ಮಾದಕ ವಸ್ತು, ಡ್ರಗ್‌್ಸನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮವನ್ನು ಏರ್ಪಡಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲರು ಅಧಿಕಾರಿಗಳಿಗೆ ಸೂಚನೆ ನೀಡಿದರು

ತುಮಕೂರು : ಮಾದಕ ವಸ್ತು, ಡ್ರಗ್‌್ಸನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮವನ್ನು ಏರ್ಪಡಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ನಡೆದ ನ್ಯಾಷನಲ್‌ ನಾರ್ಕೋಟಿಕ್ಸ್‌ ಕೋ ಆರ್ಡಿನೇಷನ್‌ ಕಮಿಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದÜರು. ಮಕ್ಕಳು ಮಾದಕ ವಸ್ತುಗಳ ದುಶ್ಚಟಗಳಿಗೆ ಬಲಿಯಾಗದಂತೆ ಎಚ್ಚರವಹಿಸಬೇಕು. ಸಮಿತಿಯನ್ನು ಮತ್ತಷ್ಟುಬಲಪಡಿಸಲು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಮೆಡಿಕಲ್‌ ಮತ್ತು ಎಂಜಿನಿಯರಿಂಗ್‌ ಕಾಲೇಜುಗಳ ಪ್ರಾಂಶುಪಾಲರು, ವಿಶ್ವವಿದ್ಯಾನಿಲಯದ ನಿಬಂಧಕರು, ಮತ್ತು ಡೀನ್‌ಗಳನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಿಕೊಳ್ಳಬೇಕೆಂದು ಸೂಚನೆ ನೀಡಿದರು. ಸಮಿತಿಯ ಎಲ್ಲಾ ಸದಸ್ಯರು, ಶಾಲಾ ಕಾಲೇಜುಗಳ ಪ್ರಾಂಶುಪಾಲರು ಪೊಲೀಸ್‌ ಅಧಿಕಾರಿಗಳಿಗೆ ಡ್ರಗ್‌್ಸ ಮತ್ತು ನಾರ್ಕೋಟಿಕ್‌ ವಸ್ತುಗಳ ಬಳಕೆ/ ತಡೆಗಟ್ಟುವ ಹಾಗೂ ಕಾನೂನಿನ ಬಗ್ಗೆ ತರಬೇತಿ ನೀಡಲು ಎನ್‌ಸಿಬಿ ಅಧೀಕ್ಷಕರಿಗೆ ಮನವಿ ಮಾಡಬೇಕೆಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಂಜುನಾಥ್‌ ಮಾತನಾಡಿ, ಜಿಲ್ಲೆಯಲ್ಲಿ ತಂಬಾಕು ಸೇವನೆ ಮತ್ತು ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಕಾರ್ಯಾಗಾರವನ್ನು ಈಗಾಗಲೇ ನಡೆಸಲಾಗುತ್ತಿದೆ. ಇನ್ನು ಮುಂದೆ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳು ಮತ್ತು ಕಾನೂನಿನ ಬಗ್ಗೆಯೂ ಅರಿವು ಮೂಡಿಸಲಾಗುವುದು ಎಂದು ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಹುಲ್‌ ಕುಮಾರ್‌ ಶಹಪೂರ್‌ ವಾಡ್‌ ಮಾತನಾಡಿ, ಶಾಲಾ ಕಾಲೇಜುಗಳಲ್ಲದೆ ಹೋಟೆಲ್‌ ಹಾಗೂ ಪಿಜಿಗಳಲ್ಲೂ ಸಹ ಮಾದಕ ವಸ್ತುಗಳ ಬಳಕೆ ಹಾಗೂ ವೈದ್ಯಕೀಯ ಮತ್ತು ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ಮೆಡಿಕಲ್‌ ಸ್ಟೋರ್‌ಗಳಲ್ಲಿ ದೊರೆಯುವ ಔಷಧಿಗಳನ್ನು ಮಾದಕ ವಸ್ತುಗಳಾಗಿ ಉಪಯೋಗಿಸುವ ವ್ಯಸನಿಗಳಾಗುತ್ತಿರುವ ಬಗ್ಗೆ ಮಾಹಿತಿ ಇದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ ಡಿಎಚ್‌ಓ ಡಾ. ಮಂಜುನಾಥ್‌, ವೈದ್ಯರ ಸಲಹಾ ಚೀಟಿ ಇಲ್ಲದೆ ಔಷಧಿಯನ್ನು ರೋಗಿಗಳಿಗೆ ನೀಡಬಾರದೆಂದು ಜಿಲ್ಲೆಯ ಎಲ್ಲಾ ಮೆಡಿಕಲ್‌ ಸ್ಟೋರ್‌ಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಈ ಸಭೆಯಲ್ಲಿ ಹೆಚ್ಚುವರಿ ಪೊಲೀಸ್‌ ಅಧೀಕ್ಷಕರ ಮರಿಯಪ್ಪ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

‘ಗಾಂಜಾ ಬೆಳೆಯುವುದು ಕಾನೂನು ಬಾಹಿರ’

ಗಾಂಜಾ ಬೆಳೆಯುವುದು ಕಾನೂನು ಬಾಹಿರ. ಈ ನಿಟ್ಟಿನಲ್ಲಿ ಗಾಂಜಾ ಬೆಳೆಯನ್ನು ಬೆಳೆಯಬಾರದು ಎಂದು ರೈತರಲ್ಲಿ ಅರಿವು ಮೂಡಿಸಬೇಕೆಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಪಾಟೀಲ ನಿರ್ದೇಶನ ನೀಡಿದರಲ್ಲದೆ, ಗಾಂಜಾ ಗಿಡಗಳನ್ನು ಬೆಳೆಯುತ್ತಿರುವ ಬಗ್ಗೆ ಮಾಹಿತಿ ಇದ್ದಲ್ಲಿ ಕೃಷಿ ಇಲಾಖೆ ಅಧಿಕಾರಿಗಳಿಗೆ ಸಂಪೂರ್ಣ ಮಾಹಿತಿಯನ್ನು ನೀಡಬೇಕೆಂದು ಪೊಲೀಸ್‌ ಇಲಾಖೆ ಅಧಿಕಾರಿಗಳಿಗೆ ಡೀಸಿ ತಿಳಿಸಿದರು. ಶಿಕ್ಷಣ ಸಂಸ್ಥೆ ವಸತಿ ನಿಲಯಗಳಲ್ಲಿ ಡ್ರಗ್‌್ಸ ಹಾಗೂ ಮಾದಕ ವಸ್ತುಗಳನ್ನು ನಿಷೇಧಿಸಲು ಆಯಾ ಶಿಕ್ಷಣ ಸಂಸ್ಥೆಗಳಿಗೆ ಜವಾಬ್ದಾರಿಯನ್ನು ನೀಡಲಾಗಿದೆ. ವಸತಿ ನಿಲಯಗಳ ಪಾಲಕರು ವಿದ್ಯಾರ್ಥಿಗಳ ಮೇಲೆ ನಿಗಾ ಇಡಬೇಕು. ಅವರ ಕೋಣೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು. ಮಾದಕ ವಸ್ತುಗಳ ಬಳಸುವುದು ಕಂಡು ಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

ಫೋಟೋ ಪೈಲ್‌ - 10 ಟಿಯುಎಂ 1

ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ನಡೆದ ನ್ಯಾಷನಲ್‌ ನಾರ್ಕೋಟಿಕ್ಸ್‌ ಕೋ ಆರ್ಡಿನೇಷನ್‌ ಕಮಿಟಿ ಸಭೆಯ ಅಧ್ಯಕ್ಷತೆ ವಹಿಸಿ ಡಿಸಿ ವೈ.ಎಸ್‌. ಪಾಟೀಲ ಮಾತನಾಡಿದÜರು. ಎಸ್ಪಿ ಶಹಾಪುರ್‌ವಾಡ್‌, ಎಎಸ್ಪಿ ಮರಿಯಪ್ಪ ಇದ್ದರು.