Asianet Suvarna News Asianet Suvarna News

ಸರ್ಕಾರಿ ಸವಲತ್ತು ಅರ್ಹರಿಗೆ ತಲುಪಿಸಿ: ಕೋಟ ಶ್ರೀನಿವಾಸ ಪೂಜಾರಿ

ಬಡಮಕ್ಕಳ ರಕ್ಷಣೆ ಉದ್ದೇಶದಿಂದ ಒನಕೆ ಓಬವ್ವ ಆತ್ಮರಕ್ಷಣೆ ಕಲೆ ಯೋಜನೆಯಡಿ ರಾಜ್ಯದಲ್ಲಿ 4 ಲಕ್ಷ ಹೆಣ್ಣು ಮಕ್ಕಳಿಗೆ ಕರಾಟೆ ತರಬೇತಿ ನೀಡಲಾಗಿದೆ. 2 ಸಾವಿರ ಕರಾಟೆ ಶಿಕ್ಷಕರ ನೇಮಕ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Deliver government benefits to the deserving: Kota Srinivasa Pujari
Author
First Published Sep 4, 2022, 3:07 PM IST

ಶಿವಮೊಗ್ಗ (ಸೆ.4) : ಬಡಮಕ್ಕಳ ರಕ್ಷಣೆ ಉದ್ದೇಶದಿಂದ ಒನಕೆ ಓಬವ್ವ ಆತ್ಮರಕ್ಷಣೆ ಕಲೆ ಯೋಜನೆಯಡಿ ರಾಜ್ಯದಲ್ಲಿ 4 ಲಕ್ಷ ಹೆಣ್ಣು ಮಕ್ಕಳಿಗೆ ಕರಾಟೆ ತರಬೇತಿ ನೀಡಲಾಗಿದೆ. 2 ಸಾವಿರ ಕರಾಟೆ ಶಿಕ್ಷಕರ ನೇಮಕ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಶನಿವಾರ ನಗರದ ಪೆಸಿಟ್‌ ಕಾಲೇಜಿನಲ್ಲಿ ಆಯೋಜಿಸಿದ್ದ ಪಂಚಾಯತ್‌ರಾಜ್‌ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಿಗೆ ವಿವಿಧ ಯೋಜನೆಗಳ ರಾಜ್ಯ ಮಟ್ಟದ ಮಾಹಿತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

Karwar: ಅರ್ಹರಿಗೆ ಯೋಜನೆ ತಲುಪಿಸಲು ಅಂತ್ಯೋದಯ: ಸಚಿವ ಕೋಟ

ಸೌಲಭ್ಯ ನೀಡುವಿಕೆಯನ್ನು ಪಾರದರ್ಶಕಗೊಳಿಸಲು ಸೇವಾಸಿಂಧು ಆನ್‌ಲೈನ್‌ ಪೋರ್ಟಲ್‌ ರಚಿಸಲಾಗಿದೆ. ಒಂದೇ ದಿನಕ್ಕೆ 8 ಸಾವಿರ ಅರ್ಜಿ ಬಂದಿವೆ. ಆದ್ದರಿಂದ ಅಧಿಕಾರಿಗಳು, ಜನಪ್ರತಿನಿಧಿಗಳು ಅತ್ಯಂತ ಪಾರದರ್ಶಕ, ಪ್ರಾಮಾಣಿಕತೆ ಮತ್ತು ಶ್ರದ್ಧೆಯಿಂದ ಕೆಲಸ ಮಾಡಿದಲ್ಲಿ ಅರ್ಹರಿಗೆ ಸೌಲಭ್ಯ ದೊರೆಯಲಿವೆ. ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದ್ದು, ಅತ್ಯಂತ ಪಾರದರ್ಶಕವಾಗಿ ಈ ಸವಲತ್ತುಗಳನ್ನು ಅರ್ಹರನ್ನು ತಲುಪಲು ಜನಪ್ರತಿನಿಧಿಗಳು ಸಹಕರಿಸಬೇಕು ಎಂದು ತಿಳಿಸಿದರು.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಗೆ ನೀಡಲಾಗುವ ಅನುದಾನವನ್ನು ಪಾರದರ್ಶಕವಾಗಿ ಬಳಕೆ ಮಾಡಿಕೊಂಡಲ್ಲಿ ಇನ್ನು 5 ವರ್ಷದಲ್ಲಿ ಎಸ್ಸಿ, ಎಸ್ಟಿಸಾಕಷ್ಟುವಿದ್ಯಾರ್ಥಿಗಳು ವೈದ್ಯರು, ಎಂಜಿನಿಯರ್‌ಗಳಾಗುತ್ತಾರೆ. ರಾಜ್ಯದಲ್ಲಿ 826 ವಸತಿ ಶಾಲೆಗಳಿವೆ. ವಸತಿ ಶಾಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಬರುತ್ತಿದ್ದು, ವಸತಿ ಶಾಲೆಗಳ ಸಂಖ್ಯೆ ಹೆಚ್ಚಿಸಲು ಯೋಜನೆ ರೂಪಿಸಲಾಗುತ್ತಿದೆ. ವಸತಿ ಶಾಲೆಗಳಲ್ಲಿ ಶೇ.99.15 ಮಕ್ಕಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗುತ್ತಿದ್ದು, ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಐಐಟಿ, ಐಐಎಂಗೆ ಸಹ ಮಕ್ಕಳು ಆಯ್ಕೆಯಾಗಿದ್ದಾರೆ. ಇನ್ನು ಮುಂದೆ ಇಂತಹ ಕೋರ್ಸಿಗೆ ಆಯ್ಕೆಯಾದ ಮಕ್ಕಳ ಶುಲ್ಕ ಪಾವತಿ ಸಹ ಮಾಡಲು ಇಲಾಖೆ ಯೋಚಿಸುತ್ತಿದೆ ಎಂದರು.

ರೇಷ್ಮೆ, ಯುವಜನ, ಕ್ರೀಡಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ.ಸಿ.ನಾರಾಯಣಗೌಡ ಮಾತನಾಡಿ, ಸರ್ಕಾರ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳಿಗೆ ಹೆಚ್ಚಿನ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ. ಗ್ರಾಪಂ ಸದಸ್ಯರಿಗೆ ಅತ್ಯಂತ ಹೆಚ್ಚಿನ ಜವಾಬ್ದಾರಿ ಇರುತ್ತದೆ. ಎಲ್ಲ ಜನಪ್ರತಿನಿಧಿಗಳು ಈ ಕಾರ್ಯಾಗಾರದ ಸದುಪಯೋಗಪಡಿಕೊಳ್ಳಬೇಕು ಎಂದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಆತ್ಮವಿಶ್ವಾಸದಿಂದ ಬದುಕಬೇಕೆಂಬ ಘನ ಉದ್ದೇಶ ಸರ್ಕಾರದ್ದಾಗಿದೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಕೇವಲ ಸರ್ಕಾರದ ಅನುದಾನ, ಸೌಲಭ್ಯಗಳನ್ನು ತಲುಪಿಸುವ ಪೋಸ್ಟ್‌ ಮ್ಯಾನ್‌ ಮಾತ್ರವಾಗದೇ, ಹಣವಿಲ್ಲದೇ ಮಾಡುವ ಅನೇಕ ಮಾಹಿತಿ, ಅರಿವು ಕಾರ್ಯಗಳನ್ನು ಕೈಗೊಂಡು ಬದ್ಧತೆಯಿಂದ, ಪ್ರಾಮಾಣಿಕವಾಗಿ ತಮ್ಮ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ.ಎಸ್‌.ಈಶ್ವರಪ್ಪ ಮಾತನಾಡಿ, ಯಾವುದೇ ವ್ಯಕ್ತಿ ಊಟ, ಉದ್ಯೋಗವಿಲ್ಲದೇ ಇರಬಾರದೆಂದು ಸರ್ಕಾರ ನರೇಗಾ ಸೇರಿದಂತೆ ಅನೇಕ ಯೋಜನೆಗಳು ಮತ್ತು ಮೂಲಭೂತ ಸೌಲಭ್ಯಗಳನ್ನು ನೀಡಿದೆ ಎಂದರು.

ವಿಧಾನ ಪರಿಷತ್‌ ಶಾಸಕ ಡಿ.ಎಸ್‌.ಅರುಣ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಪುಸ್ತಕ ‘ಅಂತ್ಯೋದಯ’ ಬಿಡುಗಡೆ ಮಾಡಲಾಯಿತು. ವಿವಿಧ ನಿಗಮಗಳ ವತಿಯಿಂದ ಸ್ವಸಹಾಯ ಸಂಘದ ಮಹಿಳೆಯರಿಗೆ ಸೌಲಭ್ಯ ವಿತರಣೆ ಹಾಗೂ ಅಂಬೇಡ್ಕರ್‌ ಅಭಿವೃದ್ಧಿ ನಿಗಮದಿಂದ ಅಲೆಮಾರಿ- ಅರೆ ಅಲೆಮಾರಿ ಸಮುದಾಯದ ಆಯ್ದ ಫಲಾನುಭವಿಗಳಿಗೆ ವಸತಿ ಯೋಜನೆಯಡಿ ಕಾರ್ಯಾದೇಶ ನೀಡಲಾಯಿತು.

ಕೊ.ಅ.ಉಡುಪರ ಸಾಹಿತ್ಯಿಕ ಸೇವೆ ಶ್ಲಾಘನೀಯ: ಕೋಟ ಶ್ರೀನಿವಾಸ ಪೂಜಾರಿ

ಶಾಸಕರಾದ ಹರತಾಳು ಹಾಲಪ್ಪ, ಎಸ್‌.ಕುಮಾರ್‌ ಬಂಗಾರಪ್ಪ, ಕೆ.ಬಿ.ಅಶೋಕ್‌ ನಾಯ್ಕ…, ವಿಧಾನ ಪರಿಷತ್‌ ಸದಸ್ಯರಾದ ಆಯನೂರು ಮಂಜುನಾಥ, ಎಸ್‌.ರುದ್ರೇಗೌಡ, ಭಾರತಿ ಶೆಟ್ಟಿ, ಮಹಾನಗರಪಾಲಿಕೆ ಮೇಯರ್‌ ಸುನೀತಾ ಅಣ್ಣಪ್ಪ, ಎಂಎಡಿಬಿ ಅಧ್ಯಕ್ಷ ಕೆ.ಎಸ್‌.ಗುರುಮೂರ್ತಿ, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಸೂಡಾ ಅಧ್ಯಕ್ಷ ಎನ್‌.ಜೆ.ನಾಗರಾಜ್‌, ಜಿಲ್ಲಾಧಿಕಾರಿ ಡಾ.ಆರ್‌.ಸೆಲ್ವಮಣಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್‌ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.

ರಾಜ್ಯದಲ್ಲಿ ಬಗರ್‌ಹುಕುಂ ಸಾಗುವಳಿದಾರರಿಂದ ಹಕ್ಕುಪತ್ರಕ್ಕಾಗಿ 2.94 ಲಕ್ಷ ಅರ್ಜಿ ಸ್ವೀಕೃತವಾಗಿವೆ. ಜಿಲ್ಲೆಯಲ್ಲಿ 97 ಸಾವಿರ ಅರ್ಜಿ ಬಂದಿದ್ದು, 24,444 ಅರ್ಜಿ ವಿಲೇವಾರಿ ಆಗಿವೆ. ಅರಣ್ಯ ಸಾಗುವಳಿದಾರರು ಸೇರಿದಂತೆ ಯಾವುದೇ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲಾಗುವುದಿಲ್ಲ. ರೈತರು ತಾಳ್ಮೆಯಿಂದ ಇರಬೇಕು

-ಬಿ.ವೈ.ರಾಘವೇಂದ್ರ, ಸಂಸದ

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷವಾದರೂ ಇನ್ನೂ ಬಡತನ ಸೇರಿದಂತೆ ಹಲವು ಸಮಸ್ಯೆಗಳಿವೆ. ಈ ಲೋಪದೋಷಕ್ಕೆ ಜನಪ್ರತಿನಿಧಿಗಳಾದ ನಾವೇ ಕಾರಣ ಎಂಬುದನ್ನು ಮರೆಯಬಾರದು. ಜನಪ್ರತಿನಿಧಿಗಳಾದ ನಾವು ಬಡವರ ಕಣ್ಣೀರು ಒರೆಸುವ ಕೆಲಸವನ್ನು ಎಷ್ಟರ ಮಟ್ಟಿಗೆ ಮಾಡುತ್ತಿದ್ದೇವೆ ಎಂಬ ಪ್ರಶ್ನೆ ಹಾಕಿಕೊಳ್ಳಬೇಕು. ಮಧ್ಯವರ್ತಿಗಳ ಹಾವಳಿ, ಭಷ್ಟಾಚಾರದಿಂದಾಗಿ ಮುಕ್ತವಾಗಿ, ನೇರವಾಗಿ ಸರ್ಕಾರದ ಸೌಲಭ್ಯಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೆ ತಲುಪಬೇಕು

- ಬಿ.ಎಸ್‌.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ

Follow Us:
Download App:
  • android
  • ios