ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ (ಬಗರ್‌ ಹುಕುಂ) ರೈತರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುತ್ತಿರುವುದನ್ನು ತಪ್ಪಿಸಲು ಹಾಗೂ ಈಗಾಗಲೇ ಮೊಕದ್ದಮೆ ದಾಖಲಿಸಿರುವುದನ್ನು ರದ್ದುಪಡಿಸಲು ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ-2011ಕ್ಕೆ ತಿದ್ದುಪಡಿ ತರಲಾಗಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದರು.

ಮಂಡ್ಯ (ನ.02): ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ (ಬಗರ್‌ ಹುಕುಂ) ರೈತರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುತ್ತಿರುವುದನ್ನು ತಪ್ಪಿಸಲು ಹಾಗೂ ಈಗಾಗಲೇ ಮೊಕದ್ದಮೆ ದಾಖಲಿಸಿರುವುದನ್ನು ರದ್ದುಪಡಿಸಲು ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ-2011ಕ್ಕೆ ತಿದ್ದುಪಡಿ ತರಲಾಗಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದರು.

Add Asianetnews Kannada as a Preferred SourcegooglePreferred

ಮಂಗಳವಾರ ನಗರದ ಪೊಲೀಸ್‌  (Police) ಪರೇಡ್‌ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯ ಸಕ್ರಮೀಕರಣಕ್ಕೆ ನಮೂನೆ- 57ರಡಿ ಅರ್ಜಿ ಸಲ್ಲಿಕೆಗೆ ಒಂದು ವರ್ಷ ಕಾಲಾವಕಾಶ ಕಲ್ಪಿಸಲಾಗಿದೆ ಎಂದು ನುಡಿದರು.

ರೈತರು (Farmers ) ತಾವು ಬೆಳೆದ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ (Market) ಸೌಲಭ್ಯ ರೂಪಿಸಿಕೊಳ್ಳಲು, ಮಧ್ಯ ವರ್ತಿಗಳ ಹಾವಳಿ ತಪ್ಪಿಸಲು ಹಾಗೂ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಬ್ರಾಂಡಿಂಗ್‌ ಮಾಡುವ ಪ್ರಮುಖ ಉದ್ದೇಶದಿಂದ ಮಂಡ್ಯ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ಇತರೆ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಒಟ್ಟು 25 ರೈತ ಉತ್ಪಾದಕರ ಸಂಸ್ಥೆಗಳನ್ನು ರಚನೆ ಮತ್ತು ಅನುಷ್ಠಾನ ಮಾಡಲಾಗುತ್ತಿದೆ ಎಂದು ಹೇಳಿದರು.

ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಮಂಡ್ಯ, ಮದ್ದೂರು, ಮಳವಳ್ಳಿ ಹಾಗೂ ಶ್ರೀರಂಗಪಟ್ಟಣ ತಾಲ್ಲೂಕಿನ 570 ಜನವಸತಿಗಳಿಗೆ ನೀರು ಒದಗಿಸಲು 1091 ಕೋಟಿ ರು. ವೆಚ್ಚದಲ್ಲಿ 5 ವಿವಿಧ ಕಾಮಗಾರಿಗಳನ್ನು ರೂಪಿಸಲಾಗುತ್ತಿದೆ. ವಿಶ್ವೇಶ್ವರಯ್ಯ ನಾಲಾ ಜಾಲದ ಆಧುನೀಕರಣ ಕಾಮಗಾರಿಯನ್ನು 330.48 ಕೋಟಿ ರು.ಗಳಲ್ಲಿ ಹಮ್ಮಿ ಕೊಳ್ಳಲಾಗಿದೆ. ಪೂರಿಗಾಲಿ ಸಮಗ್ರ ಹನಿ, ತುಂತುರು ನೀರಾವರಿ ಯೋಜನೆ ಕಾಮಗಾರಿಯನ್ನು ಅಂದಾಜು ಮೊತ್ತ ರೂ. 593.00 ಕೋಟಿ ರು. ಗಳಲ್ಲಿ ಕೈಗೊಂಡಿರುವುದಾಗಿ ಹೇಳಿದರು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 17 ಮಂದಿಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದದಲ್ಲಿ ಪಥಸಂಚಲನ ನಡೆಸಿದ ಇಲಾಖಾ ತಂಡಗಳು, ಎನ್‌ಸಿಸಿ, ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್‌್ಸ ಹಾಗೂ ಶಾಲಾ ತಂಡಗಳಿಗೆ ಇದೇ ವೇಳೆ ಬಹುಮಾನ ವಿತರಿಸಲಾಯಿತು.

ಶಾಸಕ ಎಂ.ಶ್ರೀನಿವಾಸ್‌, ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳೀಗೌಡ, ನಗರಸಭೆ ಅಧ್ಯಕ್ಷ ಹೆಚ್‌.ಎಸ್‌.ಮಂಜು, ಜಿಲ್ಲಾಧಿಕಾರಿ ಡಾ.ಹೆಚ್‌.ಎನ್‌.ಗೋಪಾಲಕೃಷ್ಣ, ಜಿಪಂ ಸಿಇಓ ಶಾಂತಾ ಎಲ್‌.ಹುಲ್ಮನಿ, ಜಿಲ್ಲಾ ಪೊಲೀಸ್‌ ಅಧೀಕ್ಷಕ ಎನ್‌.ಯತೀಶ್‌, ಅಪರ ಜಿಲ್ಲಾಧಿಕಾರಿ ಡಾ.ಹೆಚ್‌.ಎನ್‌.ನಾಗರಾಜು ಮತ್ತಿತರರಿದ್ದರು.

ಕಂದಾಯ ಗ್ರಾಮಗಳಿಗೆ ಶೀಘ್ರ ಅಧಿಸೂಚನೆ:

ರಾಜ್ಯದಲ್ಲಿ 3,218 ದಾಖಲೆ ರಹಿತ ಜನ ವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಗುರುತಿಸಲಾಗಿದ್ದು, ಇದರಲ್ಲಿ 1,185 ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. 2,198 ಪ್ರಕರಣಗಳಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದ ಅವರು, ಮಂಡ್ಯ ಜಿಲ್ಲೆಯಲ್ಲಿ 94 ಪ್ರಕರಣಗಳಲ್ಲಿ ಅಂತಿಮ ಅಧಿಸೂಚನೆ ಹೊರಡಿಸಿದ್ದು, 137 ಪ್ರಕರಣಗಳಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ. ಶೀಘ್ರ ಎಲ್ಲಾ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲಾಗುವುದು ಎಂದು ಭರವಸೆ ನೀಡಿದರು.

ಸಾಂಸ್ಕೃತಿಕ ನೃತ್ಯ ಪ್ರದರ್ಶನ :

ಕನ್ನಡ ನಾಡು, ನುಡಿ, ಸಾಂಸ್ಕೃತಿಕ ಹಿರಿಮೆಯನ್ನು ಸಾರುವ ಗೀತೆಗಳಿಗೆ ಸೆಂಟ್‌ ಜೋಸೆಫ್‌ ಪ್ರೌಢಶಾಲೆಯ 32 ಮಕ್ಕಳು, ಸದ್ವಿದ್ಯಾ ಶಾಲೆಯ 200 ಮಕ್ಕಳು, ಬೇಲೂರಿನ ಸರ್ಕಾರಿ ಪ್ರೌಢಶಾಲೆಯ 35 ಮಕ್ಕಳು ಹೆಜ್ಜೆ ಹಾಕಿದರು. ಮಾಂಡವ್ಯ ಪದವಿ ಪೂರ್ವ ಕಾಲೇಜಿನ 10 ಮಕ್ಕಳು ಕನ್ನಡದ ಗೀತೆಗೆ ನೃತ್ಯಪ್ರದರ್ಶಿಸಿದರೆ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾ ತರ ಇಲಾಖೆಯ 10 ವಿದ್ಯಾರ್ಥಿಗಳು ಕಂಸಾಳೆ ನೃತ್ಯ ಮಾಡಿ ಪ್ರೇಕ್ಷಕರನ್ನು ರಂಜಿಸಿದರು.