ದಕ್ಷಿಣ ಕನ್ನಡದಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಪರಿಣಾಮ ಕೆಲ ದಿನಗಳಿಂದ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗುತ್ತಿದೆ. ಇದೀಗ ನಾಳೆಯೂ ಭಾರಿ ಮಳೆ ಮುನ್ಸೂಚನೆ ಹಿನ್ನಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ.

ಮಂಗಳೂರು (ಜು.24) ಕರ್ನಾಟಕದಲ್ಲಿ ಈ ವರ್ಷ ಮಳೆ ಕೊರತೆ ತೀವ್ರ ಆತಂಕ ಸೃಷ್ಟಿಸಿದೆ. ಇದರ ನಡುವೆ ಅತೀ ಹೆಚ್ಚು ಮಳೆಯಾದ ಜಿಲ್ಲೆಗಳಲ್ಲಿ ದಕ್ಷಿಣ ಕನ್ನಡ ಮುಂಚೂಣಿಯಲ್ಲಿದೆ. ಕಳೆದ ಕೆಲ ದಿನಗಳಿಂದ ದಕ್ಷಿಣ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗುತ್ತಿದೆ. ನಾಳೆಯೂ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ನಾಳೆ (ಜು.25) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ನಚ್ಚೆರಿಕಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ ಮಾಡಿ ದ.ಕ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.ಆದೇಶ ನೀಡಿದ್ದಾರೆ.

ನಾಳೆಯೂ ಭಾರಿ ಮಳೆ ಅಲರ್ಟ್

ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸಂಭವವಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಇತ್ತೀಚೆಗೆ ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಮರಬಿದ್ದು 6 ವರ್ಷದ ಬಾಲಕಿ ಮೃತಪಟ್ಟ ಘಟನೆ ನಡೆದಿತ್ತು. ಶಾಲಾ ತರಗತಿ ಮುಗಿಸಿ ವಿದ್ಯಾರ್ಥಿಗಳನ್ನು ಮನೆಗಳಿಗೆ ಕರೆದೊಯ್ಯುತ್ತಿದ್ದ ವೇಳೆ ಶಾಲಾ ಬಸ್ ಮೇಲೆ ಮರ ಬಿದ್ದಿತ್ತು. ಬಂಟ್ವಾಳ ತಾಲೂಕಿನ ಬರಿಮಾರು ಎಂಬಲ್ಲಿ ಘಟನೆ ನಡೆದಿತ್ತು. ಗಾಯಾಳು ಮಕ್ಕಳನ್ನು ಸ್ಥಳೀಯರ ನೆರವಿನಿಂದ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂತಹ ದುರ್ಘಟನೆಗಳು ನಡೆಯದಂತೆ ತಡೆಯಲು ಹಲವು ಸೂಚನೆಗಳನ್ನು ನೀಡಲಾಗಿದೆ. ಕೆಲೆವೆಡೆ ಭೂಕುಸಿತ ಆತಂಕಗಳು ನಿರ್ಮಾಣವಾಗಿದೆ. ಮಳೆಯಿಂದ ಮರಗಳು ಧರೆಗುರುಳುತ್ತಿದೆ.

ಉಡುಪಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿಯಲ್ಲಿ ಭಾರಿ ಮಳೆಯಾಗುತ್ತಿದೆ. ಹಲವು ತಾಲೂಕುಗಳಲ್ಲಿ ಭಾರಿ ಮಳೆಯಾಗುತ್ತಿದೆ. ನಾಳೆಯೂ ಭಾರಿ ಮಳೆ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ (ಜುಲೈ 25) ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ ಪಿಯುಸಿ ವರೆಗೆ ರಜೆ ಘೋಷಿಸಲಾಗಿದೆ. ಇದೇ ವೇಳೆ ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಲಾಗಿದೆ.