ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಳ್ಳುವ ಮೂಲಕ ತಮ್ಮಲ್ಲಿರುವ ಪ್ರತಿಭಾಶಕ್ತಿಯನ್ನು ಅನಾವರಣ ಮಾಡಬೇಕೆಂದು ನಗರದ ಎಸ್‌ವಿಪಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಎನ್. ರೇಣುಕಯ್ಯ ತಿಳಿಸಿದರು.

 ತಿಪಟೂರು : ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಳ್ಳುವ ಮೂಲಕ ತಮ್ಮಲ್ಲಿರುವ ಪ್ರತಿಭಾಶಕ್ತಿಯನ್ನು ಅನಾವರಣ ಮಾಡಬೇಕೆಂದು ನಗರದ ಎಸ್‌ವಿಪಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಎನ್. ರೇಣುಕಯ್ಯ ತಿಳಿಸಿದರು.

Add Asianetnews Kannada as a Preferred SourcegooglePreferred

ನಗರದ ಎಸ್‌ವಿಪಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘಗಳ ಸಮಾರೋಪ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ಶ್ರದ್ಧೆ ಮತ್ತು ಏಕಾಗ್ರತೆಗಳೊಂದಿಗೆ ನಿರಂತರ ಪರಿಶ್ರಮದಿಂದ ಶಿಸ್ತಿನ ಶಿಕ್ಷಣ ಪಡೆಯಬೇಕು. ದೂರದೃಷ್ಟಿ ಪ್ರಜ್ಞೆಯಿಂದ ಸೃಜನಾತ್ಮಕ ಶೈಕ್ಷಣಿಕ ಕೌಶಲ್ಯಗಳನ್ನು ಸೂಕ್ತ ಸಮಯದಲ್ಲಿ ಕರಗತ ಮಾಡಿಕೊಳ್ಳುತ್ತಾ ಉತ್ತಮ ವಿದ್ಯಾರ್ಥಿಗಳಾಗಿ ರೂಪುಗೊಳ್ಳಬೇಕು. ದಿನನಿತ್ಯದ ಕಾರ್ಯಚಟುವಟಿಕೆಗಳಿಂದ ದೊರಕುವ ಬದುಕಿನ ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಯುಗದಲ್ಲಿ ಸಮಯವನ್ನು ವ್ಯರ್ತ ಮಾಡದೆ ಉತ್ತಮ ನಾಯಕತ್ವಗುಣಗಳನ್ನು ಸಂಪಾದಿಸಿಕೊಳ್ಳಬೇಕು. ದೃಢ ಆತ್ಮವಿಶ್ವಾಸದೊಂದಿಗೆ ಪರಿಪೂರ್ಣ ವ್ಯಕ್ತಿತ್ವ ರೂಪಿಸಿಕೊಳ್ಳುತ್ತಾ ಸಮಾಜದಲ್ಲಿ ಮಾನವೀಯ ಮೌಲ್ಯ ಮತ್ತು ಶಿಕ್ಷಣದ ಮಹತ್ವವನ್ನು ಎತ್ತಿಹಿಡಿಯಬೇಕು. ನೀವು ಕಲಿತ ವಿದ್ಯೆ ನಿಮಗೆ ವಿನಯ ನೀಡುತ್ತದೆ. ಆ ವಿನಯವನ್ನು ಬದುಕಿನಲ್ಲಿ ತೊಡಗಿಸಿಕೊಂಡರೆ ಭವಿಷ್ಯದ ಬದುಕು ಸುಂದರವಾಗಿರುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಗುರು ಮತ್ತು ಪೋಷಕರ ಮಾರ್ಗದರ್ಶನ ಅರಿತು ಸನ್ನಡತೆಯಲ್ಲಿ ಸಾಗಬೇಕೆಂದರು.

ದೈಹಿಕ ಶಿಕ್ಷಕ ಉದಯ್‌ಕುಮಾರ್ ಮಾತನಾಡಿ, ಸದೃಢ ಆರೋಗ್ಯಕ್ಕೆ ಹಾಗೂ ಮನಸ್ಸನ್ನು ವಿಕಾಸಗೊಳಿಸಲು ಕ್ರೀಡೆ ಸಹಕಾರಿಯಾಗಿದ್ದು, ವಿದ್ಯಾರ್ಥಿಗಳು ನಾಲ್ಕು ಗೋಡೆಗಳ ಮಧ್ಯೆ ಕಲಿಯುವ ವಿದ್ಯೆಯ ಜೊತೆಗೆ ನಿಮ್ಮ ಆಸಕ್ತಿಗನುಗುಣವಾದ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ನಿಮ್ಮಲ್ಲಿರುವ ಕ್ರೀಡಾಶಕ್ತಿಯನ್ನು ಪ್ರದರ್ಶಿಸಬೇಕು. ಯಾವುದೇ ಕ್ಷೇತ್ರದಲ್ಲಾದರೂ ಗುರಿ ಇದ್ದರೆ ಯಶಸ್ಸು ನಿಮ್ಮದಾಗುತ್ತದೆ. ವಿರಾಮದ ಸಮಯದಲ್ಲಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಸದೃಢ ಸಮಾಜದ ಜೊತೆಗೆ ನಮ್ಮ ದೇಹವನ್ನು ಆರೋಗ್ಯದಿಂದ ಇಟ್ಟುಕೊಳ್ಳಲು ಸಹಕಾರಿಯಾಗಿದ್ದು, ಈ ನಿಟ್ಟಿನಲ್ಲಿ ಪೋಷಕರು ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರ್ತಿಸಿ ಪ್ರೋತ್ಸಾಹ ನೀಡಬೇಕೆಂದರು.

ಕಾರ್ಯಕ್ರಮದಲ್ಲಿ ಶಿಕ್ಷಕರಾದ ವಿಜಯಕುಮಾರಿ, ಸಂತೋಷ್, ಸಿದ್ದೇಶ್, ಪದ್ಮಾ, ವೀರೇಶ್ ಮತ್ತಿತರರಿದ್ದರು.