ತಿಪಟೂರು ನಗರದ ತ್ರಿಮೂರ್ತಿ ಚಿತ್ರ ಮಂದಿರದ ಮುಂಭಾಗದಲ್ಲಿ ಕೊಳಚೆ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಜನ ತೊಂದರೆ ಪಡುತ್ತಿದ್ದಾರೆ. ಜೊತೆಗೇ ರೋಗ ಹರಡುವ ಸಾಧ್ಯತೆ ಇರುವ ಬಗ್ಗೆ ಜನ ಆತಂಕ ವ್ಯಕ್ತಪಡಿಸಿದ್ದಾರೆ.

ತುಮಕೂರು(ಜು.21): ತಿಪಟೂರು ನಗರದ ತ್ರಿಮೂರ್ತಿ ಚಿತ್ರ ಮಂದಿರದ ಮುಂಭಾಗದಲ್ಲಿ ರಸ್ತೆಯಲ್ಲಿರುವ ಮ್ಯಾನ್‌ಹೋಲ್‌ನಲ್ಲಿ ತ್ಯಾಜ್ಯ ಕಸ ಸಂಗ್ರಹಣೆಯಾಗಿ ಕೊಳಚೆ ನೀರು ಸರಾಗವಾಗಿ ಹರಿಯಲಾಗದೆ ರಸ್ತೆಯ ಮೇಲೆ ಹರಿಯುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೊಳಚೆ ನೀರು ದುರ್ವಾಸನೆ ಬೀರುತ್ತಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಆದರೆ ನಗರಸಭೆ ಅಧಿಕಾರಿಗಳು ಇತ್ತ ಗಮನಹರಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ. ತ್ಯಾಜ್ಯ, ಕಸ ಕಟ್ಟಿಕೊಂಡು ಕೊಳಚೆ ನೀರು ರಸ್ತೆಯಲ್ಲೇ ಹರಿಯುತ್ತಿರುವುದರಿಂದ ಕಿರಿಕಿರಿಯಾಗುತ್ತಿದ್ದು, ವಾಹನ ಸವಾರರು ಬೇರೆ ಮಾರ್ಗವಿಲ್ಲದೇ ಕೊಳಚೆ ನೀರಿನ ಮೇಲೆಯೇ ಓಡಾಡುವಂತಾಗಿದೆ.

ಇಂಟರ್‌ಸಿಟಿ ರೈಲಿನಲ್ಲಿ ಕೊಳಚೆ ನೀರಿನ ಚಾಯ್‌!

ರಾಜ್ಯದಲ್ಲಿ ಹಲವೆಡೆ ವೈರಲ್ ಫಿವರ್ ಸೇರಿ ಹಲವು ಸಾಂಕ್ರಾಮಿಕ ರೋಗ ಹರಡುತ್ತಿದ್ದು, ಕೊಳಚೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ಇನ್ನಷ್ಟು ಆರೋಗ್ಯ ಸಮಸ್ಯೆಗೆ ಕಾರಣವಾಗುವ ಸಾಧ್ಯತೆಗಳ ಬಗ್ಗೆ ಜನ ಆತಂಕ ವ್ಯಕ್ತಪಡಿಸಿದ್ದಾರೆ.

ಒಳಚರಂಡಿ ದುರಸ್ತಿಗೆ ಆಗ್ರಹ:

ಒಳಚರಂಡಿಯಲ್ಲಿ ಪ್ಲಾಸ್ಟಿಕ್‌, ಕಸ, ಕಡ್ಡಿಗಳಂತಹ ತ್ಯಾಜ್ಯ ಕಟ್ಟಿಕೊಂಡಿರುವುದು ಈ ಅವ್ಯವಸ್ಥೆಗೆ ಕಾರಣವಾಗಿದೆ. ಇದೇ ರೀತಿ ಸಮಸ್ಯೆಗಳು ನಗರದೆಲ್ಲೆಡೆ ಕಂಡು ಬರುತ್ತಿದ್ದು, ಸಾರ್ವಜನಿಕರ ಹಾಗೂ ವಾಹನ ಸವಾರರ ಓಡಾಟಕ್ಕೆ ತೊಂದರೆಯಾಗುತ್ತಿದೆ. ಕೂಡಲೇ ಸಂಬಂಧ ಪಟ್ಟಅಧಿಕಾರಿಗಳು ಇತ್ತ ಗಮನಹರಿಸಿ ಒಳಚರಂಡಿ ದುರಸ್ತಿಗೊಳಿಸಿ ರಸ್ತೆಯ ಮೇಲೆ ಹರಿಯುತ್ತಿರುವ ಕೊಳಚೆ ನೀರನ್ನು ನಿಲ್ಲಿಸಿ ಸಾರ್ವಜನಿಕರಿಗಾಗುತ್ತಿರುವ ಸಮಸ್ಯೆ ಬಗೆಹರಿಸಬೇಕು ಎಂದು ತಿಪಟೂರು ನಿವಾಸಿಗಳು ಆಗ್ರಹಿಸಿದ್ದಾರೆ.