* ಅಂಬೇಡ್ಕರ್‌ ಚಿತ್ರ ತೆರವುಗೊಳಿಸಿದ ಜಡ್ಜ್‌,  ವಿವಾದ* ರಾಯಚೂರಲ್ಲಿ ದಲಿತರ ಪ್ರತಿಭಟನೆ*  ರಾಯಚೂರಿನ ಗಣರಾಜ್ಯೋತ್ಸವದ ಘಟನೆ* ತಾತ್ಕಾಲಿಕವಾಗಿ ಪ್ರತಿಭಟನೆ ಹಿಂಪಡೆದ ಸಂಘಟನೆ

ರಾಯಚೂರು(ಜ. 27) ನ್ಯಾಯಾಧೀಶರ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ವಾಪಸ್ ಪಡೆಯಲಾಗಿದೆ. ಅಂಬೇಡ್ಕರ ಭಾವಚಿತ್ರಕ್ಕೆ ಅಪಮಾನ ಖಂಡಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ದಲಿತ ಸಂಘಟನೆಗಳಿಂದ ನಡೆಸಲಾಗುತ್ತಿದ್ದ ಸಂಚಾರ ತಡೆಯನ್ನು ತಾತ್ಕಾಲಿಕವಾಗಿ ವಾಪಸ್ ಪಡೆಯಲಾಗಿದೆ.

Add Asianetnews Kannada as a Preferred SourcegooglePreferred

ನಗರದ ಸದರ ಬಜಾರ್ ಠಾಣೆಯಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದಲಿತ ಮುಖಂಡ ಆರ್.ಮಾನಸಯ್ಯ ದೂರು ನೀಡಿ ಶುಕ್ರವಾರ ಮಧ್ಯಾಹ್ನದವರೆಗೆ ಕಾದು ನೋಡುತ್ತೇವೆ ಎಂದು ಹೇಳಿದ್ದಾರೆ. ಶುಕ್ರವಾರ ಬೆಳಗ್ಗೆ ಅಂಬೇಡ್ಕರ ವೃತ್ತದಲ್ಲಿ ಕೇವಲ ಧರಣಿ ನಡೆಸಿ ಹಾಗೂ ಮುಂದೆ ಕೈಗೊಳ್ಳಲಾಗುವ ನಿರ್ಧಾರ ತಿಳಿಸಲಾಗುವುದು ಎಂದಿದ್ದಾರೆ.

ಏನಿದು ವಿವಾದ: ರಾಯಚೂರು ಜಿಲ್ಲಾ ನ್ಯಾಯಾಲಯದ ಗಣರಾಜ್ಯೋತ್ಸವ ಸಂದರ್ಭ ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರ ತೆರವು ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿದ್ದವು. ಆದರೆ ಘಟನೆಗೆ ಸಂಬಂಧಿಸಿ ನ್ಯಾಯಾಧೀಶರು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿ ಸತ್ಯ ಸಂಗತಿ ಮರೆಮಾಚಿ ಅಪಪ್ರಚಾರ ಮಾಡಲಾಗುತ್ತಿದೆ ಎಂದಿದ್ದರು.

73ನೇ ಗಣರಾಜ್ಯೋತ್ಸವ ಸಂದರ್ಭ ಜಿಲ್ಲಾ(Raichur) ಕೋರ್ಟ್ ಆವರಣದಲ್ಲಿ ಧ್ವಜಾರೋಹಣಕ್ಕಾಗಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿತ್ತು. ಅಂಬೇಡ್ಕರ್ (Dr. B. R. Ambedkar) ಮತ್ತು ಗಾಂಧೀಜಿ (Mahatma Gandhi)ಪೋಟೋ ಒಂದರ ಪಕ್ಕ ಒಂದು ಇಡಲಾಗಿತ್ತು. ಆದರೆ ಅಂಬೇಡ್ಕರ್ ಪೋಟೋ ತೆರವು ಮಾಡಿದರೆ ಮಾತ್ರ ಧ್ವಜಾರೋಹಣಕ್ಕೆ ಬರುತ್ತೇನೆ ಎಂದು ನ್ಯಾಯಾಧೀಶರು ಹೇಳಿದ್ದರು ಎನ್ನುವುದು ವಿವಾದಕ್ಕೆ ಕಾರಣವಾಗಿತ್ತು.

ನ್ಯಾಯಾಧೀಶರು ಕೊಟ್ಟ ಸಮರ್ಥನೆ ಇಲ್ಲಿದೆ

ನ್ಯಾಯಾಲಯ ಆವರಣದಲ್ಲಿ ಅಂಬೇಡ್ಕರ್ ಫೋಟೋ ತೆರವು ಘಟನೆ ಖಂಡಿಸಿ ರಾಯಚೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು.ಪಕ್ಕದ ಜಿಲ್ಲೆಗಳಲ್ಲಿಯೂ ಪ್ರತಿಭಟನೆ ಕಾವು ಪಡೆದುಕೊಂಡಿತ್ತು. ಬಂದ್ ಗೆ ದಲಿತ ಸಂಘಟನೆಗಳು ಕರೆ ನೀಡಿದ್ದವು. ಕೇಂದ್ರ ಬಸ್ ನಿಲ್ದಾಣ, ರೈಲು ನಿಲ್ದಾಣ, ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತದ ಬಳಿ ಟೈರ್ ಗೆ ಬೆಂಕಿ ಹಚ್ಚಿ ಸಂಚಾರ ತಡೆದು ಪ್ರತಿಭಟನೆ ಮಾಡಲಾಗಿತ್ತು.

ಸತ್ಯ ಘಟನೆ ಮರೆಮಾಚಿ ಅಪಪ್ರಚಾರ:
ರಾಯಚೂರು “ಸಂವಿಧಾನ ಶಿಲ್ಪಿ ಹಾಗೂ ಭಾರತ ರತ್ನ ಡಾ.ಬಿ.ಅರ್.ಅಂಬೇಡ್ಕರವರ ಬಗ್ಗೆ ನನಗೆ ಅಪಾರ ಗೌರವ ಮತ್ತು ಅಭಿಮಾನ ಇದೆ” ಎಂದು ರಾಯಚೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದರು.

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿ, ಪ್ರತಿ ವರ್ಷ ನವೆಂಬರ್ 26 ರಂದು ಸಂವಿಧಾನ ದಿನ ಆಚರಣೆ ಮಾಡುತ್ತಾ ಬಂದಿದ್ದು, ಆ ಸಮಯದಲ್ಲಿ ನಾನು ಅಂತಹ ಮಹಾನ್ ವ್ಯಕ್ತಿತ್ವ,ತತ್ವ, ಆದರ್ಶ ಮತ್ತು ನಡೆ ನುಡಿಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ರೂಢಿಸಿಕೊಳ್ಳಬೇಕು ಅಂತಾ ವಿನಂತಿಸಿಕೊಂಡಿರುತ್ತೇನೆ. ಮಹಾನ್ ವ್ಯಕ್ತಿಗೆ ನಾನು ಯಾವತ್ತು ಅಗೌರವ ತೋರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ನನ್ನ ಬಗ್ಗೆ ಯಾವ ಉದ್ದೇಶ ಇಟ್ಟುಕೊಂಡು ಆ ರೀತಿ ಅಪಪ್ರಚಾರ ಮಾಡಿದ್ದಾರೆ ಎನ್ನುವುದು ತಿಳಿಯದಾಗಿದೆ. ದಯವಿಟ್ಟು ವದಂತಿಗಳನ್ನು ನಂಬಲು ಹೋಗಬೇಡಿ ಎಂದಿದ್ದರು. ನ್ಯಾಯಾಧೀಶರು ಅಂಬೇಡ್ಕರ್ ಭಾವಚಿತ್ರ ತೆಗೆಸಲು ಮುಂದಾದರು ಎನ್ನುವ ವಿಚಾರ ಸೋಶಿಯಲ್ ಮೀಡಿಯಾದಲ್ಲಿಯೂ ದೊಡ್ಡ ಚರ್ಚೆಯಾಗಿತ್ತು.