ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಅವರಿಗೆ ಅಪರಿಚಿತ ವ್ಯಕ್ತಿಯಿಂದ ಇ-ಮೇಲ್ ಮೂಲಕ ಜೀವ ಬೆದರಿಕೆ ಬಂದಿದ್ದು, ಶಿರಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಾಂತ್ರಿಕ ಸಹಾಯದಿಂದ ತನಿಖೆ ನಡೆಯುತ್ತಿದೆ. ಹೆಗಡೆ ಅವರಿಗೆ ಹಿಂದೆಯೂ ಬೆದರಿಕೆಗಳು ಬಂದಿದ್ದ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಉತ್ತರಕನ್ನಡ ಜಿಲ್ಲೆ ಶಿರಸಿಯಲ್ಲಿ ನೆಲೆಸಿರುವ ಮಾಜಿ ಸಂಸದ ಅನಂತ ಕುಮಾರ್ ಹೆಗಡೆಗೆ ಅಪರಿಚಿತ ವ್ಯಕ್ತಿಯೊಬ್ಬ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಸಂಬಂಧ ಹೆಗಡೆ ಅವರ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿ ಅವರು ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ.

Add Asianetnews Kannada as a Preferred SourcegooglePreferred

ಮಾಹಿತಿಯ ಪ್ರಕಾರ, ಜೂನ್ 24ರಂದು ಹೆಗಡೆ ಅವರ ಅಧಿಕೃತ ಇ-ಮೇಲ್ ವಿಳಾಸಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಜೀವ ಬೆದರಿಕೆಯ ಸಂದೇಶ ಕಳುಹಿಸಿದ್ದು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಹೆಗಡೆ ಅವರ ಕಚೇರಿ, ನ್ಯಾಯಾಲಯದ ಅನುಮತಿಯೊಂದಿಗೆ ದೂರು ದಾಖಲಿಸಲು ಮುಂದಾಯಿತು.

ಇಂದೇ ದೂರು ದಾಖಲಿಸಲಾಗಿದ್ದು, ಶಿರಸಿ ಮಾರುಕಟ್ಟೆ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಆರಂಭಿಸಿದ್ದಾರೆ. ಪೊಲೀಸರ ಪ್ರಕಾರ, ಇ-ಮೇಲ್‌ನ ಮೂಲ, ಕಳುಹಿಸಿದ ವ್ಯಕ್ತಿಯ ನಂಬುಗೆಯ ಮಾಹಿತಿಯನ್ನು ಗುರುತಿಸಲು ತಾಂತ್ರಿಕ ಸಹಾಯದಿಂದ ತನಿಖೆ ಚುರುಕುಗೊಳಿಸಲಾಗಿದೆ.

ಇದಕ್ಕೂ ಮುನ್ನ ಸಹ ಅನಂತ ಕುಮಾರ್ ಹೆಗಡೆಗೆ ಈ ರೀತಿಯ ಜೀವ ಬೆದರಿಕೆಗಳು ಬಂದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಅವರಿಗೆ ಅಗತ್ಯವಿರುವ ಎಲ್ಲಾ ಭದ್ರತೆ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.

ಅನಂತ ಕುಮಾರ್ ಹೆಗಡೆ ಅವರು ಉತ್ತರಕನ್ನಡ ಜಿಲ್ಲೆಯ ಶಿರಸಿಯ ಕೆ.ಎಚ್.ಬಿ ಕಾಲೋನಿಯಲ್ಲಿ ವಾಸವಿದ್ದು, ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದಾರೆ. ತಮ್ಮ ಧೈರ್ಯವಂತಿಕೆಯ ಹೇಳಿಕೆಗಳ ಮೂಲಕ ‘ಫೈರ್‌ಬ್ರಾಂಡ್’ ರಾಜಕಾರಣಿಯಾಗಿ ಹೆಸರುವಾಸಿಯಾಗಿರುವ ಹೆಗಡೆಗೆ ಬಂದ ಈ ಬೆದರಿಕೆ ತೀವ್ರ ಚರ್ಚೆಗೆ ಕಾರಣವಾಗಿದೆ.