'ತಾಯಿ ಚಾಮುಂಡೇಶ್ವರಿ ಕೃಪೆಯಿಂದ ಮೈಸೂರು ಶೀಘ್ರ ಕೊರೋನಾ ಮುಕ್ತವಾಗಲಿ'
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಿಸಿರುವುದರಿಂದ ನನ್ನ ಜವಾಬ್ದಾರಿ ಹೆಚ್ಚಾಗಿದೆ| BSY ನಂಬಿಕೆಗೆ ಚ್ಯುತಿ ಬಾರದಂತೆ ಕರ್ತವ್ಯ ನಿರ್ವಹಿಸುತ್ತೇನೆಂಬ ವಿಶ್ವಾಸ ನನಗಿದೆ: ಎಸ್.ಟಿ. ಸೋಮಶೇಖರ್|ಮೈಸೂರು ರಾಜ್ಯದಲ್ಲೇ ಎರಡನೇ ಅತಿ ಹೆಚ್ಚು ಕೊರೋನಾ ಸೋಂಕಿತರನ್ನು ಹೊಂದಿರುವ ಜಿಲ್ಲೆ| ಈ ಜಿಲ್ಲೆಯಲ್ಲಿ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿ ಕೊರೋನಾ ಮುಕ್ತವನ್ನಾಗಿ ಮಾಡಬೇಕಾಗಿದೆ|
ಬೆಂಗಳೂರು(ಏ.10): ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿದ್ದಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಧನ್ಯವಾದಗಳು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಿಸಿರುವುದರಿಂದ ನನ್ನ ಜವಾಬ್ದಾರಿ ಹೆಚ್ಚಾಗಿದೆ. ಅವರ ನಂಬಿಕೆಗೆ ಚ್ಯುತಿ ಬಾರದಂತೆ ಕರ್ತವ್ಯ ನಿರ್ವಹಿಸುತ್ತೇನೆಂಬ ವಿಶ್ವಾಸ ನನಗಿದೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ರಾಜ್ಯದಲ್ಲೇ ಎರಡನೇ ಅತಿ ಹೆಚ್ಚು ಕೊರೋನಾ ಸೋಂಕಿತರನ್ನು ಹೊಂದಿರುವ ಜಿಲ್ಲೆಯಾಗಿದೆ. ಹೀಗಾಗಿ ಈ ಜಿಲ್ಲೆಯಲ್ಲಿ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿ ಕೊರೋನಾ ಮುಕ್ತವನ್ನಾಗಿ ಮಾಡಬೇಕಾಗಿದೆ. ಇದಕ್ಕೆ ಜಿಲ್ಲಾಡಳಿತದಲ್ಲಿರುವ ಯುವ ಹಾಗೂ ದಕ್ಷ ಅಧಿಕಾರಿಗಳ ಸಹಕಾರದಿಂದ ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಡಯಾಬಿಟಿಸ್ ಇರೋರಿಗೆ ಕೊರೋನಾ ತಗುಲದಂತೆ ಮಾಡಲು ಏನು ಮಾಡಬೇಕು..?
ತಾಯಿ ಚಾಮುಂಡೇಶ್ವರಿಯ ಕೃಪೆಯಿಂದ ಜಿಲ್ಲೆ ಶೀಘ್ರ ಕೊರೋನಾ ಮುಕ್ತವಾಗಲಿ ಎಂದು ಇದೇ ವೇಳೆ ಆಶೀಸುತ್ತೇನೆ. ಜೊತೆಗೆ ಆ ಭಾಗದ ಹಾಲಿ ಮತ್ತು ಮಾಜಿ ಸಂಸತ್ ಸದಸ್ಯರು, ಶಾಸಕರುಗಳ ಸಹಕಾರ, ಸುತ್ತೂರು ಶ್ರೀಗಳ ಮಾರ್ಗದರ್ಶನ, ಯದುವಂಶದ ಪ್ರಮೋದಾದೇವಿ ಒಡೆಯರ್ ಹಾಗೂ ಯುದುವೀರ ಒಡೆಯರ್ ಹಿಂದಿನ ಉಸ್ತುವಾರಿ ಸಚಿವರಾದ ಸೋಮಣ್ಣ ಅವರು ಮಾದ್ಯಮ ಮಿತ್ರರು ಸೇರಿದಂತೆ ಮೈಸೂರಿನ ಪ್ರಜ್ಞಾವಂತ ನಾಗರಿಕರು, ಸಂಘ ಸಂಸ್ಥೆಗಳು ಹಾಗೂ ಹಲವು ಪ್ರಮುಖರ ಸಲಹೆ ಸಹಕಾರಗಳ ಮೇರೆಗೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲು ಬದ್ಧನಿದ್ದೇನೆ ಎಂದಿದ್ದಾರೆ.
ಈಗಾಗಲೇ ಸಾಕಷ್ಟು ಹಿರಿಮೆ ಗರಿಮೆಗಳನ್ನು ಹೊಂದಿರುವ ಮೈಸೂರು ಜಿಲ್ಲೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಸರಕಾರದ ಕನಸಿಗೆ ಎಲ್ಲರ ಸಹಕಾರದ ಅಗತ್ಯವಿದೆ. ಇಂದು ಸಂಜೆ 6ಗಂಟೆಗೆ ನಾನು ಮೈಸೂರಿಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದು ನಂತರ ವಾಸ್ತವ್ಯ ಹೂಡುತ್ತೇನೆ. ನಾಳೆ ಬೆಳಿಗ್ಗೆ ಜನಪ್ರತಿನಿಧಿಗಳ ಸಭೆ ನಡೆಸುತ್ತೇನೆ. ನನ್ನನ್ನು ಸ್ವಾಗತಿಸಲು ಯಾರೂ ಬರುವುದು ಬೇಡ ಈ ಸಂದರ್ಭದಲ್ಲಿ ನಾನು ಯಾವುದೇ ಪುಷ್ಪಗುಚ್ಛಗಳನ್ನು ಸ್ವೀಕಾರ ಮಾಡುವುದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಇರಬೇಕು. ಎಲ್ಲರೂ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದ್ದಾರೆ.