‘ಬರ ಹಣ ರೈತರ ಸಾಲಕ್ಕೆ ಜಮೆ’ ಶೀರ್ಷಿಕೆಯಡಿ ‘ಕನ್ನಡಪ್ರಭ’ದಲ್ಲಿ ಮೇ. 15ರಂದು ಪ್ರಕಟಗೊಂಡಿದ್ದ ವರದಿಯಿಂದ ಎಚ್ಚೆತ್ತ ಜಿಲ್ಲಾಡಳಿತ, ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಬ್ಯಾಂಕುಗಳಿಗೆ ಆದೇಶಿಸಿತ್ತು. 

ಯಾದಗಿರಿ(ಮೇ.18):  ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಬರ ಪರಿಹಾರದ ಹಣ ಸೇರಿದಂತೆ ವೃದ್ಧಾಪ್ಯ ವೇತನ, ಅಂಗವಿಕಲರ ಮಾಸಾಶನ, ನರೇಗಾ ಕೂಲಿ ಹಣವನ್ನು ರೈತರ ಸಾಲದ ಖಾತೆಗಳಿಗೆ ಜಮೆ ಮಾಡಿಕೊಳ್ಳುತ್ತಿದ್ದ ಬ್ಯಾಂಕುಗಳ ಕ್ರಮದ ವಿರುದ್ಧ ಶುಕ್ರವಾರ ಪ್ರಕಟಗೊಂಡ ‘ಕನ್ನಡಪ್ರಭ’ ವರದಿ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬರ ಪರಿಹಾರದ ಹಣವಷ್ಟೇ ಅಲ್ಲ, ‘ಪಿಂಚಣಿ, ನರೇಗಾ ಕೂಲಿ ಹಣವೂ ಸಾಲಕ್ಕೆ ಜಮೆ’ ಶೀರ್ಷಿಕೆಯಡಿ ಶುಕ್ರವಾರ ಪ್ರಕಟಗೊಂಡ ವರದಿ ಆಡಳಿತಕ್ಕೆ ಚುರುಕು ಮುಟ್ಟಿಸಿದೆ. ಬ್ಯಾಂಕುಗಳ ಈ ಕ್ರಮ ರೈತಾಪಿ ವರ್ಗದಲ್ಲಿ ಆಕ್ರೋಶ ಮೂಡಿಸಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಡಾ.ಸುಶೀಲಾ ಆದೇಶದ ಮೇರೆಗೆ, ಜಿಲ್ಲೆಯ ಎಲ್ಲ ಬ್ಯಾಂಕುಗಳ ವ್ಯವಸ್ಥಾಪಕರ ಜೊತೆ ತುರ್ತು ಸಭೆ ನಡೆಸಿದ ಯಾದಗಿರಿ ಜಿಲ್ಲಾ ಲೀಡ್‌ ಬ್ಯಾಂಕ್‌ ಪ್ರಧಾನ ವ್ಯವಸ್ಥಾಪಕ ಲೋಕೇಶ್, ಇಂತಹ ಯಾವುದೇ ಕ್ರಮಕ್ಕೆ ಮುಂದಾಗದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ರೈತರಿಗೆ ನೀಡಿದ ಬರ ಪರಿಹಾರದ ಹಣ ಸಾಲಕ್ಕೆ ಜಮೆ: ಬ್ಯಾಂಕ್‌ ವಿರುದ್ಧ ಎಚ್‌ಡಿಕೆ ಕಿಡಿ

ಬರ ಪರಿಹಾರದ ಹಣ ಸೇರಿದಂತೆ ವೃದ್ಧಾಪ್ಯ ವೇತನ, ವಿಧವಾ ವೇತನ, ಪಿಂಚಣಿ, ಪಿಎಂ ಕಿಸಾನ್‌ ನೆರವು ಮುಂತಾದ ಸರ್ಕಾರದಿಂದ ಫಲಾನುಭವಿಗಳಿಗೆ ನೇರವಾಗಿ (ಡಿಬಿಟಿ- ಡೈರೆಕ್ಟ್‌ ಬೆನೆಫಿಟ್‌ ಟ್ರಾನ್ಸಫರ್‌) ಸಂದಾಯವಾಗುವ ಹಣವನ್ನು ಯಾವುದೇ ಕಾರಣಕ್ಕಾಗಿ ಸಾಲದ ಖಾತೆಗಳಿಗೆ ಹೊಂದಾಣಿಕೆ ಮಾಡಿಕೊಳ್ಳಬಾರದು ಎಂದು ಸೂಚಿಸಿದರು.

ಸರ್ಕಾರವು 2023-24ನೇ ಸಾಲಿನ ಅವಧಿಯಲ್ಲಿ ಬರ ಹಿನ್ನೆಲೆಯಲ್ಲಿ ರೈತರ ಬ್ಯಾಂಕ್‌ ಖಾತೆಗೆ ಜಮೆ ಮಾಡಿದ ಪರಿಹಾರದ ಮೊತ್ತವನ್ನು ಬ್ಯಾಂಕುಗಳು ರೈತರ ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿವೆ ಎಂದು ಆರೋಪ ಕೇಳಿ ಬರುತ್ತಿದ್ದು, ಇದನ್ನು ಬಹಳ ಗಂಭೀರ ವಿಷಯವಾಗಿ ಪರಿಗಣಿಸಲಾಗಿದೆ. ರೈತರು, ಸಾರ್ವಜನಿಕರು ಬ್ಯಾಂಕಿಗೆ ಬಂದಾಗ ಸಂಯಮದಿಂದ ವರ್ತಿಸುವ ಮೂಲಕ ಸ್ಪಂದಿಸಬೇಕು. ಏನಾದರೂ ತಾಂತ್ರಿಕ ದೋಷಗಳಿದ್ದರೆ ತಿಳಿವಳಿಕೆ ಮೂಡಿಸಿ ಸಮಸ್ಯೆ ಇತ್ಯರ್ಥಪಡಿಸಲು ಸಹಕಾರ ನೀಡಿ ಎಂದು ಲೋಕೇಶ್‌ ಸೂಚಿಸಿದರು.

ಎಸ್‌ಬಿಐ ಪ್ರಾದೇಶಿಕ ಕಚೇರಿಯ ಮುಖ್ಯ ವ್ಯವಸ್ಥಾಪಕ ಸಿ.ಎಮ್.ಲೋಯಿಸ್, ಕರ್ನಾಟಕ ಗ್ರಾಮೀಣ ಬ್ಯಾಂಕಿನ ಕರ್ನಾಟಕ ವಿಭಾಗೀಯ ಅಧಿಕಾರಿ ಸುಬೇದಾರ್ ಮುಂತಾದವರು ಸಭೆಯಲ್ಲಿದ್ದರು.

ಪಿಂಚಣಿ, ನರೇಗಾ ಕೂಲಿ ಹಣವೂ ಸಾಲಕ್ಕೆ ಜಮೆ..!

ಸಂಚಲನ ಮೂಡಿಸಿದ ‘ಕನ್ನಡಪ್ರಭ’ ವರದಿ:

‘ಬರ ಹಣ ರೈತರ ಸಾಲಕ್ಕೆ ಜಮೆ’ ಶೀರ್ಷಿಕೆಯಡಿ ‘ಕನ್ನಡಪ್ರಭ’ದಲ್ಲಿ ಮೇ. 15ರಂದು ಪ್ರಕಟಗೊಂಡಿದ್ದ ವರದಿಯಿಂದ ಎಚ್ಚೆತ್ತ ಜಿಲ್ಲಾಡಳಿತ, ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಬ್ಯಾಂಕುಗಳಿಗೆ ಆದೇಶಿಸಿತ್ತು. ಆದರೆ, ಜಿಲ್ಲಾಧಿಕಾರಿ ಆದೇಶಕ್ಕೂ ಕ್ಯಾರೇ ಅನ್ನದ ಬ್ಯಾಂಕ್‌ ಅಧಿಕಾರಿಗಳು, ಸಾಮಾಜಿಕ ಪಿಂಚಣಿಗಳಾದ ವೃದ್ಧಾಪ್ಯ ವೇತನ, ಅಂಗವಿಕಲರ ಮಾಸಾಶನ, ನರೇಗಾ ಕೂಲಿ ಹಣವನ್ನೂ ಫಲಾನುಭವಿಗಳಿಗೆ ನೀಡಲು ಹಿಂದೇಟು ಹಾಕಿದ್ದವು. ಬ್ಯಾಂಕುಗಳ ಈ ಧೋರಣೆ ವಿರುದ್ಧ ಅನೇಕ ರೈತರು ತಮ್ಮ ನೋವು ತೋಡಿಕೊಂಡಿದ್ದರು.

ಈ ಕುರಿತು ‘ಕನ್ನಡಪ್ರಭ’ದಲ್ಲಿ ಮೇ 16 ರಂದು ಪ್ರಕಟಗೊಂಡ ವರದಿ ಬ್ಯಾಂಕುಗಳಿಗೆ ಚುರುಕು ಮುಟ್ಟಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೂ ಇದು ಬಂದಿದ್ದು, ಕ್ರಮಕ್ಕೆ ಮುಂದಾಗುವಂತೆ ಸೂಚಿಸಿದ್ದರು ಎನ್ನಲಾಗಿದೆ.