ಗೋಕರ್ಣ ಮಹಾಬಲೇಶ್ವರ ದೇವಾಲಯ ವಿವಾದ/ ಅಂತಿಮ ತೀರ್ಪನ್ನು ಒಂದು ವಾರ ಮುಂದಕ್ಕೆ ಹಾಕಿದ ಸುಪ್ರೀಂ/ ಸರ್ಕಾರ ದೇವಾಲಯವನ್ನು ರಾಮಚಂದ್ರಾಪುರ ಮಠದ ಆಡಳಿತಕ್ಕೆ ಹಸ್ತಾಂತರ ಮಾಡಿತ್ತು

ಉತ್ತರಕನ್ನಡ(ಮಾ. 09) ಗೋಕರ್ಣ ಮಹಾಬಲೇಶ್ವರ ದೇವಸ್ಥಾನವನ್ನು ಸರ್ಕಾರ ಹೊಸನಗರ ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಿದ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪನ್ನು ಸುಪ್ರೀಂಕೋರ್ಟ್ ಒಂದು ವಾರ ಮುಂದಕ್ಕೆ ಹಾಕಿದೆ.

Add Asianetnews Kannada as a Preferred SourcegooglePreferred

ಮುಖ್ಯನ್ಯಾಯಮೂರ್ತಿ ಎಸ್.ಎ. ಬೊಬ್ಡೆ, ನ್ಯಾ. ಬೋಪಣ್ಣ ಹಾಗೂ ನ್ಯಾ. ರಾಮಸುಬ್ರಹ್ಮಣಿಯನ್ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಯಿತು. ಮಂಗಳವಾರ ನೀಡಬೇಕಾಗಿದ್ದ ಅಂತಿಮ ತೀರ್ಪು ಒಂದು ವಾರ ಮುಂದಕ್ಕೆ ಹೋಗಿದೆ.

ಈ ಹಿಂದೆ ಸುಪ್ರೀಂ ಕೋರ್ಟ್ ಏನು ಹೇಳಿತ್ತು?

2008ರ ಆಗಸ್ಟ್‌ನಲ್ಲಿ ಅಂದಿನ ಬಿಜೆಪಿ ಸರಕಾರ ಮಹಾಬಲೇಶ್ವರ ದೇವಾಲಯವನ್ನು ಹೊಸನಗರ ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಿತ್ತು. ಇದನ್ನು ಪ್ರಶ್ನಿಸಿ ಬಾಲಚಂದ್ರ ವಿಘ್ನೇಶ್ವರ ದೀಕ್ಷಿತ್ ಹಾಗೂ ಇತರರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರು ಗೋಕರ್ಣ ದೇವಾಲಯ ಧಾರ್ಮಿಕ ದತ್ತಿ ಇಲಾಖೆ ಕಾಯ್ದೆ 1997ಕ್ಕೆ ಒಳಪಡುತ್ತದೆ, ಈ ದೇವಾಲಯವನ್ನು ಖಾಸಗಿಯವರಿಗೆ ಹಸ್ತಾಂತರಿಸಿರೋದು ಸರಿಯಲ್ಲ ಎಂದು ವಾದ ಮುಂದೆ ಇಟ್ಟಿದ್ದರು.

ಹೈಕೋರ್ಟ್ ಆದೇಶದ ಮೇರೆಗೆ ದೇವಾಲಯ ಸರಕಾರಕ್ಕೆ ಹಸ್ತಾಂತರವಾಗಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಮಠ ಸುಪ್ರೀಂಕೋರ್ಟ್‌ನ ಮೊರೆ ಹೋಗಿತ್ತು. ಪ್ರಕರಣ ಆಲಿಸಿದ ಸುಪ್ರೀಂಕೋರ್ಟ್ ಈ ಹಿಂದಿನಂತೆ ಯಥಾಸ್ಥಿತಿ ಕಾಯ್ಧುಕೊಳ್ಳಲು ಸೂಚಿಸಿತ್ತು. ಬಳಿಕ ಸರಕಾರ ದೇವಸ್ಥಾನವನ್ನು ಮತ್ತೆ ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಿತ್ತು. ಈ ಪ್ರಕರಣದ ಅಂತಿಮ ತೀರ್ಪಿಗೆ ಈಗ ಒಂದು ವಾರ ಕಾಯಬೇಕಾಗಿದೆ.