಸಿಬ್ಬಂದಿಗಾಗಿ ನಗರದ ಪೀಣ್ಯ ಬಸವೇಶ್ವರ ಬಸ್‌ ನಿಲ್ದಾಣದಲ್ಲಿ ಶೀಘ್ರದಲ್ಲೇ ಪ್ರತ್ಯೇಕ ಕೊರೋನಾ ಆರೈಕೆ ಕೇಂದ್ರ ಪ್ರಾರಂಭಿಸುವುದಾಗಿ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೊರೋನಾ ಸೋಂಕಿನಿಂದ ಗುಣಮುಖರಾಗಿ ಗುರುವಾರ ಕೇಂದ್ರ ಕಚೇರಿಗೆ ಕರ್ತವ್ಯಕ್ಕೆ ಹಾಜರಾದ ನಿಗಮದ ನೌಕರರನ್ನು ಹೂವು ಮತ್ತು ಸಸಿ ನೀಡಿ ಆತ್ಮೀಯವಾಗಿ ಬರಮಾಡಿಕೊಂಡು ಬಳಿಕ ಮಾತನಾಡಿದ ಅವರು, ‘ನಮ್ಮ ಚಾಲಕ ಮತ್ತು ನಿರ್ವಾಹಕರು ಕೊರೋನಾ ವಾರಿಯರ್‌ಗಳಾಗಿ ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಮುಂದೆ ಕೊರೋನಾ ಸೋಂಕಿಗೆ ತುತ್ತಾಗುವ ನೌಕರರಿಗೆ ಖಾಸಗಿ ಸಂಸ್ಥೆಯ ಸಹಯೋಗದಲ್ಲಿ ಪೀಣ್ಯದ ಬಸ್‌ ನಿಲ್ದಾಣದಲ್ಲಿ ಕೊರೋನಾ ಆರೈಕೆ ಕೇಂದ್ರ ಆರಂಭಿಸಲು ತೀರ್ಮಾನಿಸಲಾಗಿದೆ’ ಎಂದು ಹೇಳಿದರು.

2 ಸಾವಿರ ನರ್ಸ್‌ಗಳ ನೇಮಕಕ್ಕೆ ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ

‘ನಿಗಮದ ಯಾವುದೇ ಸಿಬ್ಬಂದಿ ಹಾಗೂ ಅಧಿಕಾರಿಗಳು ಕೊರೋನಾ ಸೋಂಕಿಗೆ ತುತ್ತಾದರೆ, ನಿಗಮದ ಅಧಿಕಾರಿಗಳು ಸೋಂಕಿತರು ಹಾಗೂ ಅವರ ಕುಟುಂಬದೊಂದಿಗೆ ನಿರಂತರ ಸಂಪರ್ಕದಲ್ಲಿ ಇರಬೇಕು.

ಅಗತ್ಯ ಸಲಹೆ, ಸಹಾಯ ಹಾಗೂ ಸೌಲಭ್ಯಗಳು ಒದಗಿಸಿ, ಧೈರ್ಯ ತುಂಬುವ ಕೆಲಸ ಮಾಡಬೇಕು’ ಎಂದು ಸೂಚಿಸಿ, ಕೊರೋನಾ ಸೋಂಕಿನಿಂದ ಗುಣಮುಖರಾಗಿ ಕರ್ತವ್ಯಕ್ಕೆ ಹಾಜರಾದ ನೌಕರರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಿಗಮದ ಭದ್ರತೆ ಮತ್ತು ಜಾಗೃತ ದಳದ ನಿರ್ದೇಶಕ ಡಾ.ರಾಮ್‌ ನಿವಾಸ್‌ ಸಪೆಟ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.