ಗ್ರಾಮೀಣ ಪತ್ರಕರ್ತರಿಗೆ ಫ್ರೀ ಬಸ್ ಪಾಸ್
ಗ್ರಾಮೀಣ ಪ್ರದೇಶದ ಪತ್ರಕರ್ತರಿಗೆ ಇಲ್ಲಿದೆ ಗುಡ್ ನ್ಯೂಸ್ ಸರ್ಕಾರದಿಂದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಲಡಾಗುತ್ತದೆ.
ಮಂಗಳೂರು [ಮಾ.09): ರಾಜ್ಯದ ಪತ್ರಕರ್ತರ ಸಂಘವು ಕ್ಷೇಮಾಭಿವೃದ್ಧಿ ನಿಧಿಗೆ 50 ಕೋಟಿ ರುಪಾಯಿಯ ಬೇಡಿಕೆ ನೀಡಿತ್ತು. ಈ ವರ್ಷ 5 ಕೋಟಿ ರು. ನೀಡಲಾಗಿದೆ. ಅದನ್ನು ಮುಂದಿನ ದಿನಗಳಲ್ಲಿ ಹೆಚ್ಚಿಸಲು ಮುಖ್ಯಮಂತ್ರಿ ಜತೆ ಮಾತನಾಡಲಾಗುವುದು. ಬೆಂಗಳೂರು ಪತ್ರಕರ್ತರ ಭವನಕ್ಕೆ 5 ಕೋಟಿ ರು. ಒದಗಿಸಲು ಪ್ರಯತ್ನ ಹಾಗೂ ಜಿಲ್ಲೆಯ ಪತ್ರಕರ್ತರ ಭವನಕ್ಕೆ ನೀಡಲಾಗುವ 25 ಲಕ್ಷ ರು.ಗಳನ್ನು ಹೆಚ್ಚಿಸಲು ಪ್ರಯತ್ನಿಸಲಾಗುವುದು. ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಒದಗಿಸಲು ಪ್ರಯತ್ನಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಭರವಸೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ಎರಡು ದಿನಗಳ ಕಾಲ ನಡೆದ ಪತ್ರಕರ್ತರ 35ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾನುವಾರ ಸಂಜೆ ಪತ್ರಕರ್ತರಿಗೆ ಪ್ರಶಸ್ತಿ ವಿತರಣೆ ಮಾಡಿ ಅವರು ಮಾತನಾಡಿದರು.
ಕರಾವಳಿಯಲ್ಲಿ 35ನೇ ಪತ್ರಕರ್ತರ ರಾಜ್ಯ ಸಮ್ಮೇಳನ..! ಇಲ್ಲಿವೆ ಫೋಟೋಸ್...
ದೇಶದಲ್ಲಿ ಸ್ವಾತಂತ್ರ್ಯ ಸಂಗ್ರಾಮ ಆರಂಭಿಸುವ ವೇಳೆ ಬ್ರಿಟಿಷರ ದಬ್ಬಾಳಿಕೆಯನ್ನು ಜನರಿಗೆ ಮನವರಿಕೆ ಮಾಡುವಲ್ಲಿ ಯಂಗ್ ಇಂಡಿಯಾ ಪತ್ರಿಕೆಯನ್ನು ಹುಟ್ಟು ಹಾಕಿ ಪ್ರಾದೇಶಿಕ ಭಾಷೆಗಳಲ್ಲಿ ಪತ್ರಿಕೆ ಆರಂಭಿಸಿದವರು ಮಹಾತ್ಮ ಗಾಂಧಿ. ಹಾಗಾಗಿ ಅವರು ಈ ದೇಶದ ಮೊದಲ ಪತ್ರಕರ್ತ ಎಂದ ಅವರು, ಮಹಾತ್ಮ ಗಾಂಧಿ ಹೆಸರಲ್ಲಿಯೂ ಮುಂದಿನ ದಿನಗಳಲ್ಲಿ ರಾಜ್ಯ ಮಟ್ಟದ ಪ್ರಶಸ್ತಿ ನೀಡಬೇಕು ಎಂದು ಹೇಳಿದರು.
ದ.ಕ. ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವರಾದ ರಮಾನಾಥ ರೈ, ಜೆ .ಕೃಷ್ಣ ಪಾಲೆಮಾರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಹಾರಾಷ್ಟ್ರ ಕನ್ನಡ ಪತ್ರಕರ್ತರ ಸಂಘದ ಅಧ್ಯಕ್ಷ ರೋಸ್ಸ್ ಬಂಟ್ವಾಳ್ ಉಪಸ್ಥಿತರಿದ್ದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದ್ದರು. ದ.ಕ. ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ, ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಹಾಗೂ ಪತ್ರಕರ್ತರ ಸಂಘದ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹಿರಿಯ ಪತ್ರಕರ್ತರಿಗೆ ಜೀವಮಾನದ ವೃತ್ತಿ ಸಾಧನೆಗಾಗಿ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ದತ್ತಿ ನಿಧಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೊತೆಗೆ ವಿವಿಧ ವಿಭಾಗಗಳಲ್ಲಿ ರಾಜ್ಯದ ವಿವಿಧ ಮಾಧ್ಯಮಗಳ ಪತ್ರಕರ್ತರಿಗೆ ವಿಶೇಷ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಹಿರಿಯ ಪತ್ರಕರ್ತ ಹರೀಶ್ ರೈ ನಿರೂಪಿಸಿದರು.