ಬಿಜೆಪಿ ಸರ್ಕಾರಕ್ಕೆ ಜನರ ಮೇಲೆ ಕಳಕಳಿ ಇಲ್ಲ: ಡಿ.ಕೆ.ಶಿವಕುಮಾರ
ಬೆಳಗಾವಿಯಲ್ಲಿ ಅಧಿವೇಶನ ಕರೆಯುವ ಬದಲು ಬಿಜೆಪಿಯ ರಾಜ್ಯ ರಾಜಕಾರಿಣಿ ಸಭೆ ನಡೆಸುತ್ತಿದ್ದಾರೆ| ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ|
ಬೆಳಗಾವಿ(ಡಿ.06): ಉತ್ತರ ಕರ್ನಾಟಕದ ಜನರ ಸಮಸ್ಯೆಗೆ ಸ್ಪಂದಿಸಲು ಸುವರ್ಣ ವಿಧಾನಸೌಧ ನಿರ್ಮಾಣ ಮಾಡಿದ್ದಾರೆ. ಆದರೆ ಯಾವ ಉದ್ದೇಶಕ್ಕೆ ಬೆಳಗಾವಿಯಲ್ಲಿ ಅಧಿವೇಶನ ನಡೆಸಿಲ್ಲ. ಬಿಜೆಪಿ ಸರ್ಕಾರಕ್ಕೆ ಜನರ ಬಗ್ಗೆ ಕಳಕಳಿ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ವಾಗ್ದಾಳಿ ನಡೆಸಿದ್ದಾರೆ.
ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಬೆಂಗಳೂರು, ಕೃಷ್ಣಾ, ವಿಧಾನಸೌಧ, ಕಚೇರಿ ಬಿಟ್ಟರೆ ಎಲ್ಲಿಯೂ ಬರಲಿಲ್ಲ. ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ಯಾವ ಉದ್ದೇಶಕ್ಕೆ ನಿರ್ಮಾಣ ಮಾಡಿದ್ದಾರೆ ಎಂದು ಪ್ರಶ್ನಿಸಿದ ಅವರು, ಉತ್ತರ ಕರ್ನಾಟಕದ ಜನರ ಬಗ್ಗೆ ಸರ್ಕಾರಕ್ಕೆ ಕಳಕಳಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಗೋಕಾಕ, ಚಿಕ್ಕೋಡಿ ಜಿಲ್ಲೆಗೆ ಪ್ರಯತ್ನ: ಸಚಿವ ಜಾರಕಿಹೊಳಿ
ಯಾಕೆ ಧ್ವನಿ ಎತ್ತುತ್ತಿಲ್ಲ?:
ಭೀಕರ ಪ್ರವಾಹದಲ್ಲಿ ಮನೆ ಮುಳುಗಿ ಹೋಗಿವೆ. ಇಲ್ಲಿನ ಜನರಿಗೆ ಯಾವ ಸೂರು ಕೊಡಲು ಸರ್ಕಾರಕ್ಕೆ ಆಗಲಿಲ್ಲ. ಸಂತ್ರಸ್ತರಿಗೆ ಪರಿಹಾರ, ಮನೆ ಕೊಡಲು ಸಾಧ್ಯವಾಗಲಿಲ್ಲ. ಅಧಿವೇಶನದಲ್ಲಿ ಕರೆದು ನ್ಯಾಯ ಒದಗಿಸಿಕೊಡುವುದಾಗಿ ಹೇಳಿದ್ದರು. ಆದರೆ ಅವರಿಗೆ ಪರಿಹಾರ ಸಿಗಲಿಲ್ಲ. ಆಗ ಬೆಳಗಾವಿಯಲ್ಲಿ ಅಧಿವೇಶನದಲ್ಲಿ ನಿರ್ಣಯ ಮಾಡಲಾಗುವುದು ಎಂದಿದ್ದರು. ಆದರೆ ಬೆಳಗಾವಿಯಲ್ಲಿ ಅಧಿವೇಶನ ಕರೆಯುವ ಬದಲು ಬಿಜೆಪಿಯ ರಾಜ್ಯ ರಾಜಕಾರಿಣಿ ಸಭೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.
ಬಿಜೆಪಿ ಸರ್ಕಾರದ ಮೂಲ ಜನರ ಸಮಸ್ಯೆ, ಅಭಿವೃದ್ಧಿ ಬಗ್ಗೆ ಅಲ್ಲ. ಅವರು ಬೆಳಗಾವಿಗೆ ಬಂದು ಎಷ್ಟು ಬೇಕಾದರೂ ಸಭೆ ನಡೆಸಲಿ. ಅದು ಅವರ ವಿಚಾರ, ಆದರೆ ವಿನಾಕಾರಣ ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ನಿರ್ಮಾಣ ಮಾಡಿದ್ದು ನಾವು ಎಂದು ಹೇಳಿಕೊಂಡು ತಿರುಗಾಡುವ ಬೆಳಗಾವಿ ನಾಯಕರು ಈಗ ಎಲ್ಲಿದ್ದಾರೆ ಎಂದು ಪ್ರಶ್ನಿಸಿದ ಅವರು, ಅವರು ಯಾಕೆ ಧ್ವನಿ ಎತ್ತುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.