ಸಿಂದಗಿ ಬೈಎಲೆಕ್ಷನ್: ಸ್ಪರ್ಧೆ ಬಗ್ಗೆ ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಣೆ
ಸಿಂದಗಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಅಭಿಮಾನಿಗಳು ಹೇಳುತ್ತಿದ್ದಾರೆ| ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ| ಸಿಂದಗಿಯಲ್ಲಿ ನಾನಾಗಲಿ, ಪುತ್ರನಾಗಲಿ ಸ್ಪರ್ಧಿಸಲ್ಲ: ಲಕ್ಷ್ಮಣ ಸವದಿ|
ಬೆಳಗಾವಿ(ಫೆ.27): ಸಿಂದಗಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ನಾನಾಗಲಿ, ನನ್ನ ಪುತ್ರನಾಗಲಿ ಸ್ಪರ್ಧಿಸುವುದಿಲ್ಲ ಎಂದು ಉಪಮುಖ್ಯಮಂತ್ರಿಯೂ ಆದ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪರಿಷತ್ ಸದಸ್ಯನಾಗಿದ್ದೇನೆ. ಉಪಚುನಾವಣೆಗೆ ಸ್ಪರ್ಧಿಸುವುದಿಲ್ಲ. ಈ ಬಗ್ಗೆ ಪುತ್ರ ಚಿದಾನಂದ ಕೂಡ ಸ್ಪಷ್ಟಪಡಿಸಿದ್ದಾನೆ. ಸಿಂದಗಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಅಭಿಮಾನಿಗಳು ಹೇಳುತ್ತಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದು ಹೇಳಿದರು.
ರಮೇಶ್ ಜಾರಕಿಹೊಳಿಯನ್ನ ಮಂತ್ರಿ ಮಾಡಿದ್ದು ನಾನೇ ಎಂದ ಹೆಬ್ಬಾಳಕರ್..!
ಕೇಂದ್ರದಲ್ಲಿರುವ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿರುವ ಬಿ.ಎಸ್.ಯಡಿಯೂರಪ್ಪ ಸರ್ಕಾರದ ಮೇಲೆ ಜನರಿಗೆ ಅಪಾರ ನಂಬಿಕೆ ಇದೆ. ನಮ್ಮ ಅಭಿವೃದ್ಧಿ ಕೆಲಸಗಳನ್ನು ನೋಡಿ ಜನರು ಮತ ನೀಡುತ್ತಾರೆ. ನನಗೂ ಸೇರಿ ಬಸವರಾಜ ಬೊಮ್ಮಾಯಿ, ವಿ.ಸೋಮಣ್ಣ ಅವರಿಗೆ ಬಸವಕಲ್ಯಾಣ ಕ್ಷೇತ್ರದ ಉಸ್ತುವಾರಿ ನೀಡಿದ್ದಾರೆ. ಅಭ್ಯರ್ಥಿ ಯಾರೇ ಆಗಲಿ ಸ್ಥಳೀಯ ನಾಯಕರನ್ನು ವಿಶ್ವಾಸಕ್ಕೆ ಪಡೆದು ಅಲ್ಲಿ ಬಿಜೆಪಿ ಗೆಲ್ಲಿಸುತ್ತೇವೆ. ಬಸವಕಲ್ಯಾಣ ಜೊತೆಗೆ ಬೆಳಗಾವಿ, ಸಿಂದಗಿ ಹಾಗೂ ಮಸ್ಕಿಯಲ್ಲೂ ಪ್ರಚಾರ ನಡೆಸುತ್ತೇನೆ. ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಸಾಕಷ್ಟು ಜನ ಅಭ್ಯರ್ಥಿಗಳಿದ್ದಾರೆ. ಪ್ರತ್ಯೇಕ ನೋಟಿಫಿಕೇಶನ್ ಆದ ಬಳಿಕವೇ ಅಭ್ಯರ್ಥಿಗಳ ಹೆಸರನ್ನು ಕೋರ್ ಕಮಿಟಿಯಲ್ಲಿ ಚರ್ಚಿಸಿ ಕೇಂದ್ರಕ್ಕೆ ಶಿಫಾರಸು ಮಾಡುತ್ತೇವೆ. ನಮ್ಮ ದೆಹಲಿ ನಾಯಕರೇ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ ಎಂದರು.