ರಸ್ತೆ ಅಪಘಾತದ ವೇಳೆ ಶೇಕಡ 80ರಷ್ಟು ಗಾಯಾಳುಗಳು ಆಸ್ಪತ್ರೆಗೆ ದಾಖಲಾಗುವ ಮುನ್ನ ಮರಣ ಹೊಂದುತ್ತಿದ್ದಾರೆ. ಹೀಗಾಗಿ, ಗಾಯಾಳುವನ್ನು ಅಪಘಾತ ಸ್ಥಳದಿಂದ ಸುರಕ್ಷಿತವಾಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತರಬೇತಿ ನೀಡುವ ‘ರಾಸ್ತ’ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಲಾಯಿತು. 

ಬೆಂಗಳೂರು (ಮಾ.09): ರಸ್ತೆ ಅಪಘಾತದ ವೇಳೆ ಶೇಕಡ 80ರಷ್ಟು ಗಾಯಾಳುಗಳು ಆಸ್ಪತ್ರೆಗೆ ದಾಖಲಾಗುವ ಮುನ್ನ ಮರಣ ಹೊಂದುತ್ತಿದ್ದಾರೆ. ಹೀಗಾಗಿ, ಗಾಯಾಳುವನ್ನು ಅಪಘಾತ ಸ್ಥಳದಿಂದ ಸುರಕ್ಷಿತವಾಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತರಬೇತಿ ನೀಡುವ ‘ರಾಸ್ತ’ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಿಗಳ ವಿಶ್ವ ವಿದ್ಯಾನಿಯಲದ ಜೀವರಕ್ಷ ಟ್ರಸ್ಟ್‌ ಸಹಯೋಗದಲ್ಲಿ ರಾಸ್ತ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಗುರುವಾರ ಶಿವಾಜಿನಗರದ ಶ್ರೀ ಅಟಲ್‌ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದಲ್ಲಿ ಪ್ರಾಯೋಗಿಕ ತರಬೇತಿ ಕಾರ್ಯಾಗಾರಕ್ಕೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್‌ ಕುಮಾರ್‌ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, 2020-21ನೇ ಸಾಲಿನ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ ಸಂಭವಿಸಿದ 4.5 ಲಕ್ಷ ರಸ್ತೆ ಅಪಘಾತದಲ್ಲಿ 1.5 ಲಕ್ಷ ಮಂದಿ ಮರಣ ಹೊಂದಿದ್ದಾರೆ. ಕರ್ನಾಟಕ ರಾಜ್ಯವು ರಸ್ತೆ ಅಪಘಾತದಲ್ಲಿ ಮೂರನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಪ್ರತಿ ವರ್ಷ 4 ಸಾವಿರಕ್ಕೂ ಅಧಿಕ ಮಂದಿ ಸಾವಿಗೀಡಾಗುತ್ತಿದ್ದಾರೆ. ಈ ಪೈಕಿ ಬಹುತೇಕರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಡುತ್ತಿದ್ದಾರೆ. ಹೀಗಾಗಿ, ರಾಸ್ತ ಮೂಲಕ ಅಪಘಾತಕ್ಕೆ ಒಳಪಟ್ಟವ್ಯಕ್ತಿಯನ್ನು ಸುರಕ್ಷಿತವಾಗಿ ಮತ್ತು ತ್ವರಿತವಾಗಿ ಆಸ್ಪತ್ರೆಗೆ ದಾಖಲಿಸುವ ಕುರಿತು ಪೊಲೀಸ್‌, ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಸಂಚಾರಿ ಪೊಲೀಸ್‌, ಪೊಲೀಸ್‌ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿ ತರಬೇತಿ ನೀಡುವ ಕಾರ್ಯಕ್ರಮ ರೂಪಿಸಲಾಗಿದೆ. ಈ ಮೂಲಕ ಸಾವಿನ ಪ್ರಮಾಣ ಕಡಿಮೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ ಎಂದು ವಿವರಿಸಿದರು.

ಬಿಜೆಪಿ ಎಂಎಲ್‌ಸಿ ಪುಟ್ಟಣ್ಣ ಕಾಂಗ್ರೆಸ್ಸಿಗೆ: ವಿಧಾನಸಭಾ ಚುನಾವಣೆಗೆ ಸ್ಪರ್ಧೆ

ಆರೋಗ್ಯ ಇಲಾಖೆಯ ಆಯುಕ್ತ ಡಿ. ರಂದೀಪ್‌ ಮಾತನಾಡಿ, ದೇಶದಲ್ಲಿ ಪ್ರಥಮವಾಗಿ ಗಾಯಾಳುವನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ತರಬೇತಿ ನೀಡುವ ಕಾರ್ಯವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ರಾಜ್ಯದ ಹೆದ್ದಾರಿ ಸೇರಿದಂತೆ ಪ್ರಮುಖ ರಸ್ತೆಗಳ ಅಪಘಾತ ಸ್ಥಳಗಳನ್ನು ಗುರುತಿಸಲಾಗಿದೆ. ಕಳೆದ ಐದು ವರ್ಷದಲ್ಲಿ ಹೆಚ್ಚಿನ ಅಪಘಾತ ಸಂಭವಿಸಿದ ಸ್ಥಳಗಳನ್ನು ಪಟ್ಟಿಮಾಡಿ 26 ಕ್ಲಸ್ಟರ್‌ಗಳನ್ನು ಮಾಡಲಾಗಿದೆ. ಮುಂದಿನ ಮೂರ್ನಾಲ್ಕು ತಿಂಗಳು ಕ್ಲಸ್ಟರ್‌ಗಳಲ್ಲಿ ತರಬೇತಿ ನೀಡಲಾಗುತ್ತಿದೆ. ಒಟ್ಟು 2500ಕ್ಕೂ ಅಧಿಕ ಮಂದಿಗೆ ತರಬೇತಿ ನೀಡಲಾಗುವುದು ಎಂದು ವಿವರಿಸಿದರು.

ಅಪಘಾತ ಹಾಗೂ ದುರ್ಘಟನೆ ವೇಳೆ ಗಾಯಗೊಂಡ ವ್ಯಕ್ತಿಗಳಿಗೆ 76 ಮಾದರಿಯ ವೈದ್ಯಕೀಯ ಚಿಕಿತ್ಸೆಯನ್ನು ಉಚಿತವಾಗಿ ನೀಡುವ ಬಗ್ಗೆ ಸರ್ಕಾರ ಬಜೆಟ್‌ನಲ್ಲಿ ಘೋಷಣೆ ಮಾಡಿದೆ. ಸುಮಾರು 1 ಲಕ್ಷ ರು.ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ದೊರೆಯಲಿದೆ. ಬ್ಲಾಕ್‌ ಸ್ಪಾಟ್‌ ಸಮೀಪದ ಎಲ್ಲಾ ಖಾಸಗಿ ಆಸ್ಪತ್ರೆಗಳನ್ನು ಕಡ್ಡಾಯವಾಗಿ ಸಹಭಾಗಿತ್ವ ಪಡೆಯುವುಕ್ಕೂ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಯೋಜನಾಧಿಕಾರಿ ವೈ.ನವೀನ್‌ ಭಟ್‌, ಆರೋಗ್ಯ ಇಲಾಖೆಯ ನಿರ್ದೇಶಕಿ ಪರಿಮಳ ಎಸ್‌ ಮರೂರ್‌, ಶ್ರೀ ಅಟಲ್‌ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಮುಖ್ಯಸ್ಥ ಎಚ್‌.ವಿ. ಮನೋಜ್‌ ಕುಮಾರ್‌ ಮೊದಲಾದವರಿದ್ದರು.

ಸಚಿವ ನಾರಾಯಣ ಗೌಡ ಮಾ.21ಕ್ಕೆ ಕಾಂಗ್ರೆಸ್‌ ಸೇರ್ಪಡೆ ಅಧಿಕೃತ

ಏನಿದು ರಾಸ್ತ ತರಬೇತಿ?: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈಗಾಗಲೇ ರಾಜ್ಯದ ಹೆದ್ದಾರಿ ಸೇರಿದಂತೆ ಪ್ರಮುಖ ರಸ್ತೆಯ ಅಪಘಾತ ಸಂಭವಿಸುವ 26 ಕ್ಲಸ್ಟರ್‌ ಬ್ಲಾಕ್‌ ಸ್ಪಾಟ್‌ಗಳನ್ನು ಗುರುತಿಸಿದೆ. ಈ ಬ್ಲಾಕ್‌ ಸ್ಪಾಟ್‌ನ ಸುತ್ತಮುತ್ತಲಿನ 100 ಮೀಟರ್‌ ಅಂತರದಲ್ಲಿ ಇರುವ ವ್ಯಾಪಾರಿಗಳು, ನಿವಾಸಿಗಳು. ಅಪಘಾತ ಸ್ಥಳದ ವ್ಯಾಪ್ತಿಯ ಆಸ್ಪತ್ರೆ, ಪೊಲೀಸ್‌ ಸೇರಿದಂತೆ ವಿವಿಧ ಇಲಾಖೆಯ ಸಿಬ್ಬಂದಿಗೆ ರಾಸ್ತ ಮೂಲಕ ತರಬೇತಿ ನೀಡಲಾಗುತ್ತಿದೆ. ತರಬೇತಿ ವೇಳೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಹೇಗೆ ಆಸ್ಪತ್ರೆಗೆ ದಾಖಲು ಮಾಡಬೇಕು. ಅನುಸರಿಸಬೇಕಾದ ಕ್ರಮಗಳು, ಪ್ರಾಥಮಿಕ ಚಿಕಿತ್ಸೆ ಸೇರಿದಂತೆ ಮೊದಲಾದವುಗಳ ಬಗ್ಗೆ ತರಬೇತಿ ನೀಡುವುದಾಗಿದೆ.