Asianet Suvarna News Asianet Suvarna News

'ಸಾಮಾಜಿಕ ಜಾಲತಾಣಗಳಲ್ಲಿ ಕೊರೋನಾ ಬಗ್ಗೆ ಸುಳ್ಳು ಸುದ್ದಿ ಹರಡಿದ್ರೆ ಕಠಿಣ ಕ್ರಮ'

ಹಾವೇರಿ ಜಿಲ್ಲೆಯಲ್ಲಿ ಈವರೆಗೆ ಯಾವುದೇ ಕೊರೋನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿಲ್ಲ| ರಾಣಿಬೆನ್ನೂರು ಪಟ್ಟಣದ ಮಾರುತಿ ನಗರದ ಒಬ್ಬರು ಮತ್ತು ಹಿರೇಕೆರೂರು ನವನಗರದ ಒಬ್ಬ ರೋಗಿಯ ರಕ್ತ ಮತ್ತು ಗಂಟಲ ದ್ರವವನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಿಕೊಟ್ಟದ್ದು, ಪ್ರಯೋಗಾಲಯದಿಂದ ವರದಿ ನೆಗೆಟಿವ್‌ ಬಂದಿದೆ|

Haveri DC Krishna Bhajpeyi reacts Over Fake News About Coronavirus
Author
Bengaluru, First Published Apr 24, 2020, 11:59 AM IST

ಹಾವೇರಿ(ಏ.24): ಜಿಲ್ಲೆಯಲ್ಲಿ ಇದುವರೆಗೆ ಯಾರಲ್ಲೂ ಕೊರೋನಾ ಸೋಂಕು ಪತ್ತೆಯಾಗಿಲ್ಲ. ಆದರೂ ಕೆಲವರು ಸುಳ್ಳು ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವುದು ಕಂಡು ಬಂದಿದೆ. ಇದನ್ನು ಪತ್ತೆ ಹಚ್ಚಿ ಕಾನೂನು ಕ್ರಮಕೈಗೊಳ್ಳಲು ಜಿಲ್ಲಾ ಪೊಲೀಸ್‌ ಇಲಾಖೆಗೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ನಿರ್ದೇಶನ ನೀಡಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ಯಾವುದೇ ಕೊರೋನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿಲ್ಲ. ರಾಣಿಬೆನ್ನೂರು ಪಟ್ಟಣದ ಮಾರುತಿ ನಗರದ ಒಬ್ಬರು ಮತ್ತು ಹಿರೇಕೆರೂರು ನವನಗರದ ಒಬ್ಬ ರೋಗಿಯ ರಕ್ತ ಮತ್ತು ಗಂಟಲ ದ್ರವವನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಿಕೊಟ್ಟದ್ದು, ಪ್ರಯೋಗಾಲಯದಿಂದ ವರದಿ ನೆಗೆಟಿವ್‌ ಎಂದು ಬಂದಿದೆ. ಸಾರ್ವಜನಿಕರು ಈ ಬಗ್ಗೆ ಯಾವುದೇ ಭಯ ಪಡುವ ಅವಶ್ಯಕತೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಮಾರ್ಕೆಟ್‌ನಲ್ಲಿ ಓಡಾಡಿದ ಹೋಂ ಕ್ವಾರೈಂಟೈನಲ್ಲಿದ್ದ ವ್ಯಕ್ತಿ: ಆತಂಕದಲ್ಲಿ ಜನತೆ

ಕೊರೋನಾ ಹರಡುವುದನ್ನು ತಡೆಗಟ್ಟುವ ಕುರಿತು ಮುಂಜಾಗ್ರತಾ ಕ್ರಮ ಕೈಕೊಳ್ಳುವುದು ಅವಶ್ಯವಾಗಿರುತ್ತದೆ. ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಮಾತ್ರ ಮಾಧ್ಯಮಗಳ ಮೂಲಕ ಮಾಹಿತಿ ನೀಡಲು ಅಧಿಕೃತ ಅಧಿಕಾರಿಗಳಾಗಿರುತ್ತಾರೆ. ಕೋವಿಡ್‌-19ಗೆ ಸಂಬಂಧಪಟ್ಟಂತೆ ಜಿಲ್ಲಾಡಳಿತದಿಂದ ಅಧಿಕೃತವಾಗಿ ಪ್ರತಿದಿನ ಮಾಧ್ಯಮಗಳ ಮೂಲಕ ಸುದ್ದಿ ಬಿಡುಗಡೆಮಾಡಲಾಗುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಕೊರೋನಾ ಪ್ರಕರಣಗಳ ಬಗ್ಗೆ ಯಾವುದೇ ಆಧಾರವಿಲ್ಲದೆ ನೀಡುತ್ತಿರುವ ಸುಳ್ಳು ಸುದ್ದಿಗಳನ್ನು ಸಾರ್ಜಜನಿಕರು ನಂಬಬಾರದೆಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಸುಳ್ಳು ಸುದ್ದಿ ವಿರುದ್ಧ ಕ್ರಮ:

ಸಾರ್ವಜನಿಕರು ಇತರ ಅನಾರೋಗ್ಯದ ಕಾರಣಗಳಿಗಾಗಿ ಆ್ಯಂಬುಲೆನ್ಸ್‌ ಮೂಲಕ ಸೂಕ್ತ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಕರೆತರುವ ಪ್ರಕ್ರಿಯೆ ಆರೋಗ್ಯ ಇಲಾಖೆ ವತಿಯಿಂದ ಕೈಗೊಳ್ಳಲಾಗುತ್ತಿದೆ. ಆದರೆ ಇದನ್ನೇ ತಪ್ಪಾಗಿ ತಿಳಿದು ರಾಣಿಬೆನ್ನೂರು ಪಟ್ಟಣದ ಮಾರುತಿ ನಗರದ ಮಹಿಳೆಗೆ ಕೊರೋನಾ ದೃಢÜ ಎಂದು, ರಾಣಿಬೆನ್ನೂರಿನಲ್ಲಿ ಹೈಅಲರ್ಟ್‌ ಘೋಷಣೆ, ಮಾರುತಿ ನಗರದ ಸುತ್ತಲೂ ಸಂಪೂರ್ಣ ಸೀಲ್‌ಡೌನ್‌, ಮಹಿಳೆಯ ಪತಿ ಹಾಗೂ ಮೂವರು ಕ್ವಾರಂಟೈನ್‌ಗೆ ಕಳುಹಿಸಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಯಿಂದ ಅಧಿಕೃತ ಆದೇಶ ಹೊರಬೀಳಬೇಕಿದೆ ಎಂಬ ಸುಳ್ಳು ಸುದ್ದಿಯನ್ನು ವಾಟ್ಸ್‌ಆ್ಯಪ್‌ ಗ್ರೂಪ್‌ಗಳಿಗೆ ರವಾನಿಸಿರುವುದು ಕಂಡು ಬಂದಿದೆ. ಇನ್ನುಮುಂದೆ ಸಾಮಾಜಿಕ ಜಾಲತಾಣ ಹಾಗೂ ಸುದ್ದಿ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡುವ ವ್ಯಕ್ತಿಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 34ರಂತೆ ಕಾನೂನು ರೀತಿಯ ಕಠಿಣ ಕ್ರಮಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾ ಪೊಲೀಸ್‌ ಅಧೀಕ್ಷಕರಿಗೆ ಈ ರೀತಿ ಸುಳ್ಳು ಸುದ್ದಿಗಳನ್ನು ಹರಡುತ್ತಿರುವವರ ವಿರುದ್ಧ ತಕ್ಷಣ ಕಾನೂನು ಕ್ರಮ ಜರುಗಿಸಲು ನಿರ್ದೇಶನ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

80 ಜನರ ಕೊರೋನಾ ರಿಪೋರ್ಟ್‌ ನೆಗೆಟಿವ್‌

ತೀವ್ರ ಉಸಿರಾಟದ ತೊಂದರೆ, ನೆಗಡಿ, ಕಫದಿಂದ ಬಳಲುತ್ತಿದ್ದ 80 ಜನರ ಪರೀಕ್ಷಾ ಮಾದರಿಗಳು ನೆಗೆಟಿವ್‌ ಬಂದಿದ್ದು, ಗುರುವಾರ 139 ಜನರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜೇಂದ್ರ ದೊಡ್ಡಮನಿ ತಿಳಿಸಿದ್ದಾರೆ. ತೀವ್ರ ಉಸಿರಾಟದ ತೊಂದರೆ, ನೆಗಡಿ, ಕಫದಿಂದ ಬಳಲುತ್ತಿದ್ದವರ ಒಟ್ಟು 840 ಜನರ ರಕ್ತ, ಗಂಟಲಿನ ದ್ರವದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಕೊರೋನಾ ಲಕ್ಷಣಗಳ ಆಧಾರದ ಮೇಲೆ ಸರ್ಕಾರಿ ಕ್ವಾರಂಟೈನ್‌ನಲ್ಲಿ 10 ಜನರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಶಂಕಿತ ಲಕ್ಷಣಗಳುಳ್ಳ ಒಟ್ಟು 219 ಜನರನ್ನು ಕ್ವಾರಂಟೈನ್‌ ಮಾಡಲಾಗಿದ್ದು ಇವರಲ್ಲಿ 216 ಜನರ 28 ದಿನಗಳ ಕ್ವಾರಂಟೈನ್‌ ಅವಧಿ ಪೂರ್ಣಗೊಂಡಿದೆ. ಉಳಿದ 3 ಜನರು ಹೋಂ ಕ್ಯಾರಂಟೈನ್‌ನಲ್ಲಿದ್ದಾರೆ. ಈವರೆಗೆ ಒಟ್ಟು 890 ಜನರ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 536 ಮಾದರಿಗಳು ನೆಗೆಟಿವ್‌ ಬಂದಿದ್ದು, ಉಳಿದ 354 ಜನರ ಮಾದರಿಗಳ ಪರೀಕ್ಷಾ ವರದಿ ಬರಬೇಕಿದೆ ಎಂದು ಅವರು ತಿಳಿಸಿದ್ದಾರೆ.
 

Follow Us:
Download App:
  • android
  • ios