ಬಳ್ಳಾರಿಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಭೀಮಾನಾಯ್ಕ ಅವರ ಪುತ್ರ ಅಪಘಾತ ಒಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. 

ಬಳ್ಳಾರಿ [ಆ.19]:  ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಬಳಿ ಭಾನುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ ಪುತ್ರ ಅಶೋಕ್‌ (21) ಸೇರಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. 

Add Asianetnews Kannada as a Preferred SourcegooglePreferred

ಬೆಂಗಳೂರಿಗೆ ತೆರಳಲು ಹಗರಿಬೊಮ್ಮನಹಳ್ಳಿಯಿಂದ ಹೊಸಪೇಟೆ ಮಾರ್ಗವಾಗಿ ಸಂಡೂರು ತಾಲೂಕಿನ ಜಿಂದಾಲ್‌ ವಿಮಾನ ನಿಲ್ದಾಣಕ್ಕೆ ಆಡಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಎದುರುಗಡೆಯಿಂದ ಬಂದ ಟಾಟಾ ಏಸ್‌ (ಗೂಡ್ಸ್‌ ವಾಹನ)ಗೆ ಡಿಕ್ಕಿ ಹೊಡೆದಿದೆ. 

ಕೂಡಲೇ ಕಾರ್‌ನಲ್ಲಿದ್ದ ಏರ್‌ಬ್ಯಾಗ್‌ ತೆರೆದುಕೊಂಡಿದ್ದರಿಂದ ಶಾಸಕ ಪುತ್ರ ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡವರನ್ನು ಹೊಸಪೇಟೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಮರಿಯಮ್ಮನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಟಾ ಏಸ್‌ ವಾಹನ ಚಾಲಕನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಈ ಸಂಬಂಧ ಮರಿಯಮ್ಮನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.