ಹಾಸನ ನಗರದಲ್ಲಿ ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಯರೇಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಕೊಲೆಯಾದ ಯುವಕನನ್ನು ಅಂಕಿತ್ ಎಂದು ಗುರುತಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಹಾಸನ (ಆ.27): ಗೌರಿ-ಗಣೇಶ ಹಬ್ಬದ ಸಂಭ್ರಮದಲ್ಲಿದ್ದ ಹಾಸನ ನಗರದಲ್ಲಿ ದುಷ್ಕರ್ಮಿಗಳು ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ನಗರದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.
ಕೊಲೆಯಾದ ಯುವಕನನ್ನು ಹಾಸನ ನಗರದ ದೊಡ್ಡಮಂಡಿಗನಹಳ್ಳಿಯ ನಿವಾಸಿ ಅಂಕಿತ್ (26) ಎಂದು ಗುರುತಿಸಲಾಗಿದೆ. ಅಂಕಿತ್ ನಗರದ ಬೈಕ್ ಶೋರೂಂ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.
ಘಟನೆ ನಡೆದಿದ್ದು ಹೇಗೆ?
ನಿನ್ನೆ ರಾತ್ರಿ ಅಂಕಿತ್ ತನ್ನ ಬೈಕ್ನಲ್ಲಿ ಯರೇಹಳ್ಳಿ ಗ್ರಾಮದಿಂದ ರಾಗಿಮುದ್ದನಹಳ್ಳಿ ಗ್ರಾಮದ ಕಡೆಗೆ ತೆರಳುತ್ತಿದ್ದನು. ಈ ವೇಳೆ ಯರೇಹಳ್ಳಿ ಗ್ರಾಮದ ಬಳಿ ಅವನನ್ನು ತಡೆದ ದುಷ್ಕರ್ಮಿಗಳ ಗುಂಪು, ಮಾರಕಾಸ್ತ್ರಗಳಿಂದ ಮನಬಂದಂತೆ ದಾಳಿ ಮಾಡಿದೆ. ದಾಳಿಯ ತೀವ್ರತೆಯಿಂದ ಸ್ಥಳದಲ್ಲಿಯೇ ಅಂಕಿತ್ ಪ್ರಾಣಬಿಟ್ಟಿದ್ದಾನೆ. ಕೊಲೆ ಮಾಡಿದ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಗೌರಿ-ಗಣೇಶ ಹಬ್ಬದ ದಿನವೇ ಇಂತಹ ಭೀಕರ ಘಟನೆ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಹಾಸನ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.
ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ವೈಯಕ್ತಿಕ ದ್ವೇಷವೇ ಈ ಕೃತ್ಯಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆಯ ತನಿಖೆ ಮುಂದುವರಿದಿದೆ.
