ಭಾರತ ಜೋಡೋ ಯಾತ್ರೆ​ಯಲ್ಲಿ KTM   ಬೈಕ್‌​ನಲ್ಲಿ ಬರುವ ಮೂಲಕ ಸಂಸದ ಡಿ.ಕೆ. ಸುರೇಶ್‌ ಹಾಗೂ ಶರತ್‌ ಬಚ್ಚೇ​ಗೌ​ಡ ಅವರು ಆಗ​ಮಿಸಿ ಗಮ​ನ​ಸೆ​ಳೆ​ದರು.

ತುಮಕೂರು(ಅ.09): ಭಾರತ ಜೋಡೋ ಯಾತ್ರೆ​ಯಲ್ಲಿ KTM ಬೈಕ್‌​ನಲ್ಲಿ ಬರುವ ಮೂಲಕ ಸಂಸದ ಡಿ.ಕೆ. ಸುರೇಶ್‌ ಹಾಗೂ ಶರತ್‌ ಬಚ್ಚೇ​ಗೌ​ಡ ಅವರು ಆಗ​ಮಿಸಿ ಗಮ​ನ​ಸೆ​ಳೆ​ದರು. ತುರುವೇಕೆರೆಯಿಂದ ಮುಂದೆ ಸಾಗುವಾಗ, ರಾಹುಲ್ ಗಾಂಧಿ ಪಾದಯಾತ್ರೆ ಹಿಂದೆ ಹಾಕಿ ಬೈಕ್‌ನಲ್ಲಿ ಮುಂದೆ ಹೋಗುವ ಮೂಲಕ ಗಮ​ನ​ಸೆ​ಳೆ​ದರು.

Add Asianetnews Kannada as a Preferred SourcegooglePreferred

ಆರ್ಥಿಕ ಅಸಮಾನತೆಯಿಂದ ದೇಶದ ಬಹುತೇಕರು ಬಡವರು

 ಆರ್ಥಿಕ ಅಸಮಾನತೆಯಿಂದ ಕೆಲವರು ದೇಶದ ಶ್ರೀಮಂತರಾದರೆ, ಬಹುತೇಕರು ಬಡವರಾಗಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ವಾಗ್ದಾಳಿ ನಡೆಸಿದರು.

ತುಮಕೂರು ಜಿಲ್ಲೆಯ ತುರುವೇಕೆರೆಗೆ ಭಾರತ್‌ ಜೋಡೋ ಯಾತ್ರೆ (Bharath Jodo Yatra) ಆಗಮಿಸಿದ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸಣ್ಣ ಹಾಗೂ ಮಧ್ಯಮ ಉದ್ಯಮಗಳು ಕುಸಿಯುತ್ತಿದ್ದು, ಕೆಲ ಉದ್ಯಮಿಗಳ ಬಳಿ ದೇಶದ ಸಂಪತ್ತು ಸೇರುತ್ತಿದ್ದು, ಆರ್ಥಿಕ ಕುಸಿತವುಂಟಾಗಿ, ನಿರುದ್ಯೋಗ ಹೆಚ್ಚಾಗುತ್ತಿದೆ. ಬೆಲೆ ಏರಿಕೆಯಿಂದ ಜನ ಸಾಮಾನ್ಯರ ಬದುಕು ದುಸ್ತರವಾಗಿದ್ದು, ಅವರ ಗಂಭೀರ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತುವುದು ಈ ಯಾತ್ರೆಯ ಪ್ರಮುಖ ಉದ್ದೇಶ ಎಂದು ರಾಹುಲ್‌ಗಾಂಧಿ (Rahul Gandhi) ತಿಳಿಸಿದರು.

ಈ ಪಾದಯಾತ್ರೆ ಸಂದರ್ಭದಲ್ಲಿ ನಾನು ಯುವಕರ ಜತೆ ಮಾತನಾಡುವಾಗ, ನೀವು ಏನು ಮಾಡುತ್ತಿದ್ದೀರಾ ಎಂದು ಸರಳ ಪ್ರಶ್ನೆ ಕೇಳಿದೆ. ಅವರು ಶಾಲೆ, ಪದವಿ ಹಾಗೂ ವಿವಿಧ ಹಂತದ ವಿದ್ಯಾಭ್ಯಾಸ ಮಾಡುತ್ತಿರುವುದಾಗಿ ತಿಳಿಸಿದರು. ನಂತರ ನಿಮಗೆ ಕೆಲಸ ಸಿಗುತ್ತದೆಯೇ ಎಂದು ಕೇಳಿದೆ. ಅವರು ಇಲ್ಲ ಎಂದರು. ರೈತರು, ಮಧ್ಯಮ ವರ್ಗದ ಜನರ ಜತೆ ಮಾತನಾಡಿದಾಗ ಅವರು ಬೆಲೆ ಏರಿಕೆ ಬಗ್ಗೆ ಮಾತನಾಡುತ್ತಾರೆ. ಅದರ ಆಧಾರದ ಮೇಲೆ ಯಾತ್ರೆ ಸಂದರ್ಭದಲ್ಲಿ ನಾವು ಮಾತನಾಡುತ್ತಿದ್ದೇವೆ ಎಂದು ರಾಹುಲ್‌ ತಿಳಿಸಿದರು.

ಚೀನಾ ಅತಿಕ್ರಮಣ:

ಚೀನಾ ಸೇನೆ ಭಾರತ ಗಡಿಯೊಳಗೆ ಅತಿಕ್ರಮಣ ಮಾಡಿದೆ. ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಈ ಕುರಿತ ಚರ್ಚೆಗೆ ಅವಕಾಶ ನೀಡಲು ನಿರಾಕರಿಸುತ್ತಿದೆ. ಪ್ರಧಾನಮಂತ್ರಿ ಮೋದಿಯವರೇ ದೇಶದ ಗಡಿಯಲ್ಲಿ ಯಾವುದೇ ಅತಿಕ್ರಮಣ ಆಗಿಲ್ಲ ಎಂದು ಹೇಳುತ್ತಾರೆ. ದೇಶದ ಪ್ರಧಾನಿಯೇ ಈ ರೀತಿ ಹೇಳಿಕೆ ಕೊಟ್ಟಾಗ ಚೀನಾದವರಿಗೆ ಬೆಂಬಲ ನೀಡಿದಂತಾಗುತ್ತದೆ ಎಂದು ರಾಹುಲ್‌ ಬೇಸರವ್ಯಕ್ತಪಡಿಸಿದರು.

ಕೆಲವರಿಗಷ್ಟೇ ಆದ್ಯತೆ ದೇಶಕ್ಕೆ ಮಾರಕ:

ರಾಜಸ್ಥಾನದಲ್ಲಿ ಉದ್ಯಮಿ ಅದಾನಿ ಅವರಿಗೆ ಬಂಡವಾಳ ಹೂಡಿಕೆಗೆ ಅವಕಾಶ ನೀಡಿರುವ ಬಗ್ಗೆ ಕೇಳಿದಾಗ, ಅದಾನಿ ಅವರು ರಾಜಸ್ಥಾನದಲ್ಲಿ 67 ಸಾವಿರ ಕೋಟಿ ರು. ಬಂಡವಾಳ ಹೂಡಿಕೆಗೆ ಪ್ರಸ್ತಾವನೆ ನೀಡಿದ್ದಾರೆ. ಯಾವುದೇ ರಾಜ್ಯದ ಮುಖ್ಯಮಂತ್ರಿ ಇದನ್ನು ನಿರಾಕರಿಸುವುದಿಲ್ಲ, ನಿರಾಕರಿಸುವುದು ಸರಿಯೂ ಅಲ್ಲ. ರಾಜಸ್ಥಾನ ಸರ್ಕಾರ ಅದಾನಿಗೆ ವಿಶೇಷ ಆದ್ಯತೆ ನೀಡಿಲ್ಲ. ಅವರ ವ್ಯಾಪಾರ ವ್ಯವಹಾರಕ್ಕೆ ಅನುಕೂಲ ಮಾಡಿಕೊಡಲು ರಾಜಕೀಯ ಅಧಿಕಾರ ದುರ್ಬಳಕೆ ಮಾಡಿಕೊಂಡಿಲ್ಲ. ಆದರೆ ಬಿಜೆಪಿ ಸರ್ಕಾರ ಕೇವಲ ಒಂದಿಬ್ಬರು ವ್ಯಾಪಾರಸ್ಥರಿಗೆ ವಿಶೇಷ ಆದ್ಯತೆ ನೀಡಿ ಬೆಳೆಸುತ್ತಿದೆ. ನಾನು ಉದ್ಯಮಿಗಳು ಅಥವಾ ಬೇರೆ ವ್ಯಾಪಾರಸ್ಥರ ವಿರುದ್ಧವಿಲ್ಲ. ಆದರೆ ಕೆಲವರಿಗೆ ಮಾತ್ರ ಆದ್ಯತೆ ನೀಡುವುದು ದೇಶಕ್ಕೆ ಮಾರಕ. ರಾಜಸ್ಥಾನ ಸರ್ಕಾರ ಪ್ರಾಮಾಣಿಕವಾಗಿ ಬಂಡವಾಳ ಹೂಡಿಕೆಗೆ ಅವಕಾಶ ನೀಡಿದ್ದರೆ ಬೆಂಬಲಿಸುತ್ತೇನೆ. ಆದರೆ ಅವರಿಗಾಗಿ ವಿಶೇಷ ಆದ್ಯತೆ ನೀಡಲು ರಾಜಕೀಯ ಅಧಿಕಾರ ದುರ್ಬಳಕೆ ಮಾಡಿದ್ದರೆ ಆಗ ರಾಜಸ್ಥಾನದ ಸರ್ಕಾರದ ವಿರುದ್ಧವೂ ನಿಲ್ಲುತ್ತೇನೆ ಎಂದು ತಿಳಿಸಿದರು.

ಎಲ್ಲ ರಾಜ್ಯಗಳು ಸಮಾನ:

ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ದಕ್ಷಿಣ ರಾಜ್ಯಗಳಿಗೆ ಗೌರವ ನೀಡದೇ ಕಡೆಗಣಿಸಲಾಗುತ್ತಿದೆ ಎಂಬ ದೂರು ಇದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಸಂಸತ್ತಿನ ಭಾಷಣದಲ್ಲಿ ಭಾರತವನ್ನು ಸಂವಿಧಾನಿಕ ರಾಜ್ಯಗಳ ಒಕ್ಕೂಟ ದೇಶ ಎಂದು ಹೇಳಿದ್ದೆ. ನಮ್ಮ ದೇಶದ ಎಲ್ಲ ಭಾಷೆ, ರಾಜ್ಯಗಳು, ಸಂಪ್ರದಾಯಗಳು ಸಮಾನ ಪ್ರಾಮುಖ್ಯತೆ ಹೊಂದಿದ್ದು, ಎಲ್ಲರಿಗೂ ಸಮಾನ ಪ್ರಾಧಾನ್ಯತೆ ಸಿಗಬೇಕು ಎಂದರು.