Asianet Suvarna News Asianet Suvarna News

Chamarajanagar: ರಾಷ್ಟ್ರೀಯ ಹೆದ್ದಾರಿ ಪೂರ್ಣಕ್ಕೆ ಸಚಿವ ನಿತಿನ್‌ ಗಡ್ಕರಿಗೆ ಮನವಿ

ಬಹು ವರ್ಷಗಳಿಂದ ನೆನಗುದಿಗೆ ಬಿದ್ದಿರುವ ರಾಷ್ಟ್ರೀಯ ಹೆದ್ದಾರಿ-209 ಕಾಮಗಾರಿ ಪೂರ್ಣಗೊಳಿಸುವಂತೆ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್‌ ಗಡ್ಕರಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ ಮನವಿ ಸಲ್ಲಿಸಿದರು. 

DK Shivakumar and R Dhruvanarayana meets Minister Nitin Gadkari at Chamarajanagar gvd
Author
First Published Sep 13, 2022, 12:55 AM IST

ಚಾಮರಾಜನಗರ (ಸೆ.13): ಬಹು ವರ್ಷಗಳಿಂದ ನೆನಗುದಿಗೆ ಬಿದ್ದಿರುವ ರಾಷ್ಟ್ರೀಯ ಹೆದ್ದಾರಿ-209 ಕಾಮಗಾರಿ ಪೂರ್ಣಗೊಳಿಸುವಂತೆ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್‌ ಗಡ್ಕರಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ ಮನವಿ ಸಲ್ಲಿಸಿದರು. ರಾಷ್ಟ್ರೀಯ ಹೆದ್ದಾರಿ-209ರ ಕಾಮಗಾರಿ 2017ರಲ್ಲಿ ಪ್ರಾರಂಭವಾಯಿತು. 2019ಕ್ಕೆ ಪೂರ್ಣವಾಗಬೇಕಿತ್ತು. 2022 ನಡೆಯುತ್ತಿದ್ದು 3 ವರ್ಷದವಾದರೂ ಇದು ನೆನೆಗುದಿಗೆ ಬಿದ್ದಿದೆ. ಈ ರಸ್ತೆ ಬೆಂಗಳೂರು- ಕನಕಪುರ ಮಾರ್ಗವಾಗಿ ದಿಂಡಿಗಲ್‌ ತಲುಪುತ್ತದೆ. ಈ ರಸ್ತೆಯು ಒಂದು ಒಳ್ಳೆಯ ಯೋಜನೆಯಾಗಿದ್ದು, 3 ವರ್ಷದಿಂದ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದರು.

ಭೂಸ್ವಾಧೀನಕ್ಕೆ ಹಣ ಬಿಡಗಡೆ ಮಾಡಿಸಲಿ: ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ. ವಿ.ಸೋಮಣ್ಣ ಅವರು ರೈಲ್ವೆ ಯೋಜನೆ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಬೆಂಗಳೂರಿನಿಂದ ಚಾಮರಾಜನಗರ, ಕನಕಪುರ, ಮಳವಳ್ಳಿ, ಕೊಳ್ಳೇಗಾಲ, ಯಳಂದೂರು, ರೈಲು ಮಾರ್ಗ ಯೋಜನೆಯು ಅನುಮೋದನೆ ಯೋಜನೆ ಆಗಿದ್ದು, ಇದರಿಂದ ಜಿಲ್ಲೆಗೆ ಬಹಳಷ್ಟು ಅನುಕೂಲವಾಗಲಿದೆ. ಇದಕ್ಕೆ ಯಾವುದೇ ಸರ್ವೆ ಮಾಡಬೇಕಾಗಿಲ್ಲ. ಭೂಸ್ವಾಧೀನ ಪ್ರಕ್ರಿಯೆ ನೆನೆಗುದಿ ಬಿದ್ದಿದೆ. ಅದಕ್ಕೆ ಅನುದಾನ ಬಿಡುಗಡೆ ಮಾಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ. ವಿ.ಸೋಮಣ್ಣ ಅವರಲ್ಲಿ ಧ್ರುವನಾರಾಯಣ ಮನವಿ ಮಾಡಿದ್ದಾರೆ.

ಕೆರೆ ಒತ್ತುವರಿ ನಿರ್ದಾಕ್ಷಿಣ್ಯ ತೆರವುಗೊಳಿಸಲು ಸೂಚನೆ: ಸಚಿವ ಸೋಮಣ್ಣ

ಬೆಂ-ಮೈಸೂರು ರಸ್ತೆ ಸಮಸ್ಯೆಗೆ ಗಡ್ಕರಿ ಪರಿಹಾರ: ‘ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರ ಜತೆ ಶಿರಾಡಿ ಘಾಟ್‌, ಬೆಂಗಳೂರು-ಮೈಸೂರು ಸೇರಿದಂತೆ ರಾಜ್ಯದ ಪ್ರಮುಖ ಹೆದ್ದಾರಿಗಳ ಸಮಸ್ಯೆಗಳ ಬಗ್ಗೆ ಚರ್ಚೆ ನಡೆದಿದೆ. ಸಮಸ್ಯೆ ಬಹೆರಿಸಲು ಹಾಗೂ ಅಗತ್ಯ ಇರುವ ಅನುದಾನ ಘೋಷಣೆ ಮಾಡಲು ಸಚಿವರಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇದೇ ವೇಳೆ, ‘ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಮಳೆಯಿಂದಾಗಿ ಇತ್ತೀಚೆಗೆ ಉಂಟಾಗಿದ್ದ ಪ್ರವಾಹ ಸಮಸ್ಯೆ ಗಡ್ಕರಿ ಗಮನಕ್ಕೆ ಬಂದಿದ್ದು, ರಸ್ತೆಯಲ್ಲಿ ಒಳಚರಂಡಿ ವ್ಯವಸ್ಥೆಗೆ ಹೊಸ ಯೋಜನೆ ರೂಪಿಸುವುದಾಗಿ ಭರವಸೆ ನೀಡಿದ್ದಾರೆ’ ಎಂದೂ ಮುಖ್ಯಮಂತ್ರಿ ಹೇಳಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಿತಿನ್‌ ಗಡ್ಕರಿ ಅವರನ್ನು ಮುಖ್ಯಮಂತ್ರಿ ಭೇಟಿ ಮಾಡಿದ ರಾಜ್ಯದ ಹೆದ್ದಾರಿಗಳ ಪರಿಸ್ಥಿತಿ ಹಾಗೂ ಯೋಜನೆಗಳ ಬಗ್ಗೆ ಚರ್ಚಿಸಿದರು. ಮುಖ್ಯವಾಗಿ ರಾಜ್ಯದಲ್ಲಿರುವ ರಾಷ್ಟ್ರೀಯ ಹೆದ್ದಾರಿಗಳು, ಶಿರಾಡಿ ಘಾಟ್‌ನಿಂದ ಹಿಡಿದು ಪ್ರಮುಖ ಹೆದ್ದಾರಿಗಳಲ್ಲಿನ ಸಮಸ್ಯೆ, ಜನರಿಗೆ ಆಗುತ್ತಿರುವ ಕಿರಿ ಕಿರಿ ಬಗ್ಗೆ ಚರ್ಚೆ ಆಗಿದೆ. ಮಳೆಯಿಂದಾಗಿ ರಸ್ತೆಗಳ ಹದಗೆಟ್ಟಸ್ಥಿತಿ ಬಗ್ಗೆ ಪ್ರತಿಪಕ್ಷಗಳು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಗ್ಗೆ ಗಂಭೀರ ಚರ್ಚೆ ನಡೆದಿರುವುದಾಗಿ ತಿಳಿದುಬಂದಿದೆ.

ದೇಶದಲ್ಲಿ ಶಾಂತಿ ನೆಲಸಲು ಭಾರತ್‌ ಜೋಡೋ ಯಾತ್ರೆ: ಸಿದ್ದರಾಮಯ್ಯ

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ‘ನಿರ್ಮಾಣ ಹಂತದಲ್ಲಿರುವ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇತ್ತೀಚೆಗೆ ಉಂಟಾದ ಪ್ರವಾಹ, ವಿವಿಧ ರಾಷ್ಟ್ರೀಯ ಹೆದ್ದಾರಿಗಳು ಹಾಗೂ ಶಿರಾಡಿ ಘಾಟ್‌ ರಸ್ತೆ ಬಗ್ಗೆ ಚರ್ಚೆಯಾಗಿದೆ. ಕೇಂದ್ರ ರಸ್ತೆ ನಿಧಿಯಡಿ ನಿಯಮಿತ ಕಾಮಗಾರಿಗಳು, ಅದಕ್ಕೆ ಅಗತ್ಯವಿರುವ ಅನುದಾನ, ಹೆಚ್ಚಿನ ಹೆದ್ದಾರಿಗಳನ್ನು ಘೋಷಿಸುವುದರ ಬಗ್ಗೆ ಈಗಾಗಲೇ ಪತ್ರವನ್ನು ಕಳುಹಿಸಲಾಗಿತ್ತು. ಸಚಿವರು ಈ ಬಗ್ಗೆ ಸಕಾರಾತ್ಮಕವಾಗಿದ್ದಾರೆ’ ಎಂದರು. ಇದಲ್ಲದೆ, ‘ಮತ್ತೊಮ್ಮೆ ಈ ಬಗ್ಗೆ ಸಭೆ ನಡೆಸಿ ಕೂಡಲೇ ಏನು ಮಾಡಲು ಸಾಧ್ಯ? ಎಲ್ಲಾ ಏಜೆನ್ಸಿಗಳು, ಸರ್ಕಾರದ ಪ್ರಾಧಿಕಾರಗಳು ಹೇಗೆ ಕೆಲಸ ಮಾಡಲು ಸಾಧ್ಯ? ಕೇಂದ್ರ ಸರ್ಕಾರದಿಂದ ಏನಾಗಬೇಕು ಎಂಬ ಸ್ಥೂಲವಾಗಿ ಚರ್ಚಿಸಲಾಗುವುದು ಎಂದು ನಿತಿನ್‌ ಗಡ್ಕರಿ ಭರವಸೆ ನೀಡಿದ್ದಾರೆ. ಬಹಳಷ್ಟುಸಮಸ್ಯೆಗಳಿಗೆ ಪರಿಹಾರ ರೂಪದಲ್ಲಿ ಚರ್ಚೆ ಮಾಡಲಾಗಿದೆ’ ಎಂದರು.

Follow Us:
Download App:
  • android
  • ios