ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು ಮೂಡಿಗೆರೆ ತಾಲೂಕಿನ ಕೆಲ ಭಾಗದಲ್ಲಿ ಬೆಳಗ್ಗೆಯಿಂದ ಧಾರಾಕಾರ ಮಳೆ ಸುರಿದಿದೆ. 

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಿಕ್ಕಮಗಳೂರು (ಮೇ.15): ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು ಮೂಡಿಗೆರೆ ತಾಲೂಕಿನ ಕೆಲ ಭಾಗದಲ್ಲಿ ಬೆಳಗ್ಗೆಯಿಂದ ಧಾರಾಕಾರ ಮಳೆ ಸುರಿದಿದೆ. ಬೆಳಿಗ್ಗೆ 5 ಗಂಟೆ ಸುಮಾರಿಗೆ ಆರಂಭವಾದ ಮಳೆ ಬಿಟ್ಟು-ಬಿಟ್ಟು ಸುರಿಯುತ್ತಲೇ ಇತ್ತು. ಬೆಳ್ಳಂ ಬೆಳಗ್ಗೆ ಆರಂಭವಾದ ವರುಣದೇವನ ಅಬ್ಬರಕ್ಕೆ ರಸ್ತೆಯಲ್ಲಿ ನೀರು ನದಿಯಂತೆ ಹರಿದಿದೆ. ಮಳೆ ಅಬ್ಬರಕ್ಕೆ ಕಾಫಿ ತೋಟದಲ್ಲಿ ನೀರು ನಿಲ್ಲುವಂತಾಗಿದೆ. ಬೆಳಗಿನ ಜಾವವೇ ಆರಂಭವಾದ ಮಳೆಯಿಂದ ಗ್ರಾಮೀಣ ಭಾಗದ ಜನಜೀವನ ಅಸ್ತವ್ಯಸ್ತಗೊಂಡಿತ್ತು.

ವಿದ್ಯುತ್ ಸಂಪರ್ಕ ಕಡಿತ: ಮೂಡಿಗೆರೆ ತಾಲೂಕಿನ ಹುದುಸೆ-ಜಾಣಿಗೆ ಸುತ್ತಮುತ್ತ ನಿರಂತರವಾಗಿ ಮಳೆ ಸುರಿದಿದೆ‌. ಭಾರೀ ಗಾಳಿ-ಮಳೆಯಿಂದ ಗ್ರಾಮೀಣ ಭಾಗದಲ್ಲಿ ವಿದ್ಯುತ್ ತಂತಿಗಳ ಮೇಲೆ ಮರ ಬಿದ್ದು ವಿದ್ಯುತ್ ಸಂಪರ್ಕ ಕೂಡ ಕಡಿತಗೊಂಡಿದೆ. ಇನ್ನು ಚಿಕ್ಕಮಗಳೂರು ತಾಲೂಕಿನ ಮಾಚೇನಹಳ್ಳಿ ಗ್ರಾಮದಲ್ಲೂ ಕೂಡ ಬೆಳಗಿನ ಜಾವ ಸುರಿದ ಧಾರಾಕಾರ ಮಳೆಯಿಂದಾಗಿ ಗ್ರಾಮೀಣ ಭಾಗದ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸೇತುವೆ ಮೇಲೆ ಮೂರರಿಂದ ನಾಲ್ಕು ಅಡಿಯಷ್ಟು ಎತ್ತರಕ್ಕೆ ನೀರು ಹರಿದಿದ್ದು ಜನಸಾಮಾನ್ಯರು ಪರದಾಡಿದ್ದಾರೆ. 

Dharwad: ಅರಣ್ಯ ಇಲಾಖೆಯಲ್ಲಿ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ!

ರೈತ ಸಮುದಾಯದಲ್ಲಿ ಸಂತಸ: ಚಿಕ್ಕಮಗಳೂರು ನಗರ ಸೇರಿದಂತೆ ತಾಲೂಕಿನ ಬಯಲುಸೀಮೆ ಭಾಗ ಕಳಸಾಪುರ ಹಾಗೂ ಬೆಳವಾಡಿ ಭಾಗದಲ್ಲೂ ಧಾರಾಕಾರ ಮಳೆಯಾಗಿದೆ. ಮಳೆ ಇಲ್ಲದೆ ಅಡಿಕೆ-ತೆಂಗು ಸೇರಿದಂತೆ ಆಹಾರ ಬೆಳೆಗಳು ಕೂಡ ಒಣಗಿ ನಿಂತಿದ್ದವು. ಕಳೆದೊಂದು ವಾರದಿಂದ ಮಲೆನಾಡು ಹಾಗೂ ಬಯಲು ಸೀಮೆ ಭಾಗದಲ್ಲಿ ಆಗಾಗ್ಗೆ ನಿರಂತರ ಮಳೆಯಾಗುತ್ತಿರುವುದರಿಂದ ರೈತ ಸಮುದಾಯದಲ್ಲಿ ಸಂತಸ ಮನೆ ಮಾಡಿದೆ.