ಜುಲೈ 2 ರಂದು ಗದಗ್ ಬಂದ್ಗೆ ಕರೆ
ಭಜರಂಗದಳದ ಸಕ್ರಿಯ ಕಾರ್ಯಕರ್ತ ಶಿವು ಉಪ್ಪಾರ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಜು.2ರಂದು ಗದಗ ಬಂದ್ ಗೆ ಕರೆ ನೀಡಲಾಗಿದೆ.
ಗದಗ [ಜೂ.30] : ಬೆಳಗಾವಿ ಜಿಲ್ಲೆಯ ಭಜರಂಗದಳದ ಸಕ್ರಿಯ ಕಾರ್ಯಕರ್ತ ಶಿವು ಉಪ್ಪಾರ ಕೊಲೆಯನ್ನು ಕೌಟುಂಬಿಕ ಕಾರಣಗಳಿಗಾಗಿ ಜರುಗಿದ ಆತ್ಮಹತ್ಯೆ ಎಂದು ಬಿಂಬಿಸಿ, ಪ್ರಕರಣ ಮುಚ್ಚಿ ಹಾಕಲು ರಾಜ್ಯ ಪೊಲೀಸ್ ಇಲಾಖೆ ಯತ್ನಿಸುತ್ತಿದೆ ಎಂದು ಶ್ರೀರಾಮಸೇನೆ ಕಾರ್ಯಕರ್ತರು ಆರೋಪಿಸಿದ್ದಾರೆ.
ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಜು.2ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಗದಗ ಬಂದ್ಗೆ ಕರೆ ನೀಡಲಾಗಿದೆ ಎಂದು ಶನಿವಾರ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಶ್ರೀರಾಮಸೇನೆ ಧಾರವಾಡ ವಲಯ ಸಂಘಟನಾ ಕಾರ್ಯದರ್ಶಿ ರಾಜು ಖಾನಪ್ಪನವರ ತಿಳಿಸಿದರು.
ಶನಿವಾರ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀರಾಮಸೇನೆ ಧಾರವಾಡ ವಲಯ ಸಂಘಟನಾ ಕಾರ್ಯದರ್ಶಿ ರಾಜು ಖಾನಪ್ಪನವರ, ಶಿವು ಉಪ್ಪಾರ ಸಾವಿನ ಪ್ರಕರಣವನ್ನು ಕೂಡಲೇ ಸಿಬಿಐಗೆ ವಹಿಸಬೇಕು. ಇತ್ತೀಚಿನ ವರ್ಷಗಳಲ್ಲಿ ಗೋರಕ್ಷಕರು ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಮೇಲಿನ ದೌರ್ಜನ್ಯವನ್ನು ಮುಚ್ಚಿ ಹಾಕುವ ಪ್ರಯತ್ನ ಸರ್ಕಾರದಿಂದ ನಡೆಯುತ್ತಿದೆ. ಶಿವು ಉಪ್ಪಾರ ಕೊಲೆ ಕುರಿತು ಸಿಬಿಐಗೆ ಒಪ್ಪಿಸುವಂತೆ ಆಗ್ರಹಿಸಿ ಈಗಾಗಲೇ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಲಾಗಿದ್ದರೂ ಸ್ಪಂದಿಸುತ್ತಿಲ್ಲ. ಈ ಹಿನ್ನೆಲೆ ಜು.2ರಂದು ಗದಗ ಬಂದ್ಗೆ ಕರೆ ನೀಡಲಾಗಿದೆ ಎಂದು ತಿಳಿಸಿದರು.