ಡಿಕೆಶಿ, ಸಿದ್ದರಾಮಯ್ಯ ಭೇಟಿಯಾದ ಬಿಜೆಪಿ ವಿಧಾನಪರಿಷತ್‌ ಮಾಜಿ ಸದಸ್ಯ ಸೋಮಣ್ಣ ಬೇವಿನಮರದ| ಬಿಜೆಪಿಯಲ್ಲಿ ಮೂಲೆಗುಂಪಾಗಿದ್ದ ಸೋಮಣ್ಣ ಎರಡು ವರ್ಷಗಳಿಂದ ರಾಜಕೀಯದಿಂದ ದೂರವೇ ಇದ್ದರು, ಸಂಘ ಪರಿವಾರದಿಂದ ಬಂದಿರುವ ಸೋಮಣ್ಣ ಈ ನಡೆ ಕುತೂಹಲ ಕೆರಳಿಸಿದೆ|  

ಹಾವೇರಿ(ಅ.14): ವಿಧಾನಪರಿಷತ್‌ ಮಾಜಿ ಸದಸ್ಯ, ಬಿಜೆಪಿ ಮಾಜಿ ಅಧ್ಯಕ್ಷರೂ ಆಗಿದ್ದ ಸೋಮಣ್ಣ ಬೇವಿನಮರದ ಅವರು ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜಕೀಯ ಚರ್ಚೆ ನಡೆಸಿರುವುದು ಚರ್ಚೆಗೆ ಗ್ರಾಸವಾಗಿದೆ. ಅವರು ಕಾಂಗ್ರೆಸ್‌ ಸೇರುವುದು ಬಹುತೇಕ ಖಾತ್ರಿ ಎಂದು ಹೇಳಲಾಗುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸೋಮಣ್ಣ ಬೇವಿನಮರದ ಅವರು ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ರಾಜಕೀಯ ನಡೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಮಾಜಿ ಸ್ಪೀಕರ್‌ ಕೆ.ಬಿ. ಕೋಳಿವಾಡ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಂ.ಎಂ. ಹಿರೇಮಠ ಅವರೊಂದಿಗೆ ತೆರಳಿ ಮಾತುಕತೆ ನಡೆಸಿದ್ದಾರೆ.

ಬಿಜೆಪಿಯಿಂದ ವಿಧಾನಪರಿಷತ್‌ ಸದಸ್ಯರಾಗಿದ್ದ ಸೋಮಣ್ಣ ಬೇವಿನಮರದ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ಗಾಗಿ ಪಟ್ಟು ಹಿಡಿದಿದ್ದರು. ಆದರೆ, ಬಸವರಾಜ ಬೊಮ್ಮಾಯಿ ಅವರಿಗೆ ಟಿಕೆಟ್‌ ಕೊಟ್ಟಿದ್ದರಿಂದ ಬಂಡಾಯವೆದ್ದು ಪಕ್ಷೇತರರಾಗಿ ಸ್ಪರ್ಧಿಸಿ ಸೋತಿದ್ದರು. ಆ ಬಳಿಕ ಬಿಜೆಪಿಯಲ್ಲಿ ಮೂಲೆಗುಂಪಾಗಿದ್ದ ಅವರು ಎರಡು ವರ್ಷಗಳಿಂದ ರಾಜಕೀಯದಿಂದ ದೂರವೇ ಇದ್ದರು. ಸಂಘ ಪರಿವಾರದಿಂದ ಬಂದಿರುವ ಸೋಮಣ್ಣ ಅವರ ಈ ನಡೆ ಕುತೂಹಲ ಕೆರಳಿಸಿದೆ.

ಹಾನಗಲ್ಲ: ಎಟಿಎಂನಲ್ಲಿ ಅಮಾಯಕರಿಗೆ ವಂಚಿಸುತ್ತಿದ್ದ ಚಾಲಾಕಿ ಮಹಿಳೆ ಸೆರೆ

ಶಿಗ್ಗಾಂವಿ- ಸವಣೂರು ಕ್ಷೇತ್ರದಲ್ಲಿ ಮೂರು ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಬೊಮ್ಮಾಯಿ ವಿರುದ್ಧ ಪರಾಭವಗೊಂಡಿರುವ ಅಜ್ಜಂಫೀರ್‌ ಖಾದ್ರಿ ಅವರೂ ಸದ್ಯ ಸಕ್ರಿಯವಾಗಿ ಕಾಣಿಸಿಕೊಳ್ಳುತ್ತಿಲ್ಲ. ಆದ್ದರಿಂದ ಸೋಮಣ್ಣ ಅವರು ಮತ್ತೆ ರಾಜಕೀಯ ನೆಲೆ ಕಂಡುಕೊಳ್ಳಲು ಕಾಂಗ್ರೆಸ್‌ ಸೇರುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ನಾನು ಇನ್ನೂ ಕಾಂಗ್ರೆಸ್‌ ಸೇರಿಲ್ಲ. ಕೆಪಿಸಿಸಿ ಅಧ್ಯಕ್ಷರು ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕರೆಯ ಮೇರೆಗೆ ಹಿರಿಯ ನಾಯಕರಾದ ಕೆ.ಬಿ. ಕೋಳಿವಾಡ, ಜಿಲ್ಲಾಧ್ಯಕ್ಷ ಹಿರೇಮಠ ಅವರೊಂದಿಗೆ ಹೋಗಿ ಮಾತುಕತೆ ನಡೆಸಿದ್ದೇನೆ. ನನ್ನ ವಿಚಾರಗಳನ್ನು ಹೇಳಿದ್ದೇನೆ. ನನ್ನ ಕ್ಷೇತ್ರದ ಜನ ಏನು ನಿರ್ಧಾರ ಮಾಡಬೇಕೆಂದು ಸೂಚಿಸುತ್ತಾರೋ ಹಾಗೆ ಮಾಡುತ್ತೇನೆ ಎಂದು ಸೋಮಣ್ಣ ಬೇವಿನಮರದ ಅವರು ತಿಳಿಸಿದ್ದಾರೆ.