ಸರ್ಕಾರಿ ಜಮೀನಿನಲ್ಲಿ ಹಲವು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ರೈತರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಶಾಸಕ ಎಸ್‌.ಟಿ. ಸೋಮಶೇಖರ್‌ ತಿಳಿಸಿದರು. 

ಕೆಂಗೇರಿ (ಫೆ.16): ಸರ್ಕಾರಿ ಜಮೀನಿನಲ್ಲಿ ಹಲವು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ರೈತರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಶಾಸಕ ಎಸ್‌.ಟಿ. ಸೋಮಶೇಖರ್‌ ತಿಳಿಸಿದರು. ಬೆಂಗಳೂರು ನಗರ ಜಿಲ್ಲಾಡಳಿತದಿಂದ ಯಶವಂತಪುರ ವಿಧಾನಸಭಾ ಕ್ಷೇತ್ರದ ಚಿಕ್ಕನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಶವಂತಪುರ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 1,600 ಎಕರೆ ಸರ್ಕಾರಿ ಭೂಮಿಯನ್ನು ಹಲವು ವರ್ಷಗಳಿಂದ ಸಾವಿರಾರು ರೈತರು ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. 

Add Asianetnews Kannada as a Preferred SourcegooglePreferred

ಅದಕ್ಕೆ ಸಂಬಂಧಿಸಿದಂತೆ ಸಾಗುವಳಿ ಚೀಟಿ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ. ಆದರೆ, ಬಗರ್‌ಹುಕುಂ ಭೂಮಿಯು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಇದೆ. ಹಾಗೆಯೇ, ಕೆಲ ಪ್ರಭಾವಿಗಳು, ರಾಜಕಾರಣಿಗಳು ಅಕ್ರಮವಾಗಿ ಬಗರ್‌ಹುಕುಂ ಹೆಸರಿನಲ್ಲಿ ಸರ್ಕಾರಿ ಭೂಮಿ ಕಬಳಿಸಿದ್ದಾರೆ. ಈ ಕಾರಣಗಳಿಂದಾಗಿ ರೈತರಿಗೆ ಸಾಗುವಳಿ ಚೀಟಿ ನೀಡುವಲ್ಲಿ ತೊಡಕಾಗುತ್ತಿದೆ ಎಂದರು. ನೈಜ ರೈತರಿಗೆ ಸಾಗುವಳಿ ಚೀಟಿ ನೀಡುವ ಸಂಬಂಧ ಸಂಬಂಧಪಟ್ಟ ಕಾಯ್ದೆಗೆ ಕೆಲ ತಿದ್ದುಪಡಿ ಮಾಡುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ಸಭೆ ಮಾಡಲಾಗಿದೆ. 

ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದಾರೆ. ಸರ್ಕಾರವು ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಬಗರ್‌ಹುಕುಂ ಭೂಮಿಗೆ ಸಾಗುವಳಿ ಚೀಟಿ ನೀಡುವ ಹಾಗೂ ಸಕ್ರಮಗೊಳಿಸುವ ವಿಶ್ವಾಸವಿದೆ. ಅಲ್ಲಿಯವರೆಗೆ ಬಗರ್‌ಹುಕುಂ ಭೂಮಿಯ ರೈತರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದರು.

ರಾಮನಗರದ ಹೆಸರು ಬದಲಾವಣೆಗೆ ಕುಮಾರಸ್ವಾಮಿಯಿಂದ ಅಡ್ಡಗಾಲು: ಡಿಕೆಶಿ ಕಿಡಿ

ಬೆಂಗಳೂರು ದಕ್ಷಿಣ ತಾಲೂಕು ತಹಸೀಲ್ದಾರ್‌ ಎಚ್‌. ಶ್ರೀನಿವಾಸ್‌, ಬೆಂಗಳೂರು ದಕ್ಷಿಣ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಡಾ. ಜಿ.ಬಿಂದು, ಚಿಕ್ಕನಹಳ್ಳಿ ಪಿಡಿಒ ನೀಲವ್ವ, ರಾಮೋಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರಭು, ಕುಂಬಳಗೂಡು ಗ್ರಾಪಂ ಅಧ್ಯಕ್ಷ ದೇವರಾಜು. ಗ್ರಾಪಂ ಸದಸ್ಯರಾದ ಉಮಾಶಂಕರ್‌, ಬಿ.ಒ. ಜಯಲಕ್ಷ್ಮೀ, ಹೇರೋಹಳ್ಳಿ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಸುಮಾ ಜನಾರ್ಧನ್‌, ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಪಾಂಡುರಂಗೇಗೌಡ ಇತರರಿದ್ದರು.