Asianet Suvarna News Asianet Suvarna News

ಪ್ರಜಾಪ್ರಭುತ್ವ ಉಳಿವಿಗೆ ಬಿಜೆಪಿ ನೇತೃತ್ವದ ಎನ್‌ಡಿಎ ಸೋಲಿಸಿ: ಎಸ್.ಆರ್ ಹಿರೇಮಠ

ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಆರಂಭದಿಂದಲೂ ಅಸಂವಿಧಾನಿಕ, ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದು ಇದು ಸರ್ವಾಧಿಕಾರ ಧೋರಣೆಯನ್ನು ಪ್ರತಿನಿಧಿಸುತ್ತಿದೆ ಎಂದ ಸಮಾಜ ಪರಿವರ್ತನಾ ಸಮಿತಿ ಹಾಗೂ ಸಿಟಿಜನ್ ಫಾರ್ ಡೆಮಾಕ್ರೆಸಿ ಸಂಘದ ಅಧ್ಯಕ್ಷ ಎಸ್.ಆರ್ ಹಿರೇಮಠ 

Defeat the BJP led NDA for the Survival of Democracy in India Says SR Hiremath grg
Author
First Published Feb 25, 2024, 11:00 PM IST

ರಾಯಚೂರು(ಫೆ.25):  ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯಬೇಕಾದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ಸೋಲಿಸಬೇಕಾಗಿದ್ದು, ಆ ನಿಟ್ಟಿನಲ್ಲಿ ಎಲ್ಲೆಡೆ ಜನ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಸಮಾಜ ಪರಿವರ್ತನಾ ಸಮಿತಿ ಹಾಗೂ ಸಿಟಿಜನ್ ಫಾರ್ ಡೆಮಾಕ್ರೆಸಿ ಸಂಘದ ಅಧ್ಯಕ್ಷ ಎಸ್.ಆರ್ ಹಿರೇಮಠ ತಿಳಿಸಿದರು.

ಇಲ್ಲಿನ ಪತ್ರಿಕಾ ಭವನದಲ್ಲಿ ಶನಿವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಆರಂಭದಿಂದಲೂ ಅಸಂವಿಧಾನಿಕ, ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದು ಇದು ಸರ್ವಾಧಿಕಾರ ಧೋರಣೆಯನ್ನು ಪ್ರತಿನಿಧಿಸುತ್ತಿದೆ ಎಂದರು.

ಬಸ್ ನಲ್ಲಿ ಮಹಿಳೆಯ‌ ಚಿನ್ನದ ಸರ ಕಳವು; ಬಸ್‌ನಲ್ಲಿದ್ದ ಎಲ್ಲ ಪ್ರಯಾಣಿಕರ ಬ್ಯಾಗ್ ತಪಾಸಣೆ!

ಪ್ಯಾಸಿಸ್ಟ್ ಸರ್ಕಾರವನ್ನು ಜನರು ಅಧಿಕಾರದಿಂದ ಕೆಳಗಿಳಿಸಬೇಕು. ಬಿಜೆಪಿಯು ಜನರ ಮಧ್ಯೆ ಒಡೆದಾಳುವ ನೀತಿ ಅನುಸರಿಸಿದ್ದರಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲಾಗಿತ್ತು. ಈಗ ಕೇಂದ್ರದ ಎನ್‌ಡಿಎ ಸರ್ಕಾರ ಕಿತ್ತೆಸೆಯಬೇಕಾಗಿದೆ. ಆದ್ದರಿಂದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕನಿಷ್ಟ 20 ಬಿಜೆಪಿ ಅಭ್ಯರ್ಥಿಗಳಿಗೆ ಸೋಲಿಸುವ ದಿಸೆಯಲ್ಲಿ ಜನರನ್ನು ಜಾಗೃತಗೊಳಿಸಲು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಹೇಳಿದರು.

ವಿರೋಧ ಪಕ್ಷದ ನಾಯಕರನ್ನು ಕಟ್ಟಿಹಾಕಲು ದ್ವೇಷದ ಜೊತೆಗೆ ಅಧಿಕಾರದ ದುರ್ಬಳಕೆಗೆ ಮುಂದಾಗಿರುವ ಕೇಂದ್ರದ ಎನ್‌ಡಿಎ ಸರ್ಕಾರ ಸಿಬಿಐ, ಇಡಿ, ಆದಾಯ ತೆರಿಗೆ ಇಲಾಖೆ ಹಾಗೂ ಸರ್ಕಾರಿ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ. ಮೋದಿ ಆಡಳಿತದ ಬಗ್ಗೆ ಪ್ರಶ್ನಿಸುವವರ ಧ್ವನಿಯನ್ನು ಅಡಗಿಸುವ ಕೆಲಸವನ್ನು ಮಾಡಲಾಗುತ್ತಿದೆ.

‘ಎಲೆಕ್ಟೊರಲ್ ಬಾಂಡ್’ ಎಂಬ ಅಸಂವಿಧಾನಿಕ ಯೋಜನೆಯ ಮೂಲಕ ಕಾರ್ಪೊರೇಟ್ ಕಂಪನಿಗಳಿಂದ ಕೋಟ್ಯಾಂತರ ರೂಪಾಯಿ ಹಣ ಪಡೆದಿದ್ದು ಈಚೆಗೆ ಸುಪ್ರೀಂ ಕೋರ್ಟ್ ಇದನ್ನು ಪ್ರಶ್ನಿಸಿ ಇದು ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿ ಯೋಜನೆ ಎಂದು ರದ್ದುಪಡಿಸಿದ್ದು ಅಘೋಷಿತ ತುರ್ತುಪರಿಸ್ಥಿತಿಯ ಕಾಲದಲ್ಲಿ ಸಣ್ಣದೊಂದು ಆಶಾಭಾವನೆ ಮೂಡಿಸಿದೆ. ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನಿಂದ ಬಿಜೆಪಿ, ಸಂಘ ಪರಿವಾರದ ಯೋಜನೆಗೆ ದೊಡ್ಡ ಒಡೆತವಾಗಿದೆ ಎಂದು ಹೇಳಿದರು.

ಅಯೋಧ್ಯೆ ರಾಮಮಂದಿರ ನಿರ್ಮಾಣ ಕ್ರೆಡಿಟ್ ಮೋದಿಗೆ ಮಾತ್ರವಲ್ಲ, ಯೋಗಿಗೂ ಸಲ್ಲುತ್ತೆ: ಚಕ್ರವರ್ತಿ ಸೂಲಿಬೆಲೆ

ಚಂಡಿಗಡ ಮೇಯರ್ ಚುನಾವಣೆಯಲ್ಲಿ ಚುನಾವಣೆ ಅಧಿಕಾರಿ ಕಾನೂನು ವಿರೋಧಿಯಾಗಿ ನಡೆದುಕೊಂಡ ಪ್ರಕರಣಕ್ಕೆ ಸಂಬಂಧ ಸುಪ್ರೀಂಕೋರ್ಟ್ ಐವರು ನ್ಯಾಯಾಧೀಶರ ಪೀಠ ಬಿಜೆಪಿ ಅಭ್ಯರ್ಥಿಯ ಗೆಲುವು ರದ್ದುಪಡಿಸಿ ಇಂಡಿಯಾ ಒಕ್ಕೂಟದ ಅಭ್ಯರ್ಥಿಗೆ ಜಯಘೋಷಿಸಿ ಪ್ರಜಾಪ್ರಭುತ್ವ ರಕ್ಷಣೆಗೆ ಮುಂದಾಗಿರುವುದು ಸ್ವಾಗತಾರ್ಹ ಸಂಗತಿಯಾಗಿದೆ ಎಂದರು.

ರೈತರ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆ(ಎಂಎಸ್ ಪಿ) ಜಾರಿ ಮಾಡುವಂತೆ ಸಂಯುಕ್ತ ಕಿಸಾನ್ ಮೋರ್ಚಾದಿಂದ ರೈತರು ನಡೆಸುತ್ತಿರುವ ದೆಹಲಿ ಚಲೋ ಹೋರಾಟವನ್ನು ಹತ್ತಿಕ್ಕಿ, ಪೊಲೀಸ್ ಪಡೆಯ ಮೂಲಕ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ರೈತರ ಹೋರಾಟಕ್ಕೆ ನಮ್ಮ ಸಂಘದಿಂದ ಸಂಪೂರ್ಣ ಬೆಂಬಲಿಸಲಾಗುವುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ಜನ ಸಂಗ್ರಾಮ ಪರಿಷತ್ ನ ಅಧ್ಯಕ್ಷ ರಾಘವೇಂದ್ರ ಕುಷ್ಟಗಿ, ಖಾಜಾ ಅಸ್ಲಂ ಅಹ್ಮದ್, ಜಾನ್ ವೆಸ್ಲಿ, ಮಾರೆಪ್ಪ ಹರವಿ, ಆಂಜನೇಯ ಕುರುಬದೊಡ್ಡಿ ಇದ್ದರು.

Follow Us:
Download App:
  • android
  • ios